ಮಕ್ಕಳಿಗೆ ಶಿಕ್ಷಣದ ಜತೆಗೆ ಸಾಮಾಜಿಕ ಮೌಲ್ಯ ಕಲಿಸಿ: ಶುಭಕಲ್ಯಾಣ್
ತುಮಕೂರು, ಸೆ. ೬- ಮಕ್ಕಳಿಗೆ ವಿದ್ಯಾ-ಬುದ್ದಿಯ ಜತೆಗೆ ಸಾಮಾಜಿಕ ಮೌಲ್ಯಗಳನ್ನು ಕಲಿಸುವ ಮೂಲಕ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿಸುವುದು ಶಿಕ್ಷಕರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.
ನಗರದ ಕೆ.ಪಿ.ಎಸ್ ಎಂಪ್ರೆಸ್ ಬಾಲಕಿಯರ ಶಾಲಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೭ನೇ ಜನ್ಮ ದಿನಾಚರಣೆ ಮತ್ತು ಶಿಕ್ಷಕರ ಸನ್ಮಾನ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಸದೃಢ ಮಾನವ ಸಂಪನ್ಮೂಲವನ್ನು ನಿರ್ಮಿಸುವ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಿಕ್ಷಕರ ಕಾರ್ಯ ಅತ್ಯಂತ ಜವಾಬ್ದಾರಿಯುತವಾದುದು ಎಂದು ಅಭಿಪ್ರಾಯಪಟ್ಟರು.
ಅತ್ಯಂತ ಶ್ರೇಷ್ಠ ಶಿಕ್ಷಕರೆನಿಸಿಕೊಂಡ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಣಾರ್ಥವಾಗಿ ಪ್ರತಿ ವರ್ಷ ಸೆಪ್ಟೆಂಬರ್ ೫ ರಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಎಲ್ಲಾ ಶಿಕ್ಷಕರು ಸಹ ಅವರಂತೆ ಮಕ್ಕಳೊಂದಿಗೆ ಒಡನಾಟ ಬೆಳೆಸಿಕೊಂಡು ಪ್ರೀತಿಯಿಂದ ಅವರ ತಪ್ಪುಗಳನ್ನು ತಿದ್ದುವ ಮೂಲಕ ಸರಿ ದಾರಿಯನ್ನು ತೋರಬೇಕು ಎಂದರು.
ತನ್ನ ತಾಯಿಯು ಸಹ ಶಿಕ್ಷಕಿ ಆಗಿದ್ದು, ಅವರಿಂದ ಅನೇಕ ಜೀವನ ಮೌಲ್ಯಗಳನ್ನು ಕಲಿತಿದ್ದೇನೆ ಎಂದು ತಮ್ಮ ವಿದ್ಯಾರ್ಥಿ ಜೀವನವನ್ನು ಅವರು ಮೆಲುಕು ಹಾಕಿದರು.
ಮುಂದಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆಗೆ ಉತ್ತಮ ಹೆಸರು ತರುವಲ್ಲಿ ಎಲ್ಲಾ ಶಿಕ್ಷಕರು ಸಹ ನಿರಂತರವಾಗಿ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ಶಿಕ್ಷಕರು ದೇಶದ ಅಭಿವೃದ್ಧಿಗೆ ನಿರಂತರವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಂದೆ-ತಾಯಿಯ ನಂತರ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಮಹತ್ವದ ಸ್ಥಾನ ಪಡೆದುಕೊಳ್ಳುವ ಶಕ್ತಿ ಶಿಕ್ಷಕರಿಗೆ ಮಾತ್ರ ಸಾಧ್ಯ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ತಮ್ಮ ವ್ಯಕ್ತಿತ್ವ ಮತ್ತು ಆದರ್ಶಗಳ ಮೂಲಕ ಜೀವನ ಪರ್ಯಂತ ನೆನಪಿನಲ್ಲಿ ಉಳಿಯುತ್ತಾರೆ ಎಂದು ತಿಳಿಸಿದರು.
