ಶಿಕಾರಿಪುರ ಅಂಜನಾಪುರ ಜಲಾಶಯ ಭರ್ತಿ : ಯಡಿಯೂರಪ್ಪ ಪುತ್ರರಿಂದ ಬಾಗಿನ ಅರ್ಪಣೆ
ಸಂಜೆವಾಣಿ ವಾರ್ತೆ
ಶಿವಮೊಗ್ಗ, ಜು. ೧೮; ಶಿಕಾರಿಪುರ ತಾಲೂಕಿನಾದ್ಯಂತ ಮುಂಗಾರು ಮಳೆ ಚುರುಕುಗೊಂಡಿದೆ. ಈ ನಡುವೆ ತಾಲೂಕಿನ ಸಾವಿರಾರು ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುವ, ತಾಲೂಕಿನ ರೈತರ ಜೀವನಾಡಿಯಾದ ಅಂಜನಾಪುರ ಜಲಾಶಯ ಗರಿಷ್ಠ ಮಟ್ಟ ತಲುಪಿದ್ದು, ನೀರು ಹೊರ ಹರಿಯಲಾರಂಭಿಸಿದೆ.ಅಂಜನಾಪುರ ಡ್ಯಾಂ 23 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ನೀರಾವರಿ ಜೊತೆಗೆ ಶಿಕಾರಿಪುರ ಹಾಗೂ ಶಿರಾಳಕೊಪ್ಪ ಪಟ್ಟಣಗಳಿಗೆ ಡ್ಯಾಂನಿಂದ ಕುಡಿಯುವ ನೀರು ಪೂರೈಕೆಯಾಗುತ್ತದೆ. ಡ್ಯಾಂ ಗರಿಷ್ಠ ಮಟ್ಟ ತಲುಪಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.ಈ ನಡುವೆ ಬುಧವಾರ ಜಲ ಸಂಪನ್ಮೂಲ ಇಲಾಖೆಯಿಂದ ಅಂಜನಾಪುರ ಡ್ಯಾಂಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹಾಗೂ ಕ್ಷೇತ್ರದ ಶಾಸಕರೂ ಆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜಲಾಶಯಕ್ಕೆ ಪೂಜೆ ಸಲ್ಲಿಸಿ ಕುಟುಂಬ ಸದಸ್ಯರೊಂದಿಗೆ ಬಾಗಿನ ಅರ್ಪಿಸಿದರು.ತುಂಗಾ ಜಲಾಶಯ ವ್ಯಾಪ್ತಿ ಹಾಗೂ ಶಿಕಾರಿಪುರ ತಾಲೂಕಿನಾದ್ಯಂತ ಉತ್ತಮ ವರ್ಷಧಾರೆಯಾಗುತ್ತಿದೆ. ಇದರಿಂದ ತಾಲೂಕಿನ ಅನ್ನದಾತರ ಜೀವನಾಡಿಯಾದ ಅಂಜನಾಪುರ ಜಲಾಶಯ ಭರ್ತಿಯಾಗಿದೆ. ತನ್ನ ವೈಭವವನ್ನು ಮರಳಿ ಪಡೆದಿದೆ. ಇಂದು ಜಲಸಂಪನ್ಮೂಲ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಬಿ.ವೈ. ವಿಜಯೇಂದ್ರ ಅವರೊಂದಿಗೆ ಭಾಗಿಯಾಗಿ ಬಾಗಿನ ಅರ್ಪಿಸಲಾಯಿತು’ ಎಂದು ಲೋಕಸಭಾ ಸದಸ್ಯ ಬಿ.ವೈ.ವಿಜಯೇಂದ್ರ ಅವರು ಸಾಮಾಜಿಕ ಜಾಲತಾಣದ ಪೋಸ್ಟ್ ನಲ್ಲಿ ಹೇಳಿಕೊಂಡಿದ್ದಾರೆ.