ಹಾಕಿ ಪಂದ್ಯಾವಳಿ
ಗದಗ, ಆ31: ಜಾತಿ, ಬೇಧ ಮರೆತು ದೇಶದಲ್ಲಿ ಐಕ್ಯತೆ ಮನೋಭಾವ ಮೂಡಿಸಲು ಕ್ರೀಡೆಗಳು ಸಹಕಾರಿಯಾಗುತ್ತವೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ತಿಳಿಸಿದರು.
ಬೆಟಗೇರಿಯ ಮಹಾತ್ಮಾ ಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಿಮಿತ್ಯ ಹಾಕಿ ಪಂದ್ಯಾವಳಿ ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವುದು ಮುಖ್ಯವಾಗಿದೆ. ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದಬಹುದಾಗಿದೆ. ಪ್ರತಿಯೊಬ್ಬರೂ ಮಾನಸಿಕ ಹಾಗೂ ದೈಹಿಕ ಸದೃಢರಾದಾಗ ಮಾತ್ರ ಜೀವನದಲ್ಲಿ ಏನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಪಾಲಕರು ತಮ್ಮ ಮಕ್ಕಳಿಗೆ ಪಠ್ಯ ಚಟುವಟಿಕೆಗಳೊಂದಿಗೆ ಕ್ರೀಡಾ ಚಟುವಟಿಕೆಗಳಲ್ಲಿಯೂ ಪಾಲ್ಗೊಳ್ಳಲು ಪ್ರೋತ್ಸಾಹಿಸಬೇಕು. ಪ್ರಧಾನ ಮಂತ್ರಿ ಮೋದಿಜಿಯವರು ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಖೇಲೋ ಇಂಡಿಯಾ ಯೋಜನೆ ಜಾರಿಗೊಳಿಸಿದ್ದಾರೆ ಎಂದರು.
ಮೇಜರ್ ಧ್ಯಾನಚಂದರವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮೇಜರ ಧ್ಯಾನಚಂದ್‍ರವರು ಹಾಕಿ ಕ್ಷೇತ್ರಕ್ಕೆ ಬಹಳ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಹಾಕಿ ಕ್ರೀಡಾಪಟುಗಳಾಗಿ 1000 ಕ್ಕೂ ಹೆಚ್ಚು ಗೋಲು ಹೊಡಿದಿದ್ದಾರೆ. ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ್ ಅವರು ಓಲಂಪಿಕ್ ಕ್ರೀಡೆಯಲ್ಲಿ ನಮ್ಮ ದೇಶಕ್ಕೆ ಸತತ ಮೂರು ಬಾರಿ ಚಿನ್ನದ ಪದಕ ತಂದು ಕೊಟ್ಟಿದ್ದಾರೆ. ಗದಗ ಜಿಲ್ಲೆಯ ಈ ಹಾಕಿ ಕ್ರೀಡಾಂಗಣದಲ್ಲಿ ಹಲವಾರು ಹಾಕಿ ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚಿ ಪ್ರಶಸ್ತಿ ಪಡೆದಿದ್ದಾರೆ. ಇದು ಎಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಎಸ್.ವಿ.ಸಂಕನೂರ ಅವರು ಹರ್ಷ ವ್ಯಕ್ತ ಪಡಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ,ಶರಣು ಗೋಗೇರಿ ಪ್ರಾಸ್ತಾವಿಕವಾಗಿ ಮಾತನಾಡಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಇಲಾಖೆಯಿಂದ ಹಲವಾರು ಕ್ರೀಡೆಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಕಿ ಕ್ರೀಡಾಪಟುಗಳು ಈ ಕ್ರೀಡಾಂಗಣದ ಸದ್ಭಳಕೆ ಮಾಡಿಕೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ ಇಲಾಖೆ ವತಿಯಿಂದ ಕ್ರೀಡಾಪಟುಗಳಿಗೆ ಕ್ರೀಡಾಕಿಟ್‍ಗಳನ್ನು ವಿತರಿಸಲಾಯಿತು. ಹಾಗೂ ಕುಸ್ತಿ ಹಾಗೂ ಸೈಕ್ಲಿಂಗ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಸುರೇಶ ಕಟ್ಟಿಮನಿ, ಚಂದ್ರು ಕಟ್ಟಿಮನಿ, ಎಚ್.ಬಿ.ವೀರಾಪುರ, ಯಲ್ಲಪ್ಪ ಕೊರವರ, ಕೃಷ್ಣಪ್ಪ ಬಾಗಲಕೋಟಿ, ಎಂ.ಸಿ.ಶೇಖ್, ಲಕ್ಷ್ಮಣ ಬಾಗಲಕೋಟಿ, ರಾಮು ಹಾಸಂಗಿ, ಮೋಹನ ಕಟ್ಟಿಮನಿ, ಹನುಮಂತ ಕಟ್ಟಿಮನಿ, ವೈ.ಜಿ.ಗಡಾದ , ಹನುಮಾನ ಬ್ಲೇಸಿಂಗ್ ಸ್ಪೋರ್ಟ ಕ್ಲಬ್ ಹಾಗೂ ಸೈಕ್ಲಿಂಗ್ ಮತ್ತು ಕುಸ್ತಿ ಅಸೋಸಿಯೇಷನ್‍ದ ಅಧ್ಯಕ್ಷರು, ಪದಾಧಿಕಾರಿಗಳು ಕ್ರೀಡಾಪಟುಗಳು ಹಾಜರಿದ್ದರು.