ಕಾರು ಅಪಘಾತ: ನವವಿವಾಹಿತೆ ಸಾವು
ಬಂಟ್ವಾಳ.ಸೆ.೮- ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾದ ಪರಿಣಾಮ ನವವಿವಾಹಿತೆ ಸಾವನ್ನಪ್ಪಿ, ಪತಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಿನ್ನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಬಳಿ ನಡೆದಿದೆ.ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಗಂಭೀರವಾಗಿ ಗಾಯಗೊಂಡವರಾಗಿದ್ದು, ಇವರ ಪತ್ನಿ ಮಾನಸ ಸಾವನಪ್ಪಿದ್ದಾರೆ.
ನವದಂಪತಿಗಳು ಆಲ್ಟೋ ಕಾರಿನ ಮೂಲಕ ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಮೇಲಿನಿಂದ ಇನ್ನೊಂದು ಬದಿಯ ರಸ್ತೆಗೆ ಹಾರಿದ್ದು, ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್ಟಿ.ಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಮಾನಸ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅನಿಶ್ ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಸೆ. ೫ ರಂದು ದೇಂತಡ್ಕ ದೇವಸ್ಥಾನದಲ್ಲಿ ಈ ಜೋಡಿಯ ವಿವಾಹ ನಡೆದಿತ್ತು. ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದ ಇವರು ವಾಪಸ್ ಮಾವನ ಮನೆಗೆ ಹೋಗುವ ಸಂದರ್ಭದಲ್ಲಿ ಈ ಭೀಕರ ಅಪಘಾತ ನಡೆದಿದೆ. ಇವರಿಬ್ಬರು ಕೂಡ ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿದರು.