ಅರಕೇರಿ ಏತ ನೀರಾವರಿ ಯೋಜನೆಯಿಂದಲೂ ಭೂತನಾಳ ಕೆರೆಗೆ ನೀರು: ಸಚಿವ ಎಂ.ಬಿ. ಪಾಟೀಲ
ಸಂಜೆವಾಣಿ ವಾರ್ತೆ,
ವಿಜಯಪುರ, ಮಾ.1: ನಗರಕ್ಕೆ ನೀರು ಪೂರೈಸುವ ಭೂತನಾಳ ಕೆರೆಗೆ ಮತ್ತಷ್ಟು ನೀರು ಹರಿಸಲಾಗುತ್ತಿದ್ದು, ಅರಕೇರಿ ಏತ ನೀರಾವರಿ ಮೂಲಕವೂ ಇಂದಿನಿಂದ ನೀರು ಬಿಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಿಜಯಪುರದ ಜೀವನಾಡಿ ಭೂತನಾಳ ಕೆರೆಯು ಬರಗಾಲದಿಂದ ಬತ್ತಿ ಹೋಗುತ್ತಿದ್ದು, ನಗರದಲ್ಲಿ ಕುಡಿಯುವ ನೀರಿನ ತೊಂದರೆ ಎದುರಾಗಿತ್ತು. ಈ ಸಮಸ್ಯೆ ನಿವಾರಿಸುವ ಸಲುವಾಗಿ ಮುಳವಾಡ ಏತ ನೀರಾವರಿ ಯೋಜನೆಯಡಿ ನಿರ್ಮಾಣವಾದ ತಿಡಗುಂದಿ ಆಕ್ವಾಡಕ್ಟ್ ಮೂಲಕ ಭೂತನಾಳ ಕೆರೆಗೆ ಕೃಷ್ಣಾನದಿ ನೀರು ತುಂಬಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದ್ದು, ಅಧಿಕಾರಿಗಳು ಈಗಾಗಲೇ ಭೂತನಾಳ ಕೆರೆಗೆ ನೀರು ಹರಿಸುತ್ತಿದ್ದಾರೆ.
ಈಗ ಪೂರ್ಣ ಪ್ರಮಾಣದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ದೃಷ್ಟಿಯಿಂದ ಅರಕೇರಿ ಏತ ನೀರಾವರಿ ಮೂಲಕ ನೀರು ಹರಿಸುವಂತೆ ಸೂಚಿಸಿದ್ದೇನೆ. ಅದರಂತೆ, ಕೆರೆಯ ಮತ್ತೊಂದು ಭಾಗಕ್ಕೆ ಇಂದಿನಿಂದ ನೀರು ಹರಿಸಲಾಗುತ್ತಿದೆ. ವಿದ್ಯುತ್ ಮೋಟಾರ್ ಗಳನ್ನು ಬಳಸದೆ ನೈಸರ್ಗಿಕವಾಗಿ ನೀರು ಹರಿದು ಬರುವಂತೆ ವ್ಯವಸ್ಥೆ ಮಾಡಲಾಗಿದ್ದು, ಭೂತನಾಳ ಕೆರೆಯಲ್ಲಿ ಸಾಕಷ್ಟು ನೀರಿನ ಸಂಗ್ರಹವಾಗಲಿದೆ. ಹೀಗಾಗಿ ಈ ಬಾರಿಯ ಬೇಸಿಗೆಗೆ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದು ಎಂಬ ವಿಶ್ವಾಸ ನನಗಿದೆ ಎಂದಿದ್ದಾರೆ.
ಈಗ ಭೂತನಾಳ ಕೆರೆಗೆ ನೀರು ತುಂಬಿಸಲಾಗುತ್ತಿರುವುದರಿಂದ ಮುಂದಿನ ಮೂರು ತಿಂಗಳು ಬೇಸಿಗೆಯಲ್ಲಿ ಕುಡಿಯಲು ನೀರಿನ ಸಮಸ್ಯೆ ಆಗುವುದಿಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.