ಜನರಿಗೆ ಉತ್ತಮ ಆರೋಗ್ಯ ಸೇವೆ
ಭಾಲ್ಕಿ:ಆ.29: ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು. ತಾಲೂಕಿನ ನಿಟ್ಟೂರ(ಬಿ) ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರ 3 ಕೋಟಿ ರೂ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಕ್ಷೇತ್ರದ ಜನತೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ವಿಶೇಷ ಕಾಳಜಿ ಇದೆ. ಜನರಿಗೆ ಉತ್ತಮ ದರ್ಜೆ ವೈದ್ಯಕೀಯ ಸೌಲಭ್ಯ ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಈಗಾಗಲೇ ವಿವಿಧೆಡೆ ಸಮುದಾಯ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸ್ವಂತ ಕಟ್ಟಡದ ಜತೆಗೆ ಖಾಲಿ ಇರುವ ವೈದ್ಯರನ್ನು ಭರ್ತಿ ಮಾಡಿಸಿ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಸಿಗುವಂತೆ ಮಾಡಿದ್ದಾರೆ.
ಇದೀಗ ನಿಟ್ಟೂರ(ಬಿ) ಗ್ರಾಮದಲ್ಲಿ ನೂತನ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ 3 ಕೋಟಿ ರೂ ಅನುದಾನ ಒದಗಿಸಿದ್ದು ಗುತ್ತಿಗೆದಾರರು ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜ್ಞಾನೇಶ್ವರ ನಿರಗುಡೆ, ಗ್ರಾಮದ ಪ್ರಮುಖರು, ಸ್ಥಳೀಯ ವೈದ್ಯಾಧಿಕಾರಿಗಳು ಹಾಜರಿದ್ದರು.