ಉಡುಪಿ: ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ ಧ್ವಜಗಳ ಬಳಕೆ ನಿಷೇಧ

ಉಡುಪಿ-ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಪ್ಲಾಸ್ಟಿಕ್ ಬಾವುಟ ಸೇರಿದಂತೆ ಕೆಲವು ಪ್ಲಾಸ್ಟಿಕ್ ಪದಾರ್ಥಗಳ ಬಳಕೆಯನ್ನು ನಿಷೇಧಿಸಲಾಗಿರುತ್ತದೆ.
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಭಾರತ ಸರ್ಕಾರ ಇವರ ಅಧಿಸೂಚನೆಯಲ್ಲಿಯೂ ಸಹ ಏಕ ಬಳಕೆಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ಪ್ಲಾಸ್ಟಿಕ್ ಧ್ವಜಗಳ ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇದಿಸಲಾಗಿರುತ್ತದೆ.
ಕೇಂದ್ರ ಸರ್ಕಾರದ ಗೃಹ ಮಂತ್ರಾಲಯದ ನಿರ್ದೇಶನದಂತೆ ರಾಷ್ಟ್ರೀಯ ಗೌರವ ಕಾಯ್ದೆ, ೧೯೭೧ ಮತ್ತು ಭಾರತದ ಧ್ವಜ ಸಂಹಿತೆ ೨೦೦೨ ರ ಅಡಿ ಎಲ್ಲಾ ಸರ್ಕಾರಿ ಸಂಸ್ಥೆಗಳು, ಖಾಸಗಿ ಸಂಸ್ಥೆಗಳು ಮತ್ತು ಸಾರ್ವಜನಿಕರು ಪ್ರಮುಖ ರಾಷ್ಟ್ರೀಯ, ಸಾಂಸ್ಕೃತಿಕ ಮತ್ತು ಕ್ರೀಡಾಕೂಟಗಳ ಸಂದರ್ಭಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಸಬಾರದು. ಪ್ಲಾಸ್ಟಿಕ್ ಬಾವುಟಗಳನ್ನು ಬಳಸುವ ಬದಲು ಕಾಗದ ಮತ್ತು ಬಟ್ಟೆಗಳಿಂದ ತಯಾರಿಸಿದ ಬಾವುಟಗಳನ್ನು ಬಳಸಬೇಕು ಹಾಗೂ ಸದರಿ ಕಾರ್ಯಕ್ರಮಗಳ ನಂತರ ಉಪಯೋಗಿಸಿದ ಧ್ವಜಗಳನ್ನು ಧ್ವಜದ ಘನತೆಗೆ ಅನುಗುಣವಾಗಿ ವಿಲೇವಾರಿ ಮಾಡಲು ಕ್ರಮಕೈಗೊಳ್ಳಬೇಕು.
ಈ ನಿರ್ದೇಶನವನ್ನು ಉಲ್ಲಂಘಿಸಿದವರ ವಿರುದ್ಧ ಅಪರಾಧದ ಸ್ವರೂಪಕ್ಕೆ ಅನುಗುಣವಾಗಿ ಪರಿಸರ (ಸಂರಕ್ಷಣೆ) ಕಾಯ್ದೆ, ೧೯೮೬ ರ ಸೆಕ್ಷನ್ ೧೯ ರ ಅನ್ವಯ ಪ್ರದತ್ತವಾಗಿರುವ ಅಧಿಕಾರದಂತೆ ಉಲ್ಲಂಘಿಸಿದವರ ಮೇಲೆ ಆಯಾ ವ್ಯಾಪ್ತಿಯಲ್ಲಿ ಬರುವ ನ್ಯಾಯಾಲಯದಲ್ಲಿ ಮೊಕದ್ದಮೆಯನ್ನು ಹೂಡಲು ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ: ಅಪಜೀ ೧೭ ಇಪಿಸಿ ೨೦೧೨, ಬೆಂಗಳೂರು, ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.