ಅಗತ್ಯ ಸೇವೆಯಲ್ಲಿರುವವರಿಗೆ ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನಕ್ಕೆ ಅವಕಾಶ
ಸಂಜೆವಾಣಿ ವಾರ್ತೆ
ಚಿತ್ರದುರ್ಗ ಮಾ.೧೩:ಪ್ರಸಕ್ತ ಲೋಕಸಭೆ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗಿರುವ ವಿವಿಧ ಕ್ಷೇತ್ರಗಳ ಅಧಿಕಾರಿ, ಸಿಬ್ಬಂದಿಗಳು ಮತದಾನದಿಂದ ವಂಚಿತರಾಗದಂತೆ ಚುನಾವಣಾ ಆಯೋಗ, ಇವರಿಗೆ ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ಹೇಳಿದರು.ಪೋಸ್ಟಲ್ ಬ್ಯಾಲಟ್ ನಲ್ಲಿ ಮತದಾನ ಮಾಡುವುದಕ್ಕೆ ಸಂಬಂಧಿಸಿದಂತೆ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ  ಏರ್ಪಡಿಸಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಮತದಾನದ ಮಹತ್ವ ಕುರಿತು ಸ್ವೀಪ್ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.  ಹೀಗಾಗಿ ಮತದಾನದ ದಿನದಂದು ತಮ್ಮ ಕರ್ತವ್ಯದ ಕಾರಣದಿಂದಾಗಿ ಯಾರೊಬ್ಬ ಅರ್ಹ ಮತದಾರನೂ ಕೂಡ ಮತದಾನದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ ಚುನಾವಣಾ ಆಯೋಗವು ಅಗತ್ಯ ಸೇವೆಯಲ್ಲಿ ಕರ್ತವ್ಯ ನಿರತರಾಗುವ ಬೆಸ್ಕಾಂ, ಬಿಎಸ್‍ಎನ್‍ಎಲ್, ರೈಲ್ವೆ, ದೂರದರ್ಶನ, ಆಕಾಶವಾಣಿ, ಆರೋಗ್ಯ ಇಲಾಖೆ, ವಿಮಾನಯಾನ, ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆಗಳ ನೌಕರರು, ಅಗ್ನಿಶಾಮಕ ಸೇವೆ, ಮಾನ್ಯತೆ ಹೊಂದಿರುವ ಪತ್ರಕರ್ತರು, ಟ್ರಾಫಿಕ್ ಪೊಲೀಸ್, ಆಂಬುಲೆನ್ಸ್ ಸೇವೆಯಲ್ಲಿರುವರು, ಕಾರಾಗೃಹ, ಕಂಟ್ರೋಲ್ ರೂಂ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ಹಾಗೂ ಗ್ರಾಮಾಂತರ ಮತ್ತು ನಗರ ಕುಡಿಯುವ ನೀರು ಸರಬರಾಜು ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಕಾರಣದಿಂದಾಗಿ ಮತದಾನದ ದಿನದಂದು ಮತ ಚಲಾಯಿಸಲು ಸಾಧ್ಯವಾಗದ ಸಂದರ್ಭ ಬರಬಹುದಾದ ನೌಕರರಿಗೆ ಮತದಾನ ದಿನದ ಬದಲಿಗೆ ಮತದಾನ ದಿನಕ್ಕೂ ಪೂರ್ವದಲ್ಲಿಯೇ ಫೆಸಿಲಿಟೇಶನ್ ಸೆಂಟರ್‍ನಲ್ಲಿ ಅಥವಾ ಪೋಸ್ಟಲ್ ಬ್ಯಾಲಟ್ ಮೂಲಕ ಮತದಾನ ಮಾಡುವಂತಹ ಅವಕಾಶವನ್ನು ಬಳಸಬಹುದಾಗಿದೆ. ಮೇಲೆ ತಿಳಿಸಿದ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ಫೆಸಿಲಿಟೇಶನ್ ಸೆಂಟರ್‍ನಲ್ಲಿ ಮತದಾನ ಮಾಡಲು ಹಾಗೂ ಪೋಸ್ಟಲ್ ಬ್ಯಾಲಟ್ ಮತದಾನದ ಸೇವೆ ಪಡೆಯಲು, ಸಂಬಂಧಪಟ್ಟ ಇಲಾಖೆಯಿಂದ ನಮೂನೆ 12ಡಿ ನಮೂನೆಯನ್ನು ಪಡೆದು, ಸ್ವೀಕೃತಿ ನೀಡಬೇಕು.  ಬಳಿಕ ಭರ್ತಿ ಮಾಡಿದ ನಮೂನೆಯನ್ನು ಸಂಬಂಧಪಟ್ಟ ಕ್ಷೇತ್ರಕ್ಕೆ ನಿಗದಿಪಡಿಸಲಾಗಿರುವ ನೋಡಲ್ ಅಧಿಕಾರಿಗಳಿಗೆ ಆಯಾ ಇಲಾಖಾ ಅಧಿಕಾರಿಗಳು ಸಲ್ಲಿಸಬೇಕು.  12 ಡಿ ನಮೂನೆಯನ್ನು ಒಮ್ಮೆ ಸಲ್ಲಿಸಿದ ಬಳಿಕ, ಅಂತಹವರು, ಫೆಸಿಲಿಟೇಶನ್ ಸೆಂಟರ್‍ನಲ್ಲಿ ಅಥವಾ ಪೋಸ್ಟಲ್ ಬ್ಯಾಲಟ್ ಮೂಲಕವೇ ಮತದಾನ ಮಾಡಬೇಕು, ಮತದಾನ ದಿನದಂದು ಮತಗಟ್ಟೆಗೆ ತೆರಳಿ ಮತದಾನ ಮಾಡಲು ಅವಕಾಶ ಇರುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಹೇಳಿದರು.  ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಅಧೀನದಲ್ಲಿ ಬರುವಂತಹ ಅಗತ್ಯ ಸೇವೆಗಳ ಸಿಬ್ಬಂದಿಗಳ ವಿವರವನ್ನು ಕೂಡಲೆ ನೋಡಲ್ ಅಧಿಕಾರಿಗಳಿಗೆ ಸಲ್ಲಿಸುವಂತೆ ಸೂಚನೆ ನೀಡಿದರು.ಮತದಾನ ಕೇಂದ್ರಕ್ಕೆ ತೆರಳಿ ಮತ ಚಲಾಯಿಸಲು ತೊಂದರೆ ಇರುವಂತಹ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಪಟ್ಟ ವಯೋವೃದ್ಧರು ಕೂಡ ಮತದಾನದಿಂದ ವಂಚಿತರಾಗಬಾರದು ಎಂಬ ಸದುದ್ದೇಶದಿಂದ, ಅವರ ಮನೆ ಮನೆಗೆ ತೆರಳಿ, ಮತದಾನ ಪಡೆಯಲು ವ್ಯವಸ್ಥೆ ಮಾಡಲಾಗಿದ್ದು, ಇದಕ್ಕೆ ಸಂಬಂಧಿಸಿದ ನಿಗದಿತ ನಮೂನೆಯನ್ನು ಆಯಾ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ತಲುಪಿಸಿ, ಮತದಾನ ದಿನಕ್ಕೂ ಪೂರ್ವದಲ್ಲಿಯೇ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಪಟ್ಟ ವಯೋವೃದ್ಧರ ಮನೆ ಮನೆಗೆ ಚುನಾವಣಾ ಸಿಬ್ಬಂದಿ ತೆರಳಿ, ಮತದಾನ ಪಡೆಯುವರು ಎಂದು ಅಪರ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.ಅಗತ್ಯ ಸೇವೆಗಳಡಿ ಬರುವಂತಹ ಇಲಾಖೆಗಳಿಂದ ಅಗತ್ಯ ಮಾಹಿತಿಯನ್ನು ಪಡೆದು, ಅವರ ಮತದಾನಕ್ಕೆ ಪೂರಕ ವ್ಯವಸ್ಥೆ ಕಲ್ಪಿಸುವಲ್ಲಿ, ಅಧಿಕಾರಿಗಳು ಯಾವುದೇ ನಿರ್ಲಕ್ಷ್ಯ ತೋರುವಂತಿಲ್ಲ ಎಂದು ಅಪರ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.ಸಭೆಯಲ್ಲಿ ಬ್ಯಾಲಟ್ ನೋಡಲ್ ಅಧಿಕಾರಿಯಾದ ರೇಷ್ಮೆ ಇಲಾಖೆ ಉಪನಿರ್ದೇಶಕ ಎಂ.ಬಿ. ಬೀರಲದಿನ್ನಿ, ಡಿಹೆಚ್‍ಒ ಡಾ. ರೇಣುಪ್ರಸಾದ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಬಸವನಗೌಡ ಪಾಟೀಲ್, ಚುನಾವಣಾ ಶಾಖೆಯ ಮಲ್ಲಿಕಾರ್ಜುನ್ ಸೇರಿದಂತೆ ರೈಲ್ವೆ, ಆಕಾಶವಾಣಿ, ಅಗ್ನಿಶಾಮಕ, ಕೆಎಸ್‍ಆರ್‍ಟಿಸಿ, ಟ್ರಾಫಿಕ್ ಪೊಲೀಸ್, ಬೆಸ್ಕಾಂ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.