ಆಲಮೇಲ ಹಾಗೂ ಸಿಂದಗಿ ತಾಲೂಕಿನ ವಿವಿಧ ಸ್ಥಳಗಳಿಗೆ ಜಿಪಂ ಸಿಇಒ ಭೇಟಿ, ಪರಿಶೀಲನೆ
ಸಂಜೆವಾಣಿ ವಾರ್ತೆ,
ವಿಜಯಪುರ, ಫೆ.26:ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕುಡಿಯುವ ನೀರಿಗೆ ಪ್ರಥಮಾಧ್ಯತೆ ನೀಡಿ, ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಫೆ.24ರಂದು ಸಿಂದಗಿ ಹಾಗೂ ಆಲಮೇಲ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಇಲಾಖೆಗಳಡಿ ಕೈಗೊಂಡ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಕುಡಿಯುವ ನೀರು ಒದಗಿಸಲು ಕ್ರಮ ವಹಿಸಿಬೇಕು. ಯಾವುದೇ ರೀತಿಯ ಸಮಸ್ಯೆಯಾಗದಂತೆ ಗಮನ ಹರಿಸಿ ಕಾರ್ಯ ನಿರ್ವಹಿಸಬೇಕು ಎಂದು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಆಲಮೇಲ ತಾಲೂಕಿನ ಕಡಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮದನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಶಾಲಾ ಆಟದ ಮೈದಾನ, ಶೌಚಾಲಯ, ಶಾಲಾ ಕಾಂಪೌಂಡ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲಿಸಿ, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆದ್ಯತಾನುಸಾರ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶಾಲಾ ಕೊಠಡಿ ವೀಕ್ಷಿಸಿ ಅಗತ್ಯ ವಿದ್ಯುತ್ ಸಂಪರ್ಕ, ಕುಡಿಯುವ ನೀರು ಇರುವಂತೆ ನಿಗಾ ವಹಿಸಬೇಕು. ಕಲಿಕಾ ಗುಣಮಟ್ಟ ಕಾಪಾಡಿಕೊಳ್ಳಬೇಕು. ಪಾಠದಲ್ಲಿ ಪರಿಹಾರ ಬೋಧನಾ ಕ್ರಮ ಅನುಸರಿಸಬೇಕು. ಕಲಿಕಾ ಚಟುವಟಿಕೆಗೆ ಒತ್ತು ನೀಡಬೇಕು. ಕಲಿಕೆಗೆ ಪೂರಕವಾಗಿ ಬೋಧನಾ ಸಾಮಗ್ರಿಗಳ ಲಭ್ಯತೆ ಖಚಿತಪಡಿಸಿಕೊಳ್ಳಬೇಕು. ಬೋಧನಾ ಸಾಮಗ್ರಿಯೊಂದಿಗೆ ಪಾಠ ಮಾಡಬೇಕು ಎಂದು ಶಾಲಾ ಶಿಕ್ಷಕರಿಗೆ ಸಲಹೆ ನೀಡಿದರು.
ಕೊಕಟನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂಸಿನ ಮನೆ -ಶಿಶು ಪಾಲನ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳ ಕಲಿಕಾ ಗುಣಮಟ್ಟ ಹಾಗೂ ಮಕ್ಕಳಿಗೆ ಆಹಾರ ವಿತರಿಸುವ ಸಮಯ, ಮಕ್ಕಳ ಲಾಲನೆ-ಪಾಲನೆ, ಮಕ್ಕಳ ದಾಖಲಾತಿ ಮತ್ತು ಹಾಜರಾತಿ ಪರಿಶೀಲಿಸಿದರು. ಅಲ್ಲಿರುವ ಮಕ್ಕಳ ಆರೈಕೆದಾರರಿಗೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು. ಮಕ್ಕಳ ಆರೈಕೆ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ಸರಿಯಾದ ಸಮಯಕ್ಕೆ ಆಹಾರ ಒದಗಿಸುವುದು. ಮಕ್ಕಳಿಗೆ ಸ್ವಚ್ಛತೆ, ಅಕ್ಷರಾಭ್ಯಾಸ ಮಾಡಿಸುವ ನಿಟ್ಟಿನಲ್ಲಿಯೂ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಸಿಂದಗಿ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮುಅಗ್ನಿ, ಆಲಮೇಲ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಫರೀದಾ ಪಠಾಣ, ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಆಲಮೇಲ ತಾಲೂಕಿನ ಸಹಾಯಕ ನಿರ್ದೇಶಕ ಸಿದ್ದರಾಮ ಅಂಕಲಗಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಎಸ್.ಆರ್ ಸ್ವಾಮಿ, ಪಂಚಾಯತ್ ರಾಜ್ ವಿಭಾಗದ ಸಹಾಯಕ ನಿರ್ದೇಶಕ ಎ.ಎ.ದುರ್ಗದ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಜಿ.ವೈ ಮುರಾಳ, ಸಿಂದಗಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ, ಕೊಕಟನೂರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಸಂತ ಅಮೀನಗಡ, ಕಡಣಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶರಣಗೌಡ ಕಡ್ಲೆವಾಡ, ಗ್ರಾಮ ಪಂಚಾಯತಿಯ ಸದಸ್ಯರು ಉಪಸ್ಥಿತರಿದ್ದರು.