ಮಾ.೨೯ ಕ್ಕೆ ಕೆಆರ್ಎಸ್ ಜನಜಾಗೃತಿ ಬೈಕ್ ಜಾಥಾ ಆಗಮನ

ಸಂಜೆವಾಣಿ ವಾರ್ತೆ
ದಾವಣಗೆರೆ.ಫೆ.27: ಭ್ರಷ್ಟಾಚಾರ, ಸ್ವಜನಪಕ್ಷಪಾತ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ನಿರಂತರವಾಗಿ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳನ್ನು ತಿರಸ್ಕರಿಸಿ ಮತ್ತು ರಾಜ್ಯದ ಏಕೈಕ ಪ್ರಾಮಾಣಿಕ ಮತ್ತು ಪ್ರಾದೇಶಿಕ ಪಕ್ಷವಾದ ಕರ್ನಾಟಕ ರಾಜ್ಯ ಸಮಿತಿ ಪಕ್ಷವನ್ನು ಬೆಂಬಲಿಸಿ ಎಂದು ರಾಜ್ಯದ ಜನರನ್ನು ಕೋರಲು ಹಾಗೂ ಸ್ವಚ್ಚ, ಪ್ರಾಮಾಣಿಕ, ಜನಪರ, ಪ್ರಾದೇಶಿಕ ರಾಜಕಾರಣದ ಕುರಿತು ಜನಜಾಗೃತಿ ಮೂಡಿಸಲು ಇದೇ 29ಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಕರ್ನಾಟಕಕ್ಕಾಗಿನಾವು ಎನ್ನುವ ಹೆಸರಿನಲ್ಲಿ ರಾಜ್ಯವ್ಯಾಪಿ ಬೈಕ್ ಜಾಥಾ ಹಮ್ಮಿಕೊಂಡಿದೆ.ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾತನಾಡಿದ ದಾವಣಗೆರೆ ಜಿಲ್ಲಾಧ್ಯಕ್ಷ ಡೋಣಿಹಳ್ಳಿ ಮಂಜುನಾಥ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಿಂದ ಆರಂಭವಾಗಿರುವ ಈ ಜಾಥಾದ ನೇತೃತ್ವವನ್ನು ಕೆ ಆರ್ ಎಸ್ ಪಕ್ಷದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ವಹಿಸಿದ್ದು, 19ರಂದು ಆರಂಭ ಆಗಿರುವ ಜಾಥಾವು ಮಾರ್ಚ್ 2ರವರೆಗೆ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಸಂಚರಿಸಲಿದೆ. 29 ಜಿಲ್ಲಾ ಕೇಂದ್ರಗಳು ಮತ್ತು 50ಕ್ಕೂ ಹೆಚ್ಚು ತಾಲ್ಲೂಕು ಕೇಂದ್ರಗಳು ಸೇರಿದಂತೆ ಸುಮಾರು 82 ಪಟ್ಟಣ, ನಗರಗಳಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಮಾರ್ಚ್ 2ರಂದು ನೆಲಮಂಗಲದಲ್ಲಿ ಬೃಹತ್ ಸಮಾರೋಪ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.ಮುಂದಿನ ಒಂದೆರಡು ತಿಂಗಳಿನಲ್ಲಿ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಪಕ್ಷವು ಸ್ಪರ್ಧಿಸಲಿದೆ. ಹಾಗೆಯೇ ಜುಲೈ-ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಸಹ ಪಕ್ಷವು ಸ್ಪರ್ಧಿಸಲಿದ್ದು, ಪಕ್ಷದ ವತಿಯಿಂದ ಈ ಚುನಾವಣೆಗಳಲ್ಲಿ ಸ್ಪರ್ಧಿಸಲು ಪ್ರಾಮಾಣಿಕ ಮತ್ತು ನ್ಯಾಯಪರ ವ್ಯಕ್ತಿಗಳಿಗೆ ಮುಕ್ತ ಆಹ್ವಾನ ನೀಡುತ್ತಿದೆ. ಅಂತಹ ವ್ಯಕ್ತಿಗಳನ್ನು ಪಕ್ಷಕ್ಕೆ ಸ್ವಾಗತಿಸುವ, ಸೇರ್ಪಡೆ ಮಾಡುವ ಕಾರ್ಯಕ್ರಮಗಳನ್ನು ಸಹ ಈ ಜಾಥಾ ಸಂದರ್ಭದಲ್ಲಿ ಮಾಡಲಿದೆ ಎಂದು ಹೇಳಿದರು.ಬೈಕ್ ಜಾಥಾವು ದಾವಣಗೆರೆ ಜಿಲ್ಲೆಗೆ 28ಕ್ಕೆ ಪ್ರವೇಶಿಸಲಿದ್ದು, ಅಂದು ಹರಿಹರದಲ್ಲಿ ಮತ್ತು 29ಕ್ಕೆ‌ ಗುರುವಾರದಂದು ಜಿಲ್ಲೆಯ ದಾವಣಗೆರೆ ಮತ್ತು ಚನ್ನಗಿರಿ ಪಟ್ಟಣಗಳ ಮೂಲಕ ಜಾಥಾ ಸಾಗಲಿದೆ. ಜಿಲ್ಲಾ ಕೇಂದ್ರವಾದ ದಾವಣಗೆರೆ ನಗರದಲ್ಲಿ 29ರ ಗುರುವಾರದಂದು ಬೆಳಗ್ಗೆ 9 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮಿಕ್ಕ ಪಟ್ಟಣಗಳ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕ ಸಭೆ ನಡೆಸಲಾಗುತ್ತದೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಎನ್.ಎಸ್.ಅಭಿಷೇಕ್, ಕೆ.ಎಸ್.ವೀರಭದ್ರಪ್ಪ, ಪುಟ್ಟನಾಯ್ಕ ಇತರರು ಇದ್ದರು.