ಇಂಡಿ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ, ಪರಿಶೀಲನೆ
ವಿಜಯಪುರ,ಜು.25: ಇಂಡಿ ತಾಲೂಕಾ ಕಚೇರಿ ಸೇರಿದಂತೆ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ಭೇಟಿ ನೀಡಿ ತಾಲೂಕಾ ಆಡಳಿತದ ಕಾರ್ಯನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.
ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಾಕಿ ಕಡತಗಳ ಪರಿಶೀಲನೆ, ನ್ಯಾಯಾಲಯ ಪ್ರಕರಣಗಳ ಕಡತ, ಆಧಾರ ನೊಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ, ದಾಖಲೆಗಳನ್ನು ಆಧಾರದೊಂದಿಗೆ ಜೋಡಣೆಯ ಪ್ರಗತಿ ಮಾಹಿತಿ, ಜಾತಿ-ಆದಾಯ ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು.
ಇಂಡಿ ಪುರಸಭೆ ಕಚೇರಿಗೆ ಭೇಟಿ ನೀಡಿದ ಅವರು, ಡೆಂಘೀ ನಿಯಂತ್ರಣಕ್ಕೆ ಫಾಗಿಂಗ್ ಸೇರಿದಂತೆ ಅಗತ್ಯ ಕ್ರಮ ವಹಿಸುವಂತೆ ಸಂಬAಧಿಸಿದವರಿಗೆ ಸೂಚನೆ ನೀಡಿದರು. ಬಾಕಿ ಇರುವ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಸಂಗ್ರಹಿಸುವ ಆಸ್ತಿ ಕರ-ನೀರಿನ ಶುಲ್ಕ ಸಂಗ್ರಹಣೆಯಲ್ಲಿ ಪ್ರಗತಿ ಸಾಧಿಸಬೇಕು. ಪುರಸಭೆಯಲ್ಲಿ ನಿರ್ವಹಿಸುತ್ತಿರುವ ಇ-ಆಫೀಸ್‌ಗಳ ಮೂಲಕ ಕಡತಗಳ ಮಾಹಿತಿ ಪಡೆದುಕೊಂಡು ಅವರು, ಸಮರ್ಪಕವಾಗಿ ಕಾರ್ಯನಿರ್ವಹಿಸುವುದನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ಪಟ್ಟಣದಲ್ಲಿನ ಇಂದಿರಾ ಕ್ಯಾಂಟಿನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂಡಿ ಉಪ ವಿಭಾಗಾಧಿಕಾರಿ ಆಬೀದ ಗದ್ಯಾಳ, ತಹಸೀಲ್ದಾರ ಸಂಜಯ ಇಂಗಳೆ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.