ರಾಜಕೀಯ, ಕಾನೂನು ಹೋರಾಟಕ್ಕೆ ಸಿದ್ದ: ಸಿಎಂ ಸಿದ್ದರಾಮಯ್ಯ
ಸಂಜೆವಾಣಿ ನ್ಯೂಸ್
ಮೈಸೂರು: ಆ.11: ರಾಜಕೀಯ ಲಾಭಕ್ಕಾಗಿ ಬಿಜೆಪಿ- ಜೆಡಿಎಸ್ ನವರು ಮಾಡುತ್ತಿರುವ ಸುಳ್ಳು ಆರೋಪಗಳಿಗೆ ನಾನು ಹೆದರುವುದಿಲ್ಲ. ಈ ಆರೋಪಗಳ ವಿರುದ್ಧ ರಾಜಕೀಯ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಿದ್ದವಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಿಜೆಪಿ ಹಾಗೂ ಜೆಡಿಎಸ್ ನ ಆರೋಪಗಳ ಬಗ್ಗೆ ಸರ್ಕಾರದ ಮುಂದಿನ ನಡೆಯ ಬಗ್ಗೆ ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಯಿಸಿ ಮಾತನಾಡಿ, ಜೆಡಿಎಸ್ ಹಾಗೂ ಬಿಜೆಪಿಯ ಪಾದಯಾತ್ರೆಗೆ ಪ್ರತ್ಯುತ್ತರವಾಗಿ ಕಾಂಗ್ರೆಸ್ ಬೃಹತ್ ಜನಾಂದೋಲನವನ್ನು ಮಾಡಿದೆ. ಬಿಜೆಪಿ ಹಾಗೂ ಜೆಡಿಎಸ್ ನವರು ಸುಳ್ಳುಆರೋಪಗಳನ್ನು ಆಧರಿಸಿ ಮಾಡುತ್ತಿರುವ ಪಾದಯಾತ್ರೆ ಮಾಡುತ್ತಿದ್ದು, ಸಿದ್ದರಾಮಯ್ಯನಿಗೆ ಕಪ್ಪು ಬಳಿಯಲು ಪ್ರಯತ್ನಿಸುತ್ತಿದ್ದಾರೆ. ಅವರ ಆರೋಪಗಳು ಸುಳ್ಳು ಎಂದು ಜನರಿಗೆ ಮನವರಿಕೆ ಮಾಡಲು ಜನಾಂದೋಲನ ಮಾಡಲಾಗಿದೆ ಎಂದರು.
ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ಸಂಚು ಹೂಡಿದ್ದಾರೆ. ಸುಳ್ಳು ಆರೋಪಗಳಿಂದ ನನ್ನ ಮೇಲೆ ಕಪ್ಪು ಬಳಿದರೆ, ರಾಜಕೀಯವಾಗಿ ನನ್ನನ್ನು ಮಣಿಸಿ ಲಾಭ ಪಡೆಯಬಹುದು ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿ ಜೆಡಿಎಸ್ ನವರ ಹಗರಣಗಳು ಬೇಕಾದಷ್ಟಿದ್ದು ಅವುಗಳನ್ನು ಬಯಲಿಗೆಳೆಯುತ್ತೇವೆ. ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ, ಯಡಿಯೂರಪ್ಪ ಸೇರಿ ಹಲವರ ಮೇಲೆ ಇರುವ ಹಗರಣಗಳ ವಿರುದ್ಧ ತನಿಖೆ ಕೈಗೊಳ್ಳಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುಖ್ಯಮಂತ್ರಿಗಳು ರಾಜಿನಾಮೆ ನೀಡುವವರೆಗೂ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಜೆಡಿಎಸ್ ನಾಯಕರು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ಸುಳ್ಳು ಆರೋಪಗಳನ್ನಾಧರಿಸಿದ ಹೋರಾಟಗಳಿಗೆ ನಾನು ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ನ ಹೋರಾಟದ ಸತ್ಯಾಸತ್ಯತೆಗಳು ಜನರಿಗೆ ತಿಳಿದಾಗ , ಅವರೇ ಈ ಹೋರಾಟನ್ನು ಹತ್ತಿಕ್ಕುತ್ತಾರೆ ಎಂದು ಹೇಳಿದರು.