ಹೊತ್ತಿ ಉರಿದ ಕೆ.ಎಸ್.ಆರ್.ಟಿ.ಸಿ ಬಸ್
ಶಿವಮೊಗ್ಗ, ಆ. ೬: ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ವೊಂದು ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಸಾಗರದ ಎಲ್.ಬಿ. ಕಾಲೇಜ್ ಸಮೀಪ ಇಂದು ಬೆಳಿಗ್ಗೆ ನಡೆದಿದೆ.
ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸದರಿ ಬಸ್ ಸೇರಿದ್ದಾಗಿದೆ. ಭಟ್ಕಳದಿಂದ ಹೊನ್ನಾವರ, ಸಾಗರ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿತ್ತು. ಸುಮಾರು ೧೪ ಜನ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಬಸ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಬಸ್ ನಿಲ್ಲಿಸಿದ್ದು, ಪ್ರಯಾಣಿಕರೆಲ್ಲರೂ ಹೊರ ಓಡಿ ಬಂದಿದ್ದಾರೆ. ಕ್ಷಣಮಾತ್ರದಲ್ಲಿಯೇ ಬಸ್ ಬೆಂಕಿಯಿಂದ ಹೊತ್ತಿ ಉರಿಯಲಾರಂಭಿಸಿದೆ ಎಂದು ಹೇಳಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಸ್ ಗೆ ಹೊತ್ತಿದ್ದ ಬೆಂಕಿ ನಂದಿಸಿದ್ದಾರೆ. ಘಟನೆಯ ಕುರಿತಂತೆ ಹೆಚ್ಚಿನ ವಿವರಗಳು ಇನ್ನಷ್ಟೆ ಲಭ್ಯವಾಗಬೇಕಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.