ಎಪಿಎಂಸಿಯಲ್ಲಿ ವಿವಿಧ ಕಾಮಗಾರಿಗಳಿಗೆ ದರ್ಶನ್ ಧ್ರುವನಾರಾಯಣ್ ಚಾಲನೆ
ಸಂಜೆವಾಣಿ ವಾರ್ತೆ
ನಂಜನಗೂಡು: ಆ.08:- ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಸುಮಾರು 2.51 ಕೋಟಿ ರೂಪಾಯಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಗುದ್ದಲಿ ಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.
ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ನಂಜನಗೂಡು, 2023 -24ನೇ ಸಾಲಿನ ಆರ್.ಐ.ಡಿ.ಎಫ್ ಯೋಜನೆಯಡಿ ನಂಜನಗೂಡು ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಸುಮಾರು 2.51 ಕೋಟಿ ರೂ.ವೆಚ್ಚದಲ್ಲಿ ಮುಚ್ಚಿದ ಹರಾಜು ಕಟ್ಟೆ, ಕಾಂಕ್ರೀಟ್ ರಸ್ತೆ ಮತ್ತು ಒಳಚರಂಡಿ ನಿರ್ಮಾಣ, ಹಾಗೂ ಜಾನುವಾರು ಮಾರುಕಟ್ಟೆ ಉಪ ಪ್ರಾಂಗಣದಲ್ಲಿ ಮುಚ್ಚಿದ ಹರಾಜು ಕಟ್ಟೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು.
ಬಳಿಕ ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ಕೃಷಿ ಮಾರುಕಟ್ಟೆ ಸಕ್ಕರೆ ಮತ್ತು ಜವಳಿ ಸಚಿವರಾದ ಶ್ರೀ ಶಿವಾನಂದ ಎಸ್ ಪಾಟೀಲ್ ರವರು ನಮಗೆ ಮೂರು ಕೋಟಿ ವೆಚ್ಚದ ಅನುದಾನ ನೀಡಿದ್ದಾರೆ. ಎಪಿಎಂಸಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ. ನಂಜನಗೂಡಿನ ಕೃಷಿ ಉತ್ಪನ್ನ ಮಾರುಕಟ್ಟೆ ಮತ್ತು ಹಳೆ ಕೃಷಿ ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸಲಾಗುವುದು. ಸಿಸಿ ರಸ್ತೆ ಒಳಚರಂಡಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ನಡೆಸಲು ಗುದ್ದಲಿ ಪೂಜೆ ನೆರವೇರಿಸಲಾಗಿದೆ.
ರೈತರಿಗೆ ಯಾವುದೇ ರಜೆ ಇಲ್ಲ ಹಾಗಾಗಿ ಪ್ರತಿದಿನ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯನಿರ್ವಹಿಸಬೇಕು. ಮುದ್ದಹಳ್ಳಿ ಮತ್ತು ಸಿಂಧುವಳ್ಳಿಪುರ ಬಳಿ ಮಾರುಕಟ್ಟೆ ಸ್ಥಾಪನೆ ಮಾಡುವಂತೆ ರೈತರು ಮನವಿ ಮಾಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ಮಾರುಕಟ್ಟೆ ಸ್ಥಾಪನೆಗೆ ಮುಂದಾಗುತ್ತೇವೆ.
ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಗುಣಮಟ್ಟದಿಂದ ಕಾಮಗಾರಿಯನ್ನು ನಡೆಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಎಪಿಎಂಸಿ ಮಾಜಿ ಅಧ್ಯಕ್ಷರಾದ ಮುದ್ದುಮಾದ ಶೆಟ್ಟಿ, ಕೆ ಆರ್ ಮಾದಪ್ಪ ಕೆಂಡಗಣಪ್ಪ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಬಿ.ಮಹೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.