ಅತ್ಯಂತ ಹೆಚ್ಚು ಸರ್ಕಾರಿ ನೌಕರರನ್ನು ಶಿಕ್ಷಣ ಇಲಾಖೆ ಹೊಂದಿದ್ದು, ಮೌಲ್ಯಯುತ ಶಿಕ್ಷಣ ನೀಡುವ ಮುಖೇನ ಸದೃಢ ಮಾನವ ಸಂಪನ್ಮೂಲ ಸೃಜನೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಧ್ಯಕ್ಷತೆ ವಹಿಸಿದ್ದ ಶಾಸಕ ಜಿ.ಬಿ. ಜ್ಯೋತಿಗಣೇಶ್ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಮಾದರಿಯಾಗಿರಬೇಕು. ವಿದ್ಯಾರ್ಥಿಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರಿ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವಂತೆ ಮಾರ್ಗದರ್ಶನ ನೀಡಬೇಕು. ಶಿಕ್ಷಣ ಕ್ಷೇತ್ರದಲ್ಲಾಗುತ್ತಿರುವ ಬದಲಾವಣೆಗಳಿಗೆ ಶಿಕ್ಷಕರು ಒಗ್ಗಿಕೊಂಡು ವಿದ್ಯಾರ್ಥಿಗಳಿಗೆ ಹೊಸ ಹೊಸ ವಿಷಯಗಳನ್ನು ಕಲಿಸಬೇಕು ಎಂದು ಹೇಳಿದರು.
ಗ್ರಾಮಾಂತರ ಶಾಸಕ ಬಿ. ಸುರೇಶ್‌ಗೌಡ ಮಾತನಾಡಿ, ದೇಶದ ಅಭಿವೃದ್ಧಿ ಮತ್ತು ದೇಶ ಕಟ್ಟುವ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು. ಶಿಕ್ಷಕರು ಆತ್ಮವಿಶ್ವಾಸ, ವಿನಯ ಶೀಲತೆ, ಸಂಸ್ಕಾರ ಮತ್ತು ಪ್ರಾಮಾಣಿಕತೆಯನ್ನು ಕಲಿಸುವ ಮೂಲಕ ಮಕ್ಕಳು ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳುವಂತೆ ಮಾಡಬೇಕು. ಶಿಕ್ಷಕರು ಮಕ್ಕಳಿಗೆ ಪ್ರೀತಿಯಿಂದ ಕಲಿಸಬೇಕು. ಎಲ್ಲಿ ಪ್ರೀತಿ ಇರುತ್ತದೆಯೋ ಅಲ್ಲಿ ಯಶಸ್ಸು ಇದ್ದೇ ಇರುತ್ತದೆ ಎಂದರು.
ಶಿಕ್ಷಕರಿಗೆ ಪಠ್ಯ ಬೋಧನೆಯೊಂದಿಗೆ ಆಡಳಿತಾತ್ಮಕ ಕೆಲಸಗಳು ಹೆಚ್ಚಾಗುತ್ತಿದ್ದು, ಸರ್ಕಾರಗಳು ಈ ಬಗ್ಗೆ ಗಮನ ವಹಿಸಿ ಶಿಕ್ಷಕರ ಮೇಲಿನ ಒತ್ತಡ ಕಡಿಮೆ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಡಯಟ್(ಅಭಿವೃದ್ಧಿ) ಉಪನಿರ್ದೇಶಕ ಕೆ. ಮಂಜುನಾಥ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ. ಮನಮೋಹನ್, ವಿವಿಧ ಶಿಕ್ಷಕರ ಸಂಘಗಳ ಪದಾಧಿಕಾರಿಗಳು, ಜಿಲ್ಲೆಯ ಶಿಕ್ಷಕರು ಭಾಗಿಯಾಗಿದ್ದರು.
ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
ಇದೇ ಸಂದರ್ಭದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದವರಿಗೆ ಪ್ರಶಸ್ತಿ ಪ್ರದಾನ ಹಾಗೂ ನಿವೃತ್ತ ಶಿಕ್ಷಕರನ್ನು ಗಣ್ಯರು ಸನ್ಮಾನಿಸಿದರು.
ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಹಶಿಕ್ಷಕರಾದ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಾಲುಗೋಣ ಶಾಲೆಯ ಸಿ.ಎಸ್.ಕೆಂಚಮ್ಮ, ಗುಬ್ಬಿ ತಾಲ್ಲೂಕು ಮಲ್ಲಪ್ಪನಹಳ್ಳಿ ಶಾಲೆಯ ವೆಂಕಟೇಶಯ್ಯ, ಕುಣಿಗಲ್ ತಾಲ್ಲೂಕು ತುರುಗನೂರು ಶಾಲೆಯ ವಿ.ರಮೇಶ್, ತಿಪಟೂರು ತಾಲ್ಲೂಕು ಹರಿಸಮುದ್ರ ಶಾಲೆಯ ಹೆಚ್.ಎಂ.ವಸಂತಕುಮಾರ್ ಹಾಗೂ ತುರುವೇಕೆರೆ ತಾಲ್ಲೂಕು ಸೂಳೆಕೆರೆ ಶಾಲೆಯ ಎಂ.ಬಿ. ಲೇಪಾಕ್ಷಮೂರ್ತಿ; ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಹಶಿಕ್ಷಕರಾದ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಳ್ಳಿಕಾರ ಬೀದಿ ಶಾಲೆಯ ಸಿ.ಎ.ಸುರೇಶ್, ಗುಬ್ಬಿ ತಾಲ್ಲೂಕು ಕೊಂಡ್ಲಿ ಶಾಲೆಯ ಹೆಚ್.ಸೌಭಾಗ್ಯ, ಕುಣಿಗಲ್ ತಾಲ್ಲೂಕು ಮಾದುಗೋನಹಳ್ಳಿ ಶಾಲೆಯ ಎನ್.ಜಯಲಕ್ಷ್ಮಮ್ಮ, ತಿಪಟೂರು ತಾಲ್ಲೂಕು ನಾಗತಿಹಳ್ಳಿ ಶಾಲೆಯ ವಿ.ಎಂ. ಗಿರಿಜಮ್ಮ, ತುಮಕೂರು ತಾಲ್ಲೂಕು ಶ್ರೀರಾಮನಗರ ಶಾಲೆಯ ಟಿ.ಎಂ.ರಂಗನಾಥಯ್ಯ ಹಾಗೂ ತುರುವೇಕೆರೆ ತಾಲ್ಲೂಕು ಬಿಗನೇನಹಳ್ಳಿ ಶಾಲೆಯ ಎಂ.ಬಿ.ಚೇತನ; ಪ್ರೌಢ ಶಾಲಾ ವಿಭಾಗದಲ್ಲಿ ಸಹಶಿಕ್ಷಕರಾದ ಚಿಕ್ಕನಾಯಕನಹಳ್ಳಿ ತಾಲ್ಲೂಕು ಶೆಟ್ಟಿ ಕೆರೆ ಸಂಯುಕ್ತ ಪದವಿಪೂರ್ವ ಕಾಲೇಜಿನ ಎಸ್.ಕೆ.ದಯಾಶಂಕರ, ಗುಬ್ಬಿ ತಾಲ್ಲೂಕು ಮಂಚಲದೊರೆ ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಎನ್.ವಿಜಯಕುಮಾರಿ, ಕುಣಿಗಲ್ ತಾಲ್ಲೂಕು ಎಡೆಯೂರಿನ ಶ್ರೀ ಗೌತಮ ಅನುದಾನಿತ ಪ್ರೌಢಶಾಲೆಯ ಬಿ.ಆರ್.ಹರೀಶ್, ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಎನ್. ಮೂರ್ತಿ, ತುಮಕೂರು ತಾಲ್ಲೂಕು ಚಿಕ್ಕತೊಟ್ಲುಕೆರೆ ಶ್ರೀ ಅಟವಿ ಸಿದ್ಧಲಿಂಗೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಟಿ.ಎಸ್. ರವಿಶಂಕರ್ ಹಾಗೂ ತುರುವೇಕೆರೆ ತಾಲ್ಲೂಕು ಸಂಪಿಗೆಯ ಚಂಪಕ ಪ್ರೌಢಶಾಲೆಯ ಬಿ.ಎನ್.ಆಶಾಲತ ಅವರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಗಣ್ಯರಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಮತ್ತು ಸಾವಿತ್ರಿ ಬಾಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.