ಹರ್ಷ ಕೊಲೆ ಎನ್‌ಐಎಗೆ ಪ್ರಶ್ನಿಸಿದ ಅರ್ಜಿ ವಜಾ
ಬೆಂಗಳೂರು,ಅ.೧-ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ವಹಿಸಿದ್ದನ್ನು ಪ್ರಶ್ನಿಸಿ ಹಾಲಿ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಶಿವಮೊಗ್ಗದ ಹೊಸಬೀದಿಯ ನಿವಾಸಿ ಎ.ರೋಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ ಕುಮಾರ್ ಮತ್ತು ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಅರ್ಜಿದಾರರು, ಪ್ರಕರಣವನ್ನು ಎನ್‌ಐಎಗೆ ವಹಿಸಲು ಅನುಮತಿ ಪಡೆದಿಲ್ಲ ಎಂಬ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. ಅಲ್ಲದೆ, ಪ್ರಕರಣದ ಎಲ್ಲಾ ಅಂಶಗಳನ್ನು ಪರಿಶೀಲಿಸಿದ ನಂತರವಷ್ಟೇ ತನಿಖೆಯ ಹೊಣೆಯನ್ನು ಎನ್‌ಐಎಗೆ ವಹಿಸಲಾಗಿದೆ. ಏನೂ ಆಧಾರವಿಲ್ಲದೆ ತನಿಖೆ ವರ್ಗಾವಣೆ ಮಾಡಲಾಗಿದೆ ಎಂಬ ವಾದವನ್ನು ಒಪ್ಪಲಾಗದು ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ. ಅಲ್ಲದೆ, ತನಿಖೆಯನ್ನು ಎನ್‌ಐಎಗೆ ವಹಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿಹಿಡಿದಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಮೊದಲಿಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ನಂತರ ಪ್ರಕರಣ ಎನ್‌ಐಎಗೆ ವಹಿಸಿದಾಗ ಯುಎಪಿಎ ಕಲಂಗಳನ್ನು ಸೇರಿಸಲಾಗಿದೆ. ಆದರೆ, ಅದಕ್ಕೆ ಕೋರ್ಟ್ ಅನುಮತಿ ಪಡೆದಿಲ್ಲ. ಆದರೆ, ಪ್ರಕರಣದಲ್ಲಿ ಯುಎಪಿಎ ರೀತಿಯ ಗಂಭೀರ ಕಾಯಿದೆ ಹೇರಲು ಯಾವುದೇ ಆಧಾರವಿಲ್ಲ. ಕೇವಲ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಯುಎಪಿಎ ಹೇರಲಾಗಿದೆ. ಜೊತೆಗೆ, ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವ ಮುನ್ನ ವಿವೇಚನೆ ಬಳಸಿಲ್ಲ. ಹಾಗಾಗಿ ಎನ್‌ಐಎ ದಾಖಲಿಸಿರುವ ಎಫ್‌ಐಆರ್ ಅಕ್ರಮವಾಗಿದೆ. ದೇಶಾದ್ಯಂತ ಇಂತಹ ಹಲವು ಕೊಲೆಗಳು ನಡೆಯುತ್ತಿರುತ್ತವೆ. ಒಂದು ಸಮುದಾಯಕ್ಕೆ ಕಿರುಕುಳ ನೀಡುವ ಉದ್ದೇಶದಿಂದಲೇ ತನಿಖೆ ಎನ್‌ಐಎಗೆ ವಹಿಸಲಾಗಿದೆ ಎಂದು ಆರೋಪಿಸಿದ್ದರು.
ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದ ಅಡಿಷನಲ್ ಸಾಲಿಸಿಟರ್ ಜನರಲ್ ಎಸ್.ವಿ.ರಾಜು, ಹರ್ಷ ಕೊಲೆ ಪ್ರಕರಣ ಭಯೋತ್ಪಾದಕರ ಕೃತ್ಯವಾಗಿದೆ. ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ ಕೊಲೆ ಮಾಡಲಾಗಿದೆ. ಮೃತನು ಬಜರಂಗದಳ ಹಾಗೂ ಹಿಂದೂ ಸಂಘಟನೆಯ ಸಕ್ರೀಯ ಕಾರ್ಯಕರ್ತನಾಗಿದ್ದನು. ಎಲ್ಲಾ ಸಾಕ್ಷಿಗಳ ಆಧರಿಸಿಯೇ ಪ್ರಕರಣದ ತನಿಖೆಯನ್ನು ಎನ್‌ಐಎ ವಹಿಸಲಾಗಿದೆ. ಅದರಲ್ಲಿ ಯಾವುದೇ ಲೋಪವಿಲ್ಲಎಂದು ಹೇಳಿದ್ದರು.
ಪ್ರಕರಣದ ಹಿನ್ನೆಲೆ:
೨೦೨೨ರ ಮಾ.೨೦ರಂದು ರಾತ್ರಿ ಶಿವಮೊಗ್ಗದಲ್ಲಿ ಹರ್ಷ ಕೊಲೆ ನಡೆದಿತ್ತು. ಆ ಬಗ್ಗೆ ಮೊದಲು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪೊಲೀಸರು ಐಪಿಸಿ ಸೆಕ್ಷನ್ ೩೦೨ ಮತ್ತು ಸೆಕ್ಷನ್ ೩೪ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿ ಕೆಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದರು. ಅದರ ಮಧ್ಯೆಯೇ ಕೇಂದ್ರ ಸರ್ಕಾರ ೨೦೨೨ರ ಮಾ.೨೧ರಂದು ಆದೇಶ ಹೊರಡಿಸಿ ತನಿಖೆಯನ್ನು ಎನ್‌ಐಎಗೆ ವಹಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು.