ಶಿವಮೊಗ್ಗದಲ್ಲಿ ರೌಡಿ ಶೀಟರ್ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು
!ಸಂಜೆವಾಣಿ ವಾರ್ತೆ
ಶಿವಮೊಗ್ಗ, ಮಾ. 26: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲೆತ್ನಿಸಿದ ರೌಡಿ ಶೀಟರ್ ಓರ್ವನ ಕಾಲಿಗೆ ಪೊಲೀಸರು ಗುಂಡಿಕ್ಕಿ ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಮಲ್ಲಿಗೇನಹಳ್ಳಿ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಟಿಪ್ಪು ನಗರದ ಪರ್ವೀಜ್ ಯಾನೆ ಪರು (24) ಬಂಧಿತ ರೌಡಿ ಶೀಟರ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಹಾಗೂ ಈತನ ದಾಳಿಯಿಂದ ಗಾಯಗೊಂಡ ಪೊಲೀಸ್ ಪೇದೆ ನಾಗಪ್ಪ ಎಂಬುವರನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯು ಯುವಕನೋರ್ವನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 307 ರ ಅಡಿ ಕೇಸ್ ದಾಖಲಾಗಿತ್ತು. ಘಟನೆಯ ನಂತರ ತಲೆಮರೆಸಿಕೊಂಡಿದ್ದ ಆರೋಪಿಯು, ಮಲ್ಲಿಗೇನಹಳ್ಳಿಯಲ್ಲಿ ಅಡಗಿಕೊಂಡಿರುವ ಮಾಹಿತಿ ತುಂಗಾನಗರ ಠಾಣೆ ಪೊಲೀಸರಿಗೆ ಲಭ್ಯವಾಗಿತ್ತು.ಸ್ಥಳಕ್ಕೆ ತೆರಳಿ ಬಂಧನಕ್ಕೆ ಮುಂದಾದ ವೇಳೆ, ನಾಗಪ್ಪ ಎಂಬ ಪೊಲೀಸ್ ಸಿಬ್ಬಂದಿ ಮೇಲೆ ಆರೋಪಿ ಚಾಕುವಿನಿಂದ ಹಲ್ಲೆ ನಡೆಸಿ ಪಾರಿಯಾಗಲೆತ್ನಿಸಿದ್ದ. ತಕ್ಷಣವೇ ಸ್ಥಳದಲ್ಲಿದ್ದ ಇನ್ಸ್’ಪೆಕ್ಟರ್ ಸತ್ಯನಾರಾಯಣ ಅವರು ಆರೋಪಿ ಕಾಲಿಗೆ ಎರಡು ಸುತ್ತು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.
