ಜಿಲ್ಲಾಸ್ಪತ್ರೆ ಹಾಗೂ ವಿವಿಧ ವಸತಿ ನಿಲಯಗಳಿಗೆ ಉಪಲೋಕಾಯುಕ್ತರ ಭೇಟಿ, ಪರಿಶೀಲನೆ: ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಸೂಚನೆ
ವಿಜಯಪುರ,ಆ.25:ಕರ್ನಾಟಕ ಉಪಲೋಕಾಯುಕ್ತÀ ನ್ಯಾ.ಕೆ.ಎನ್. ಫಣೀಂದ್ರ ಅವರು ಶನಿವಾರ ನಗರದ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು.
ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದ್ದು, ಸರಿಯಾದ ಸಮಯಕ್ಕೆ ವೈದ್ಯರು ತಪಾಸಣೆ ಮಾಡುತ್ತಿದ್ದಾರೆ. ಔಷಧೋಪಾಚಾರ, ನಿಗದಿತ ಸಮಯಕ್ಕೆ ಆಹಾರ ಒದಗಿಸುತ್ತಾರೆ ಎಂದು ಒಳ ರೋಗಿಗಳು ಮಾಹಿತಿ ನೀಡಿದರು.
ಆಸ್ಪತ್ರೆಯ ಪ್ರತಿ ಹಂತದ ವಾರ್ಡ್‍ಗಳಲ್ಲಿಯೂ ದಾಖಲಾಗಿರುವ ರೋಗಿ ಹಾಗೂ ಅವರ ಸಂಬಂಧಿಕರ ಆರೋಗ್ಯ ವಿಚಾರಿಸುತ್ತಾ,ಅಲ್ಲಿನ ಹೊರ ರೋಗಿಗಳ ವಿಭಾಗ, ಕಣ್ಣಿನ ವಿಭಾಗ, ಮಕ್ಕಳ ಒಳರೋಗಿ ಚಿಕಿತ್ಸಾ ವಿಭಾಗ ಪರಿಶೀಲನೆ ನಡೆಸಿ ಉತ್ತಮ ಚಿಕಿತ್ಸೆ, ಔಷಧ ಅಗತ್ಯ ಸೌಲಭ್ಯ ಒದಗಿಸುತ್ತಿರುವ ಬಗ್ಗೆ ಮಾಹಿತಿ ಕ್ರೂಢೀಕರಿಸಿದರು.
ಡೆಂಘೀ ವಾರ್ಡ್‍ಗೆ ಭೇಟಿ ನೀಡಿ ಅಲ್ಲಿ ಒದಗಿಸಲಾಗಿತ್ತಿರುವÀ ಚಿಕಿತ್ಸಾ ಸೌಕರ್ಯಗಳ ಬಗ್ಗೆ, ಚಿಕ್ಕಮಕ್ಕಳ ತೀವ್ರ ನಿಗಾ ಘಟಕ, ಮಕ್ಕಳ ಪೌಷ್ಠಿಕ ಆಹಾರ ಪುನಶ್ಚೇತನ ಕೇಂದ್ರದಲ್ಲಿ ಮಕ್ಕಳಿಗೆ ಪೂರೈಸಲಾಗುತ್ತಿರುವ ಆಹಾರದ ಗುಣಮಟ್ಟ ಪರೀಕ್ಷಿಸಿ ಯಾವುದೇ ಲೋಪವಾಗದಂತೆ ಮಕ್ಕಳ ಆರೋಗ್ಯದ ಕಾಳಜಿ ವಹಿಸಬೇಕು ಎಂದು ಹೇಳಿದರು.
ಆಸ್ಪತ್ರೆಯಲ್ಲಿರುವ ಸಿಟಿ ಸ್ಕ್ಯಾನ್ ವಿಭಾಗಕ್ಕೆ ತೆರಳಿ ಅಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯಂತ್ರಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಅದಲ್ಲದೆ ತಾಯಿಮಕ್ಕಳ ವಿಭಾಗ, ವಿಶೇಷ ನವಜಾತ ಶಿಶು ಆರೈಕೆ ಘಟಕ, ಪ್ರಸೂತಿ ಅವಲಂಬನ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಉಪ ಲೋಕಾಯುಕ್ತ ತಂಡದ ಇತರ ಸದಸ್ಯರು ಜಿಲ್ಲಾಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಗತಿ ಕುರಿತು ಉಪ ಲೋಕಾಯುಕ್ತರಿಗೆ ವರದಿ ನೀಡಿದರು. ಆಸ್ಪತ್ರೆಯ ಸ್ವಚ್ಚತೆ ಹಾಗೂ ರೋಗಿಗಳಿಗೆ ಉತ್ತಮ ಚಿಕಿತ್ಸೆಗೆ ಆದ್ಯತೆ ನೀಡುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಅವರಿಗೆ ಉಪ ಲೋಕಾಯುಕ್ತರು ಸೂಚಿಸಿದರು.
ವಸತಿ ನಿಲಯಗಳಿಗೆ ಭೇಟಿ, ಪರಿಶೀಲನೆ:
ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್. ಫಣೀಂದ್ರ ಅವರು ಶನಿವಾರ ನಗರದ ಅರಕೇರಿ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.
ಅಲ್ಲಿದ್ದ ವಿದ್ಯಾರ್ಥಿಗಳೊಂದಿಗೆ ಮಾಹಿತಿ ಪಡೆದುಕೊಂಡ ಅವರು ಊಟದ ಕೋಣೆ, ಅಡುಗೆ ಕೋಣೆಯನ್ನು ಪರಿಶೀಲಿಸಿ ಸ್ವಚ್ಚತೆಗೆ ಆದ್ಯತೆ ನೀಡಿ ಗುಣಮಟ್ಟದ ಆಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶೌಚಾಲಯಗಳ ಸ್ವಚ್ಚತೆ, ಶುದ್ಧ ಕುಡಿಯುವ ನೀರು, ವಿದ್ಯಾರ್ಥಿಗಳಿಗೆ ಬೆಡ್, ಹಾಸಿಗೆಗಳನ್ನು ಸಮರ್ಪಕವಾಗಿ ಪೂರೈಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡದೇ ಹದಿನೈದು ದಿನಗಳ ಕಾಲ ಮಿತಿಯೊಳಗೆ ಇಲ್ಲಿನ ನ್ಯೂನತೆಗಳನ್ನು ಸರಿಪಡಿಸಿ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ನಗರದ ಅಡವಿ ಶಂಕರಲಿಂಗ ದೇವಸ್ಥಾನದ ಹತ್ತಿರ ಇರುವ ಮೆಟ್ರಿಕ್ ನಂತರದ ಬಾಲಕಿಯರ ಇಂಜನೀಯರ್ ಮತ್ತು ಮೆಡಿಕಲ್ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ಈ ವಸತಿನಿಲಯದಲ್ಲಿ ಗ್ರಂಥಾಲಯ, ಕಂಪ್ಯೂಟರ್ ಕೋಣೆಯನ್ನು ಪರಿವೀಕ್ಷಿಸಿ ಅಲ್ಲಿದ್ದ ವಿದ್ಯಾರ್ಥಿನಿಯರಿಂದ ಊಟದ ವ್ಯವಸ್ಥೆ, ಇತರ ಸಮಸ್ಯೆಗಳ ಕುರಿತಾಗಿ ಕುಂದುಕೊರತೆಯನ್ನು ಆಲಿಸಿದರು. ವಿದ್ಯಾರ್ಥಿನಿಯರು ಇಲಾಖೆ ನಿಗದಿಪಡಿಸಿರುವ ಮೆನುವಿನ ಪ್ರಕಾರ ಊಟ ನೀಡುತ್ತಾರೆ ಎಂದು ಮಾಹಿತಿ ನೀಡಿದರು.
ವಿದ್ಯಾರ್ಥಿನಿಯರೊಂದಿಗೆ ಸಮಾಲೋಚಿಸಿದ ಉಪಲೋಕಾಯುಕ್ತರು, ಸ್ವಚ್ಚತೆ ಕಾಪಾಡಿಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಸಲಹೆ ನೀಡಿ, ನಿಯಮಿತವಾಗಿ ವೈದ್ಯರಿಂದ ಆರೋಗ್ಯ ತಪಾಸಣೆಗೆ ಆದ್ಯತೆ ನೀಡಬೇಕು. ಗ್ರಂಥಾಲಯಗಳಿಗೆ ಉತ್ತಮ ಪುಸ್ತಕಗಳನ್ನು ಹಾಗೂ ಕಂಪ್ಯೂಟರ್ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸುವಂತೆ ಸೂಚಿಸಿದರು.
ಊಟದ ಕೋಣೆಯನ್ನು ಪರಿಶೀಲಿಸಿದ ಉಪಲೋಕಾಯುಕ್ತರು, ಅಡುಗೆಗೆ ಬಳಸುವ ಸಾಮಗ್ರಿಗಳ, ಆಹಾರದ ಗುಣಮಟ್ಟದ ಬಗ್ಗೆ ಅಡುಗೆ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಕೇವಲ ಸಂಬಳಕ್ಕಾಗಿ ಕೆಲಸ ಮಾಡದೇ ಇದು ಸ್ವತಃ ತಮ್ಮದೇ ಮನೆಯೆಂದು ತಿಳಿದು ಅಡುಗೆ ಕೋಣೆಯ ಶುಚಿತ್ವ ಕಾಪಾಡಿಕೊಳ್ಳಬೇಕೆಂದು ಹೇಳಿದರು. ಸಿಬ್ಬಂದಿಯ ಹಾಜರಾತಿ ದಾಖಲೆ ಹಾಗೂ ಸಂಬಳದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ವಸತಿ ನಿಲಯದ ಕಟ್ಟಡವನ್ನು ಸರಿಯಾಗಿ ನಿರ್ವಹಿಸಿಕೊಂಡು, ವಸತಿನಿಲಯದ ಸುತ್ತಮುತ್ತ ಸ್ವಚ್ಚತೆಗೆ ಆದ್ಯತೆ ನೀಡಿ, ಭದ್ರತಾ ದೃಷ್ಟಿಯಿಂದ ರಾತ್ರಿಯ ವೇಳೆ ಪೊಲೀಸ್ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ವಸತಿನಿಲಯದ ಸುತ್ತಲೂ ಕಂಪೌಂಡ್ ಗೋಡೆ, ಅವರಣದಲ್ಲಿ ಬೀದಿ ದೀಪಗಳ ವ್ಯವಸ್ಥೆ ಒದಗಿಸಿ ಸುರಕ್ಷತೆಗೆ ಆದÀ್ಯತೆ ನೀಡಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹಿರಿಯ ಸಿವ್ಹಿಲ್ ನ್ಯಾಯಾಧೀಶರಾz ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ, ಲೋಕಾಯುಕ್ತ ವಿಚಾರಣೆ ಶಾಖೆ ಉಪನಿಬಂಧಕ ಪ್ರಕಾಶ ಎಲ್. ನಾಡಗೇರ, ಲೋಕಾಯುಕ್ತ ಕಾನೂನು ಅಭಿಪ್ರಾಯದ ಸಹಾಯಕ ನಿಬಂಧಕ ಶುಭವೀರ, ಉಪ ಲೋಕಾಯುಕ್ತ ಆಪ್ತ ಕಾರ್ಯದರ್ಶಿ ಕಿರಣ ಪಿ.ಎಂ.ಪಾಟೀಲ, ಜಿಲ್ಲಾ ಲೋಕಾಯುಕ್ತ ಅಧೀಕ್ಷಕÀ ಟಿ.ಮಲ್ಲೇಶ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಈರಣ್ಣ ಆಶಾÁಪೂರ ಆಹಾರ ಇಲಾಖೆ ಉಪ ನಿರ್ದೇಶಕ ವಿನಯಕುಮಾರ ಪಾಟೀಲ ಡಿವೈಎಸ್‍ಪಿ ಸುರೇಶ ರೆಡ್ಡಿ, ಇನಸ್ಪೆಕ್ಟರ್ ಆನಂದ ಟಕ್ಕಣ್ಣವರ ಮತ್ತಿತರರು ಉಪಸ್ಥಿತರಿದ್ದರು.