ಎರಡೂವರೆ ವರ್ಷಗಳ ಹಿಂದೆ ಕಳವುಗೈದು ಪರಾರಿಯಾಗಿದ್ದ ಆರೋಪಿ ಅರೆಸ್ಟ್
ಮಂಗಳೂರು-ಎರಡೂವರೆ ವರ್ಷಗಳ ಹಿಂದೆ ಮಂಗಳೂರಿನ ಕುಲಶೇಖರದ ಕಾಸ್ತಾಲಿನೊ ಕಾಲೋನಿ ಸೆಕ್ರೆಡ್ ಹಾರ್ಟ್ ಎಂಬಲ್ಲಿನ ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣದ ಆರೋಪಿಯನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳದ ಬೆಳ್ಮಣ್ ನಿವಾಸಿ ರೋಹಿತ್ ಮಥಾಯಿಸ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಮಥಾಯಿಸ್ ಮುಂಬೈಗೆ ಪರಾರಿಯಾಗಿದ್ದನು. ಬಂಧಿತ ಆರೋಪಿಯಿಂದ ೭ ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರ ಪ್ರಕಟನೆ ತಿಳಿಸಿದೆ.
೨೦೨೧ನೇ ಡಿಸೆಂಬರ್ ತಿಂಗಳಿನ ಮೊದಲನೇ ವಾರದಲ್ಲಿ ಕುಲಶೇಖರದ ಮಹಿಳೆಯೊಂದಿಗೆ ವಾಸಮಾಡಿಕೊಂಡಿದ್ದ ಆರೋಪಿ ರೋಹಿತ್ ಮಥಾಯಿಸ್ ಮನೆಯಲ್ಲಿದ್ದ ಚಿನ್ನಾಭರಣ ಮತ್ತು ನಗದು ಎಗರಿಸಿಕೊಂಡು ಪರಾರಿಯಾಗಿರುವುದಾಗಿ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿ ರೋಹಿತ್ ಮಥಾಯಿಸ್‌ನನ್ನು ಪೊಲೀಸರು ದಸ್ತಗಿರಿ ಮಾಡಿ ಆತನಿಂದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ೨೦೧೯ರಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಣ್ಮಣ್ ಎಂಬಲ್ಲಿ ಹಣ ಮತ್ತು ಚಿನ್ನಾಭರಣಗಳ ಆಸೆ ಗಾಗಿ ತನ್ನ ನೆರೆಮನೆಯ ನಿವೃತ್ತ ಪಿಡಿಒ ಭರತಲಕ್ಷ್ಮೀ ಎಂಬವರನ್ನು ಕೊಲೆಗೈದ ಪ್ರಕರಣದಲ್ಲಿ ರೋಹಿತ್ ಮಥಾಯಿಸ್ ಆರೋಪಿಯಾಗಿದ್ದನು.
ಮಹಿಳೆಯನ್ನು ಕೊಲೆಗೈದು ಕಲ್ಯಾದ ಬಾವಿಯೊಂದರಲ್ಲಿ ಪ್ಲಾಸ್ಟಿಕ್‌ನಲ್ಲಿ ಸುತ್ತಿ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಥಾಯಿಸ್ ಬಂಧಿತನಾಗಿ ಜೈಲುವಾಸ ಅನುಭವಿಸಿ ಹೊರಬಂದಿದ್ದನು. ನಂತರ ಪ್ರಕರಣದ ವಿಚಾರಣೆಗೆ ಸಿಗದೇ ೨ ವರ್ಷಗಳಿಂದ ತಲೆಮರೆಸಿಕೊಂಡಿದ್ದನು ಎನ್ನಲಾಗಿದೆ. ಚಿನ್ನಾಭರಣಗಳನ್ನು ಕಳವುಗೈದು ಮುಂಬೈಗೆ ಪರಾರಿಯಾಗಿದ್ದ ಆರೋಪಿಯು ಮುಂಬೈನಿಂದ ಮಂಗಳೂರಿಗೆ ಬಂದಿರುವ ಮಾಹಿತಿ ಆಧಾರದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು.