ಮಾ.12ರಂದು ಸಿಎಂ ಸಮ್ಮುಖದಲ್ಲಿ ಫಲಾನುಭವಿಗಳ ಸಮಾವೇಶ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮಾ.09:- ಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವು ಇದೇ ಮಾರ್ಚ್ 12ರಂದು ನಗರದಲ್ಲಿ ಏರ್ಪಾಡಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ವಿವಿಧ ಜವಾಬ್ದಾರಿಯನ್ನು ನೀಡಲಾಗಿದ್ದು, ಅಚ್ಚುಕಟ್ಟಾಗಿ ಎಲ್ಲಾ ಕಾರ್ಯವನ್ನು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಿಗದಿಯಾಗಿದೆ. ಎಲ್ಲಾ ಗ್ರಾಮ ಪಂಚಾಯಿತಿಗಳಿಂದ ಫಲಾನುಭವಿಗಳನ್ನು ಕರೆತಂದು ಕಾರ್ಯಕ್ರಮ ಮುಗಿದ ಬಳಿಕ ಕರೆದೊಯ್ಯುವ ಜವಾಬ್ದಾರಿಯನ್ನು ಅಧಿಕಾರಿಗಳು ನಿರ್ವಹಿಸಬೇಕು. ಇದಕ್ಕಾಗಿ ಹೋಬಳಿ, ತಾಲೂಕು ಮಟ್ಟದಲ್ಲಿಯೂ ಅಧಿಕಾರಿಗಳನ್ನು ನಿಯೋಜಿಸಿ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಸಮಾವೇಶಕ್ಕಾಗಿ ಬಸ್ಸುಗಳ ವ್ಯವಸ್ಥೆ, ವೇದಿಕೆ, ಧ್ವನಿವರ್ಧಕ, ಜನರೇಟರ್, ಎಲ್.ಇ.ಡಿ ಸ್ಕ್ರೀನ್ ಅಳವಡಿಕೆ, ಆಹ್ವಾನ ಪತ್ರಿಕೆ ವಿತರಣೆ, ಕಾರ್ಯಕ್ರಮದ ಸ್ಥಳದಲ್ಲಿ ಮೊಬೈಲ್ ಶೌಚಾಲಯ, ವಾಹನಗಳ ನಿಲುಗಡೆಗೆ ಸ್ಥಳ ನಿಗದಿ ಸೇರಿದಂತೆ ಇನ್ನಿತರ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದರು.
ಸರ್ಕಾರದ ಮಹತ್ವದ ಯೋಜನೆಗಳನ್ನು ಬಿಂಬಿಸುವ ಸ್ಟಾಲ್‍ಗಳ ನಿರ್ಮಾಣ, ಸಮಾವೇಶದಲ್ಲಿ ಫಲಾನುಭವಿಗಳಿಂದ ಗ್ಯಾರಂಟಿ ಯೋಜನೆಗಳ ಅನಿಸಿಕೆಗೆ ಅವಕಾಶ ಮಾಡಿಕೊಡುವುದು, ಕಾನೂನು ಸುವ್ಯವಸ್ಥೆ, ಇನ್ನಿತರ ಸೂಕ್ತ ಕ್ರಮಗಳಿಗೆ ಅಧಿಕಾರಿಗಳು ಮುಂದಾಗುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಅತ್ಯಂತ ಶಿಸ್ತು ಬದ್ದವಾಗಿ ಕಾರ್ಯಕ್ರಮ ರೂಪುಗೊಳಿಸಬೇಕು. ಯಾವುದೇ ಲೋಪಗಳಿಗೆ ಆಸ್ಪದವಾಗಬಾರದು. ಯಶಸ್ವಿಯಾಗಿ ಸಮಾವೇಶ ನಡೆಯಲು ಕಾಲಕಾಲಕ್ಕೆ ನೀಡುವ ಸೂಚನೆಗಳನ್ನು ಅಧಿಕಾರಿಗಳು ಪಾಲನೆ ಮಾಡಬೇಕು ಈಗಾಗಲೇ ನಿಡಲಾಗಿರುವ ಜವಾಬ್ದಾರಿ ಅನುಸಾರ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಮಾತನಾಡಿ ಕಳೆದ ಜನವರಿಯಲ್ಲಿ ಕೊಳ್ಳೇಗಾಲದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮೇಳ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಮುಖ್ಯಮಂತ್ರಿಗಳ ಚಾಮರಾಜನಗರ ಕಾರ್ಯಕ್ರಮವು ಪರಿಪೂರ್ಣ ಸಿದ್ದತೆಯೊಂದಿಗೆ ಇನ್ನೂ ಅಚ್ಚುಕಟ್ಟಾಗಿ ನಡೆಯಬೇಕು. ಫಲಾನುಭವಿಗಳು ಸಮಾವೇಶವಾದ್ದರಿಂದ ಜಿಲ್ಲೆಯ ವಿವಿಧ ಭಾಗಗಳಿಂದ ಹೆಚ್ಚು ಜನರು ಬರುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಪೂರಕವಾಗಿರುವ ವ್ಯವಸ್ಥೆಗಳನ್ನು ಮಾಡಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವಿಭಾಗಾಧಿಕಾರಿ ಎಂ. ಶಿವಮೂರ್ತಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪಿ. ಲಕ್ಷ್ಮೀ, ತಹಶೀಲ್ದಾರರಾದ ಬಸವರಾಜು, ಮಂಜುಳಾ, ರಮೇಶ್ ಬಾಬು, ಕೆ.ಎಸ್.ಆರ್.ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಕುಮಾರ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ವಸಂತ್ ಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್, ಜಿಲ್ಲಾ ಉದ್ಯೋಗಾಧಿಕಾರಿ ಎ. ಮಹಮ್ಮದ್ ಅಕ್ಬರ್, ಡಿವೈಎಸ್‍ಪಿ ಲಕ್ಷ್ಮಯ್ಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಆರ್. ಶಿವಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.