ಅಧಿವೇಶನದಲ್ಲಿ ಜನಪ್ರತಿನಿಧಿಗಳು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಧ್ವನಿ ಎತ್ತಲಿ
ಕೋಲಾರ,ಜು.೧೮-ರಾಜ್ಯ ವಿಧಾನಸಭೆಯ ಅಧಿವೇಶನ ನಡೆಯುತ್ತಿದ್ದು, ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಂತಾಗಬೇಕು ಎಂದು ಕರವೇ ಜಿಲ್ಲಾ ಕಾರ್ಯದರ್ಶಿ ಯಾನಾದಹಳ್ಳಿ ಎನ್.ಮಂಜುನಾಥ್ ಒತ್ತಾಯಿಸಿದ್ದಾರೆ.
ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಿಲ್ಲೆಯ ಸದ್ಯದ ಪರಿಸ್ಥಿತಿಯಲ್ಲಿ ಡೆಂಗ್ಯೂ ಹರಡುತ್ತಿದ್ದು, ಈ ಬಗ್ಗೆ ಅಗತ್ಯ ನಿವಾರಣಾ ಕ್ರಮಗಳನ್ನು ಕೈಗೊಳ್ಳಲು ವೈದ್ಯರು ಹಾಗು ಸಿಬ್ಬಂದಿಯನ್ನು ಒಳಗೊಂಡಂತೆ ವಿಶೇಷ ತುರ್ತು ಪಡೆಯನ್ನು ರಚಿಸಿ, ಸೂಕ್ತ ಔಷಧಿಗಳನ್ನು ಎಲ್ಲಾ ರೀತಿಯ ಆಸ್ಪತ್ರೆಗಳಲ್ಲಿ ದಾಸ್ತಾನು ಇರುವಂತೆ ಆಗಬೇಕು, ಜೊತೆಯಲ್ಲಿ ಗ್ರಾಮ ಪಂಚಾಯಿತಿ ಹಾಗೂ ನಗರ ಪ್ರದೇಶಗಳಲ್ಲಿ ಜನಜಾಗೃತಿ ಮೂಡಿಸುವಂತಾಗಬೇಕು ಎಂದು ಒತ್ತಾಯಿಸಿದ್ದಾರೆ.
ಮಳೆಯಿಂದ ಬಿತ್ತನೆ ಕಾರ್ಯ ಪ್ರಾರಂಭವಾಗಿದ್ದು, ಬಿತ್ತನೆ ಬೀಜ ಹಾಗೂ ಗೊಬ್ಬರ ಹಾಗೂ ಕೃಷಿ ಸಲಕರಣೆಗಳ ಬೆಲೆ ಏರಿಕೆಯಿಂದ ರೈತರು ಕಂಗಾಲಾಗಿದ್ದು ಕೃಷಿ ಚಟುವಟಿಕೆಗಳು ಕುಂಠಿತವಾಗುತ್ತಿದೆ, ಈ ಬಗ್ಗೆ ಬೆಲೆ ಇಳಿಕೆ ಮಾಡಿ ರೈತರ ನೆರವಿಗೆ ಧಾವಿಸಬೇಕೆಂದು ಆಗ್ರಹಿಸಿದ್ದಾರೆ.
ಜಿಲ್ಲೆಯ ವಿವಿಧ ಕಡೆ ರಾಸುಗಳಿಗೆ ಬೊಬ್ಬೆ ರೋಗ ಕಾಣಿಸಿಕೊಳ್ಳುವ ಲಕ್ಷಣಗಳಿದ್ದು, ಇದು ವ್ಯಾಪಕವಾಗಿ ಹರಡುವ ಮೊದಲು, ತಕ್ಷಣ ಚಿಕಿತ್ಸೆ ಕ್ರಮ ಕೈಗೊಳ್ಳಬೇಕು ಆದರೆ ಪಶು ವೈದ್ಯರು ಹಾಗೂ ಲಸಿಕೆ ಕೊರತೆಯಿಂದ, ಚಿಕಿತ್ಸೆ ಇಲ್ಲದೆ ರಾಸುಗಳು ಪರದಾಡುವಂತಾಗಿದೆ. ಸಂಕಷ್ಟದಲ್ಲಿ ಗೋಪಾಲಕರು ಇದ್ದಾರೆ, ಈ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಅತಿ ಹೆಚ್ಚು ಮಾಜಿ ಹಾಗೂ ಹಾಲಿ ಸೈನಿಕರಿರುವ ಕೋಲಾರ ಜಿಲ್ಲೆಯಲ್ಲಿ ತೀರಾ ಅಗತ್ಯವಿರುವ ವೈದ್ಯಕೀಯ ಚಿಕಿತ್ಸಾ ಆಸ್ಪತ್ರೆ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಹಾಗೂ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಜಿಲ್ಲೆಯಲ್ಲಿ ಇ.ಎಸ್.ಐ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಗಮನ ಸೆಳೆಯುವಂತೆ ಆಗಬೇಕೆಂದು ಒತ್ತಾಯಿಸಿದ್ದಾರೆ.