ಎಸ್.ಎಸ್.ಎಲ್.ಸಿ. ಪರೀಕ್ಷೆ:29929 ವಿದ್ಯಾರ್ಥಿಗಳು
ಧಾರವಾಡ,ಮಾ.24: ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಜರುಗಲಿದ್ದು, 29,929 ವಿದ್ಯಾರ್ಥಿಗಳು ಜಿಲ್ಲೆಯ 101 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಬರೆಯಲ್ಲಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು, ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡಸಲು ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪರೀಕ್ಷೆ ಕೇಂದ್ರಗಳ ವಿವರ: ಧಾರವಾಡ ಶಹರದ 34, ಧಾರವಾಡ ಶಹರದ 16, ಧಾರವಾಡ ಗ್ರಾಮೀಣದ 14, ಹುಬ್ಬಳ್ಳಿ ಗ್ರಾಮೀಣದ 13, ಕಲಘಟಗಿಯ 8 ಕುಂದಗೋಳದ 7 ನವಲಗುಂದದ 9 ಪರೀಕ್ಷಾ ಕೇಂದ್ರಗಳು ಸೇರಿ ಒಟ್ಟು ಜಿಲ್ಲೆಯಾದ್ಯಂತ 101 ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಪ್ರತಿ ಕೊಠಡಿಗಳಿಗೆ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
ಜಿಲ್ಲಾ ಹಂತದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನದ ಮೇರೆಗೆ ಪ್ರತಿಯೊಂದು ತಾಲೂಕಿನ ಪರೀಕ್ಷಾ ಕೇಂದ್ರಗಳ ಪರೀಕ್ಷಾ ಕಾರ್ಯಗಳ ವೀಕ್ಷಣೆಗಾಗಿ ಉಪನಿರ್ದೇಶಕರ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಗ್ರೂಪ್ ಬಿ ವೃಂದದ ಅಧಿಕಾರಿಗಳನ್ನು ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿ ಆದೇಶಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪರೀಕ್ಷಾ ದಿನದಂದು ಜಿಲ್ಲಾಧಿಕಾರಿಗಳು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರದ ಪೆÇಲೀಸ್ ಆಯುಕ್ತರು ಸಿಆರ್.ಪಿಸಿ. ಸೆಕ್ಷನ್ 144 ಕಲಂ ನ್ನು ಜಾರಿಗೊಳಿಸಿ ಧಾರವಾಡ ಗ್ರಾಮೀಣ ಜಿಲ್ಲೆ ಹಾಗೂ ಮಹಾನಗರದ ಪರೀಕ್ಷಾ ಕೇಂದ್ರದಗಳ ಸುತ್ತ 200 ಮೀ ಅಂತರದಲ್ಲಿನ ಝರಾಕ್ಸ್ ಅಂಗಡಿಗಳನ್ನು ಮುಚ್ಚಲು ಆದೇಶಿಸಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆ ಪರೀಕ್ಷಾ ದಿನದಂದು ಪ್ರತಿ ಪರೀಕ್ಷಾ ಕೇಂದ್ರಗಳಿಗೆ ದಾದಿಯರನ್ನು ನೇಮಕಾತಿ ಮಾಡಿದೆ. ಜಿಲ್ಲೆಯ ಹೆಸ್ಕಾಂಗೆ ಪರೀಕ್ಷಾ ದಿನದಂದು ವಿದ್ಯುತ್ ನಿಲುಗಡೆಯಾಗದಂತೆ ಮುಂಜಾಗ್ರತೆ ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.
ಜಿಲ್ಲಾ ಜಾಗೃತದಳದ 3 ತಂಡಗಳನ್ನು ನೇಮಕ ಮಾಡಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಲಾಗಿದೆ.
ಹೋಳಿ ಹಬ್ಬದ ನಿಮಿತ್ಯ ಹುಬ್ಬಳ್ಳಿಯ ಕೆಲವೊಂದು ಪ್ರದೇಶಗಳಲ್ಲಿ ಪರೀಕ್ಷಾ ದಿನಗಳಂದು ಬಣ್ಣದ ಹಬ್ಬ ಇರುವದರಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ಮಕ್ಕಳಿಗೆ ತೊಂದರೆಯಾಗದಂತೆ ಕ್ರಮವಹಿಸಲು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ. ಗ್ರಾಮೀಣ ಪ್ರದೇಶ ಮತ್ತು ಇತರೆ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣಿಸುವ ಮಕ್ಕಳು ಪ್ರವೇಶ ಪತ್ರವನ್ನು ತೋರಿಸಿ ಉಚಿತ ಪ್ರಯಾಣ ಮಾಡಲು ಹುಬ್ಬಳ್ಳಿಯ ವಾ.ಕ.ರಾ.ರ. ಸಂಸ್ಥೆ ಅವಕಾಶ ನೀಡಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.