ವಿದ್ಯಾಧೀಶ ತೀರ್ಥ ಶ್ರೀಗಳಿಂದ ಮುದ್ರಾಧಾರಣೆ
ಸಂಜೆವಾಣಿ ನ್ಯೂಸ್
ಮೈಸೂರು: ಜು.18:- ಆಷಾಢ ಮಾಸದ ಪ್ರಥಮ ಏಕಾದಶಿ ಪರ್ವಕಾಲ ಹಿನ್ನೆಲೆಯಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಸರಸ್ವತಿಪುರಂ ಶ್ರೀ ಕೃಷ್ಣಧಾಮದಲ್ಲಿ ಆಯೋಜಿಸಲಾಗಿತ್ತು.
ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ ಉಡುಪಿ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು ಹಾಗೂ ಕಿರಿಯ ಶ್ರೀ ವಿದ್ಯಾ ರಾಜೇಶ್ವರ ಪಾದಂಗಳವರು ಭಕ್ತರಿಗೆ ಶಂಖ, ಚಕ್ರಗಳ ಮುದ್ರಾಧಾರಣೆ ನೆರವೇರಿಸಿದರು.
ಬೆಳಗ್ಗೆಯಿಂದಲೇ ಸಹಸ್ರಾರು ಭಕ್ತರಿಗೆ ಮುದ್ರಾಧಾರಣೆ ಮಾಡಿ ಮಾತನಾಡಿದ ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು, ಆಷಾಢಮಾಸದ ಶುಕ್ಲ ಪಕ್ಷದ ಏಕಾದಶಿಯನ್ನು ಶಯನಿ ಏಕಾದಶಿ ಎಂದು ಕರೆಯಲಾಗುತ್ತದೆ. ಈ ದಿನದಿಂದ ಉತ್ಥಾನದ್ವಾದಶಿಯ ತನಕ ಶ್ರೀಮನ್ನಾರಯಣನು ಯೋಗನಿದ್ರೆಯಲ್ಲಿ ತೊಡಗುತ್ತಾನೆ ಅನ್ನೋ ನಂಬಿಕೆ ಇದೆ. ಮಳೆಗಾಲದಲ್ಲಿ ಸೊಳ್ಳೆ, ಕ್ರಿಮಿ ಕೀಟಗಳಿಂದ ಎದುರಾಗುವ ರೋಗ ರುಜಿನಗಳನ್ನು ಎದುರಿಸಲು ಬೇಕಾದ ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೂ ತಪ್ತ ಮುದ್ರಾಧಾರಣೆ ಪೂರಕವಾಗಲಿದೆ ಎಂದರು.
ಚಾತುರ್ಮಾಸ್ಯ ಕೂರುವ ಮೊದಲು ಗೃಹಸ್ಥರು ಹಾಗೂ ಯತಿಗಳು ತಪ್ತ ಮುದ್ರಾಧಾರಣೆ ಮಾಡಿಸಿಕೊಳ್ಳಬೇಕು. ಅನಾನುಕೂಲವಾದವರು ಏಕಾದಶಿ ದಿನದ ಹೊರತಾಗಿಯೂ ಮುದ್ರಾ ಧಾರಣೆ ಮಾಡಿಸಿಕೊಳ್ಳಬಹುದು ಎಂದು ಹೇಳಿದರು.
ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿ ಶಾಸ್ತ್ರಿ ಮಾತನಾಡಿ, ಬೆಳಗ್ಗೆಯಿಂದಲೇ ಮಠಕ್ಕೆ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ನಿಂತು ತೋಳಿಗೆ, ಎದೆಯ ಭಾಗಕ್ಕೆ ಹಾಗೂ ಹೊಟ್ಟೆಯ ಮೇಲೆ ಶಂಖ ಹಾಗೂ ಚಕ್ರದ ಮುದ್ರೆ ಹಾಕಿಸಿಕೊಂಡರು. ಪ್ರತಿ ವರ್ಷವೂ ನಾನಾ ಕಡೆಗಳಿಂದ ಭಕ್ತರು ಆಗಮಿಸಿ ತಪ್ತ ಮುದ್ರೆ ಹಾಕಿಸಿಕೊಳ್ಳುತ್ತಾರೆ. ಸುದರ್ಶನ ಹೋಮ ನಡೆಸಿ ಅದರಲ್ಲಿ ಕಾಯಿಸಿದ ಶಂಖ, ಚಕ್ರ, ಗದ, ಪದ್ಮ ಚಿಹ್ನೆಯನ್ನು ಎದೆಯ ಭಾಗ, ಎಡ ಮತ್ತು ಬಲ ತೋಳಿಗೆ ಹಾಕುವುದನ್ನು ತಪ್ತ ಮುದ್ರಾಧಾರಣೆ ಎಂದು ಕರೆಯಲಾಗುತ್ತದೆ ಎಂದು ಹೇಳಿದರು.
ಇದಕ್ಕೂ ಮುನ್ನ ಮಠದಲ್ಲಿ ಸುರೇಶ್ ಭಟ್ ಹಾಗೂ ಶ್ರೀಕಾಂತ್ ಆಚಾರ್ಯ ನೇತೃತ್ವದಲ್ಲಿ ಸುದರ್ಶನ ಹೋಮ ನೆರೆವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್‍ನ ಉಪಾಧ್ಯಕ್ಷ ರವಿಶಾಸ್ತ್ರಿ ಮತ್ತು ಪಿ. ಎಸ್.ಶೇಖರ್, ಕಾರ್ಯದರ್ಶಿ ಕೆ.ವಿ. ಶ್ರೀಧರ್ ಮತ್ತು ಶ್ರೀ ಕೃಷ್ಣ ಮಿತ್ರ ಮಂಡಳಿಯ ಅಧ್ಯಕ್ಷ ಪಿ.ಜಿ.ಪ್ರವೀಣ್, ಉಪಾಧ್ಯಕ್ಷ ಗೋಪಾಲಕೃಷ್ಣನ್, ವಿಜಯ ವಿಠಲ ವಿದ್ಯಾ ಸಂಸ್ಥೆಯ ಮುಖ್ಯಸ್ಥ ವಾಸುದೇವ್ ಭಟ್ ಹಾಗೂ ಮಿತ್ರ ಮಂಡಳಿಯ ಹಲವು ಸದಸ್ಯರು ಮತ್ತು ಸಹಸ್ರರು ಭಕ್ತಾದಿಗಳು ಭಾಗವಹಿಸಿದ್ದರು.