ಯುವ ಮತದಾರರ ನೋಂದಣಿಯಲ್ಲಿ ರಾಜ್ಯದಲ್ಲಿಯೇ ಯಾದಗಿರಿ ಜಿಲ್ಲೆ ಪ್ರಥಮ: ಜಿಲ್ಲಾಧಿಕಾರಿ ಡಾ.ಸುಶೀಲ ಬಿ
ಯಾದಗಿರಿ:ಸೆ. 02 :ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ 2025 ರ ಸಂಬಂಧ ಮತಗಟ್ಟೆ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಹಾಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ನಿರ್ದೇಶಿಸಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಸೋಮವಾರ ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ಸಂಬಂಧ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ಹಾಗೂ ಮೇಲ್ವಿಚಾರಕರಿಗೆ ಹಮ್ಮಿಕೊಂಡ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಕಳೆದ ಸಾಲಿನಲ್ಲಿ ಯಾದಗಿರಿ ಜಿಲ್ಲೆಯು ಯುವ ಮತದಾರರ ನೋಂದಣಿಯಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಜಿಲ್ಲಾ ಪಂಚಾಯತ ಸಿಇಓ ಹಾಗೂ ಮತದಾರರ ನೋಂದಣಿ ಅಧಿಕಾರಿಗಳಿಗೆ ಪ್ರಶಸ್ತಿ ಲಭಿಸಿದ್ದು ಇದಕ್ಕೆ ಎಲ್ಲ ಮತಗಟ್ಟೆ ಮಟ್ಟದ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ತುಂಬಾ ಚೆನ್ನಾಗಿ ಕಾರ್ಯನಿರ್ವಹಿಸಿ, ಪ್ರಶಸ್ತಿ ಲಭಿಸಲು ಕಾರಣೀಭೂತರಾಗಿದ್ದೀರಿ ಎಂದು ಜಿಲ್ಲಾಧಿಕಾರಿ ಅವರು ಅಭಿನಂದಿಸಿದರು.
ಈ ವರ್ಷ ಮನೆ ಮನೆಗೆ ಸಮೀಕ್ಷೆಯನ್ನು ಚೆನ್ನಾಗಿ ಮಾಡಿ 18 ವರ್ಷ ತುಂಬಿದ ಪ್ರತಿಯೊಬ್ಬರು ಮತದಾರರು ಹಾಗೂ ಫಾರಂ-6 ಮೂಲಕ ಹೆಚ್ಚು ಅರ್ಹ ಮತದಾರರನ್ನು ಪಟ್ಟಿಗೆ ಹೆಸರು ನೋಂದಣಿ ಮಾಡಿಸಬೇಕು. ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿರುವವರ ಹೆಸರುಗಳನ್ನು ಸೇರ್ಪಡೆ ಮಾಡಬೇಕು. ಮರಣ ಹೊಂದಿದವರು, ಬೇರೆಡೆ ವರ್ಗಾವಣೆಯಾಗಿರುವವರ ಹೆಸರುಗಳನ್ನು ಪರಿಶೀಲಿಸಿ ಕೈಬಿಡಬೇಕು ಎಂದರು. ಫಾರಂ- 7 ಮೂಲಕ ಮರಣ ಹೊಂದಿರುವವರು ಹಾಗೂ ಶಾಶ್ವತವಾಗಿ ಗುಳೇ ಹೋಗಿರುವವರನ್ನು ತೆಗೆದು ಹಾಕಬೇಕು ಎಂದರು.
ಜನನ ಮರಣ ದಾಖಲೆಯನ್ನು ಬಳಸಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕು. ಡಿಎಸ್ಇ ಹಾಗೂ ಪಿಎಸ್ಇ ಅರ್ಜಿಗಳನ್ನು ಶೀಘ್ರವಾಗಿ ಹಾಗೂ ಎಚ್ಚರಿಕೆಯಿಂದ ಪರಿಶೀಲಿಸಿ ವಿಲೇವಾರಿ ಮಾಡಬೇಕು. ವಿಶೇಷ ನೊಂದಣಿ ಅಭಿಯಾನವನ್ನು ಯಶಸ್ವಿಯಾಗಿ ನಿಭಾಯಿಸಬೇಕು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಚುನಾವಣೆ ತಹಶೀಲ್ದಾರ ಸಂತೋಷರಾಣಿ ಸೇರಿದಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರು, ಮತಗಟ್ಟೆ ಅಧಿಕಾರಿಗಳು, ಮೇಲ್ವಿಚಾರಕರು ಉಪಸ್ಥಿತರಿದ್ದರು