ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಿ : ಜಿಪಂ ಸಿಇಒ ರಿಶಿ ಆನಂದ
ಸಂಜೆವಾಣಿ ವಾರ್ತೆ,
ವಿಜಯಪುರ, ಮಾ.19: ಲೋಕಸಭೆ ಚುನಾವಣೆಗಾಗಿ ಜಿಲ್ಲೆಯಲ್ಲಿ ಮತದಾನದ ಶೇಕಡವಾರು ಪ್ರಮಾಣ ಹೆಚ್ಚಿಸಲು ಮತದಾನ ಜಾಗೃತಿಯ ವಿವಿಧ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ರಿಶಿ ಆನಂದ ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮತದಾನವನ್ನು ಪಾರದರ್ಶಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸುವಂತೆ ಮತ್ತು ಮತದಾನದ ಪ್ರಾಮುಖ್ಯತೆಯನ್ನು ಅರಿಯುವಂತೆ ಮಾಡಲು ಸ್ವೀಪ್ ಸಮಿತಿ ಕಾರ್ಯನ್ಮೋಖವಾಗಬೇಕು. ಕಡಿಮೆ ಮತದಾನ ಆಗಿರುವ ಬೂತ್‍ಗಳನ್ನು ಗುರುತಿಸಿ ಮತದಾನ ಪ್ರಮಾಣ ಹೆಚ್ಚಳ ಮಾಡುವಂತೆ ಎಲ್ಲಾ ಇಲಾಖೆಯ ಅಧಿಕಾರಿಗಳು ಆದ್ಯತೆ ನೀಡಿ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ದುಡಿಯಲು ಬೇರೆ ಜಿಲ್ಲೆ, ರಾಜ್ಯಕ್ಕೆ ವಲಸೆ ಹೋಗಿರುವವರನ್ನು ಗುರುತಿಸಿ ಅವರು ಕೂಡಾ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೇರೇಪಿಸಬೇಕು ಎಂದರು.
ಆಸ್ಪತ್ರೆ, ಬಸ್ ನಿಲ್ದಾಣ, ಶಾಲಾ-ಕಾಲೇಜು ಸಾರ್ವಜನಿಕ ಸ್ಥಳಗಳಲ್ಲಿ ಮತದಾನದ ಮಹತ್ವ ಸಾರುವ ಭಿತ್ತಿಪತ್ರ ಪ್ರದರ್ಶಿಸಬೇಕು. ಮತದಾನದ ಪ್ರಮಾಣ ಗಣನೀಯವಾಗಿ ಹೆಚ್ಚಿಸಲು ಸಾರ್ವಜನಿಕರಿಗೆ ಮತದಾನದ ಮಹತ್ವ ತಿಳಿಸಲು ರಂಗೋಲಿ ಸ್ಪರ್ಧೆ, ಸೈಕಲ್ ಜಾಥಾ, ಪ್ರಬಂಧ ಸ್ಪರ್ದೆ, ಚಿತ್ರಕಲೆ ಸ್ಪರ್ಧೆ, ಶಾಲಾ ಮಕ್ಕಳಿಂದ ಜಾಗೃತಿ ಜಾಥಾ, ಹಾಸ್ಟೇಲ್,ಸಾಕ್ಷ್ಯಚಿತ್ರ, ಶಾಲಾ ಮಕ್ಕಳಿಂದ ನಾಟಕ ಪ್ರದರ್ಶನ, ಸ್ವ ಸಹಾಯ ಸಂಘಗಳ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ, ವಿವಿ ಪ್ಯಾಟ್‍ಗಳ ಬಗ್ಗೆ ತಿಳುವಳಿಕೆ ಮೂಡಿಸುವಿಕೆಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ವಯಸ್ಸಾದ ಹಿರಿಯ ನಾಗರೀಕರಿಗೆ ಹಾಗೂ ವಿಕಲಚೇತನರಿಗೆ ಮತಗಟ್ಟೆಗೆ ತೆರಳಿ ಮತ ಹಾಕಲು ವೀಲ್‍ಚೇರ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಮತದರಾರು ಮತದಾನ ಪ್ರಕ್ರಿಯೆಯಿಂದ ವಂಚಿತರಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಯೋಜನಾ ನಿರ್ದೇಶಕ ಸಿ. ಆರ್, ಮುಂಡರಗಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.