ಆರೋಗ್ಯ ಸೇವೆಗಳು ಸಾರ್ವಜನಿಕರಿಗೆ ತಲುಪಲು ಮಾಧ್ಯಮಗಳ ಸಹಕಾರ ಅಗತ್ಯ: ಡಾ.ಬಸರೆಡ್ಡಿ
ಬಳ್ಳಾರಿ,ಮಾ.17: ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಳ್ಳಲಾಗುವ ಕಾರ್ಯಕ್ರಮಗಳು, ಸೌಲಭ್ಯಗಳು ಮತ್ತು ಆರೋಗ್ಯ ಜಾಗೃತಿ ಸಂದೇಶಗಳ ಕುರಿತು ಸಾರ್ವಜನಿಕರಿಗೆ ತಲುಪಿಸಲು ಮಾಧ್ಯಮಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನಗರದ ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ ಹಾಲ್‍ನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಪರಿಚಯ ಮತ್ತು ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ, ತುರ್ತು ಸಂದರ್ಭಗಳಲ್ಲಿಯೂ ಜಿಲ್ಲಾ ಆರೋಗ್ಯ ಇಲಾಖೆಯು ಉತ್ತಮ ಸೇವೆ ನೀಡುತ್ತಿದೆ. ಲಸಿಕಾ ಕಾರ್ಯಕ್ರಮಗಳೂ ಅತ್ಯುತ್ತಮ ರೀತಿಯಲ್ಲಿ ಒದಗಿಸಲಾಗುತ್ತಿದ್ದು, ಮಾರಕ ರೋಗಗಳನ್ನು ತಡೆಗಟ್ಟಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಹೆರಿಗೆ ಪ್ರಕರಣಗಳು ಜಿಲ್ಲಾ ಆಸ್ಪತ್ರೆ ಮತ್ತು ವಿಮ್ಸ್ ಆಸ್ಪತ್ರೆಯಲ್ಲಿ ಹೆಚ್ಚು ಆಗುತ್ತಿರುವುದರಿಂದ, ಶಿಶು ಮತ್ತು ತಾಯಿ ಮರಣವನ್ನು ನಿಯಂತ್ರಿಸಲು ಸಹಕಾರಿಯಾಗುತ್ತಿದೆ ಎಂದು ತಿಳಿಸಿದರು.
ಕಡುಬಡವರಿಗೆ ಗುಣ ಮಟ್ಟದ ಆರೋಗ್ಯ ಸೇವೆಗಳನ್ನು ಸ್ಥಳೀಯವಾಗಿ ದೊರಕಿಸಿ ಹೆಚ್ಚಿನ ಚಿಕಿತ್ಸೆಗೆ ದೂರದೂರಿಗೆ ರೋಗಿಗಳನ್ನು ಕಳುಹಿಸುವುದನ್ನು ತಪ್ಪಿಸಲು ಇತ್ತೀಚೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಟೆಲಿಐಸಿಯು ಹಬ್ ಆರಂಭಿಸಲಾಗಿದೆ ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿ ಯಾವುದೇ ಆರೋಗ್ಯ ಸೇವೆಗಳು, ಸೌಲಭ್ಯಗಳು ಹಾಗೂ ಇತರೆ ಕುಂದು ಕೊರತೆಗಳು ಕಂಡು ಬಂದಲ್ಲಿ ಸಂಬಂಧಿಸಿದ ವಿಭಾಗದ ಅಧಿಕಾರಿಗಳಿಗೆ ಸಂಪರ್ಕಿಸಬಹುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ಸಲಹೆ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಒಟ್ಟು 27 ಆರೋಗ್ಯ ಕಾರ್ಯಕ್ರಮಗಳ ವಿಭಾಗಗಳಿವೆ. ಒಂದೊಂದು ಕಾರ್ಯಕ್ರಮ ಕುರಿತು ವಿಶೇಷ ವರದಿ ಮಾಡಲು ಅಗತ್ಯ ಮಾಹಿತಿ ಒದಗಿಸಲಾಗುವುದು. ವರದಿಯು ಸಕಾರಾತ್ಮಕವಾಗಿರಲಿ ಅಥವಾ ನಕಾರಾತ್ಮಕವಾಗಿರಲಿ ಅವುಗಳನ್ನು ಪರಿಗಣಿಸಿ, ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಕಾರ್ಯಕ್ರಮಗಳ ಕುರಿತು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುವುದು ಎಂದರು.
ಜಿಲ್ಲೆ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಆರೋಗ್ಯ ಸೇವೆಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಮಾಧ್ಯಮ ಪ್ರತಿನಿಧಿಗಳು ಹೆಚ್ಚಿನ ರೀತಿಯಲ್ಲಿ ಪ್ರಚಾರ ನೀಡಬೇಕು ಎಂದು ಕೋರಿದರು.
ತಾಯಿ-ಶಿಶು ಮರಣ ತಪ್ಪಿಸಲು ಗಂಡಾಂತರ ಗರ್ಭಿಣಿಯರ ನಿಗಾವಹಿಸಲು ಗ್ರಾಮ ಮಟ್ಟದಲ್ಲಿಯೂ ವೈದ್ಯರನ್ನೊಳಗೊಂಡಂತೆ ಮೊಬೈಲ್ ಮೂಲಕ ವ್ಯಾಟ್ಸ್‍ಆಪ್ ಗ್ರೂಪ್ ರಚಿಸಲಾಗಿದೆ. ಈ ಮೂಲಕ ಆಯಾ ಗ್ರಾಮಗಳ ಗರ್ಭಿಣಿಯರ ಸ್ಥಿತಿ-ಗತಿ ಚಲನ-ವಲನಗಳ ಬಗ್ಗೆ ಕಾಳಜಿ ವಹಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನೊಳಗೊಂಡಂತಹ ಕಿರುಹೊತ್ತಿಗೆ ಮತ್ತು ವಿಶ್ವ ಗ್ಲಾಕೋಮಾ ಸಪ್ತಾಹ ಭಿತ್ತಿಪತ್ರ ಬಿಡುಗಡೆಗೊಳಿಸಿದರು.
ಕಾರ್ಯಾಗಾರದಲ್ಲಿ ಗ್ಲಾಕೋಮಾ, ಮಾನಸಿಕ ಆರೋಗ್ಯ,  ಕ್ಷಯರೋಗ ನಿರ್ಮೂಲನೆ, ಹೆಚ್‍ಐವಿ ಸೇರಿದಂತೆ ಇತರೆ ಕಾರ್ಯಕ್ರಮಗಳ ಕುರಿತು ಸಂಬಂಧಿಸಿದ ವೈದ್ಯಾಧಿಕಾರಿಗಳು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್, ಜಿಲ್ಲಾ ಆಸ್ಪತ್ರೆಯ ಶುಶುಷ್ರಣಾಧಿಕಾರಿ ಡಾ.ವಿಮಲಾಕ್ಷಿ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು, ಜಿಲ್ಲಾ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳು, ಇನ್ನಿತರರು ಉಪಸ್ಥಿತರಿದ್ದರು.