ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ
ಕೋಲಾರ, ಆ,೩೧-ನಾಗರೀಕ ಕೇಂದ್ರಿತ ಸುಧಾರಣೆ ಭಾಗವಾಗಿ ಪ್ರಸಕ್ತ ೨೦೨೪-೨೫ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಕೋಲಾರ ಜಿಲ್ಲೆಯಾದ್ಯಂತ ಸ್ಥಿರಾಸ್ತಿಯನ್ನು ಜಿಲ್ಲೆಯ ಯಾವುದೇ ಉಪ ನೊಂದಣಿ ಕಚೇರಿಯಲ್ಲಿ ನೋಂದಣಿ ಮಾಡಲು ಅನುಕೂಲವಾಗುವಂತೆ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ.
ನೋಂದಣಿ ಕಾಯ್ದೆ-೧೯೦೮ರ ಕಲಂ (೫) ಹಾಗೂ ಕಲಂ(೬)ರಂತೆ ೨೦೧೧ರಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಮತ್ತು ಕಳೆದ ಮಾರ್ಚ್ ಮಾಹೆಯಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಅಲ್ಲಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಇದೀಗ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಘಟಕವನ್ನು ಒಂದು ಯೂನಿಟ್ ಎಂದು ಪರಿಗಣಿಸಿ ಆ ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಿ ಸರ್ಕಾರ ಆದೇಶಿಸಿದೆ ಎಂದರು.
ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಛೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದೆ. ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಯಿಂದ ಸಿರಾಸ್ತಿ ಇರುವ ಕೋಲಾರ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಛೇರಿಯಲ್ಲಿ ದಸ್ತಾವೇಜು ನೋಂದಾಯಿಸಿಕೊಳ್ಳಬಹುದಾಗಿದೆ.
ಸಾರ್ವಜನಿಕರು ಎನಿವೇರ್ ನೋಂದಣಿ ವ್ಯವಸ್ಥೆಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಮನವಿ ಮಾಡಿದ್ದಾರೆ.
ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿತಾಯವಾಗಲಿದೆ. ನೋಂದಣಿಯಲ್ಲಿ ಪಾರದರ್ಶಕತೆ ಹೆಚ್ಚಲಿದ್ದು, ವಿಳಂಬವನ್ನು ತಡೆಗಟ್ಟಲಿದೆ. ಸಾರ್ವಜನಿಕರು ಸ್ಲಾಟ್ ಲಭ್ಯವಿರುವಂತಹ ಸಮೀಪದ ನೋಂದಣಿ ಕಚೇರಿಯನ್ನು ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಬಹುದು. ಇದರಿಂದ ಉಪ ನೋಂದಣಿ ಕಛೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುವುದಲ್ಲದೆ ಕಛೇರಿ ಸಿಬ್ಬಂದಿಗಳ ಮೇಲಿನ ಕೆಲಸದ ಒತ್ತಡ ಸಹ ಕಡಿಮೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.