ಶಿವಮೊಗ್ಗ ನಗರ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಗೆ ನಗರಾಭಿವೃದ್ದಿ ಸಚಿವರಿಗೆ ಕಾಂಗ್ರೆಸ್ ನಾಯಕರ ಮನವಿ
ಸಂಜೆವಾಣಿ ವಾರ್ತೆ
ಶಿವಮೊಗ್ಗ, ಆ. ೧೪: ಶಿವಮೊಗ್ಗ ಮಹಾನಗರ ಪಾಲಿಕೆಯ ವಾರ್ಡ್ ಗಳ ಚುನಾವಣೆ ಅಧಿಸೂಚನೆ ಹೊರಡಿಸಲು, ಚುನಾವಣಾ ಆಯೋಗ ಸಿದ್ದತೆ ಮಾಡಿಕೊಳ್ಳುತ್ತಿದೆ. ಈ ನಡುವೆ, ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆ ಹಾಗೂ ವಾರ್ಡ್ ಗಳ ಪುನರ್ ವಿಂಗಡಣೆ ನಂತರವಷ್ಟೆ ಚುನಾವಣೆ ನಡೆಸಬೇಕೆಂದು ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಈ ಸಂಬಂಧ ಶಿವಮೊಗ್ಗ ಕಾಂಗ್ರೆಸ್ ಮುಖಂಡರಾದ ಹೆಚ್.ಸಿ.ಯೋಗೇಶ್, ವಿಶ್ವನಾಥ್ ಕಾಶಿ, ಎಂ.ಎಸ್.ಶಿವಕುಮಾರ್ ನೇತೃತ್ವದ ತಂಡ ಬೆಂಗಳೂರಿನಲ್ಲಿ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಅವರನ್ನು ಭೇಟಿಯಾಗಿ ಮನವಿ ಪತ್ರ ಅರ್ಪಿಸಿದೆ.ಬೇಡಿಕೆಯೇನು? : ಶಿವಮೊಗ್ಗ ನಗರವು ಸಾಕಷ್ಟು ಅಭಿವೃದ್ದಿಯಾಗಿದೆ. ಜನಸಂಖ್ಯೆ ಹೆಚ್ಚಾಗಿದೆ. ಹೊರವಲಯದ ಪ್ರದೇಶಗಳಲ್ಲಿ ಬಡಾವಣೆಗಳು ಅಭಿವೃದ್ದಿಯಾಗಿವೆ. ವಿಮಾನ ನಿಲ್ದಾಣ ಸೇರಿದಂತೆ ಹಲವು ಕೈಗಾರಿಕಾ ಪ್ರದೇಶಗಳು ಪಾಲಿಕೆ ವ್ಯಾಪ್ತಿಯಿಂದ ಹೊರಗಿವೆ. ಸಮರ್ಪಕ ಮೂಲಸೌಕರ್ಯ ಕಲ್ಪಿಸಲು ಆಗುತ್ತಿಲ್ಲ ಎಂದು ಸಚಿವರಿಗೆ ಅರ್ಪಿಸಿದ ಮನವಿಯಲ್ಲಿ ಮುಖಂಡರು ತಿಳಿಸಿದ್ದಾರೆ.ಪಾಲಿಕೆಯಲ್ಲಿ ಕೇವಲ 35 ವಾರ್ಡ್ ಗಳಿವೆ. ಕೆಲ ವಾರ್ಡ್ ಗಳಲ್ಲಿ 12 ಸಾವಿರಕ್ಕೂ ಅಧಿಕ ಮತದಾರರಿದ್ದಾರೆ. ಇದರಿಂದ ಸಾಕಷ್ಟು ತೊಂದರೆಯಾಗುತ್ತಿದೆ. ವೈಜ್ಞಾನಿಕವಾಗಿ ವಾರ್ಡ್ ಗಳ ಪುನರ್ ವಿಂಗಡಣೆಯಾಗಬೇಕಾಗಿದೆ ಎಂದು ಮುಖಂಡರು ಹೇಳಿದ್ದಾರೆ.ನಗರದ ಹೊರವಲಯದ ಪ್ರದೇಶಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರ್ಪಡೆ ಮಾಡಿಕೊಳ್ಳಬೇಕು. ಜನಸಂಖ್ಯೆ, ವ್ಯಾಪ್ತಿ, ವಿಸ್ತೀರ್ಣಕ್ಕೆ ಅನುಗುಣವಾಗಿ ವೈಜ್ಞಾನಿಕವಾಗಿ ವಾರ್ಡ್ ಗಳ ಪುನರ್ ವಿಂಗಡಣೆ ಮಾಡಬೇಕು. ಈ ಪ್ರಕ್ರಿಯೆ ನಡೆಸಿದ ನಂತರವಷ್ಟೆ ಪಾಲಿಕೆಗೆ ಚುನಾವಣೆ ನಡೆಸಬೇಕು ಎಂದು ಮುಖಂಡರು ಸಚಿವರಿಗೆ ಆಗ್ರಹಿಸಿದ್ದಾರೆ.ಶಿವಮೊಗ್ಗ ಪಾಲಿಕೆ ವ್ಯಾಪ್ತಿ ಪರಿಷ್ಕರಣೆಗೆ ಸಂಬಂಧಿಸಿದಂತೆ, ಇಷ್ಟರಲ್ಲಿಯೇ ಶಿವಮೊಗ್ಗಕ್ಕೆ ಭೇಟಿ ನೀಡಿ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಅವರು ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಮಂಗಳವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.