ನೌಕರರ ಬೇಡಿಕೆ ಈಡೇರಿಕೆಗೆ ಶಾಸಕ ಗವಿಯಪ್ಪಗೆ ಮನವಿ
ಸಂಜೆವಾಣಿ ವಾರ್ತೆ
ಹೊಸಪೇಟೆ ಜು14: 7ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡುವುದು ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವಿಜಯನಗರ ಜಿಲ್ಲಾ ಘಟಕದ ಪದಾಧಿಕಾರಿಗಳು, ಶುಕ್ರವಾರ ಶಾಸಕ ಎಚ್.ಆರ್.ಗವಿಯಪ್ಪ ಮತ್ತು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರಿಗೆ ಮನವಿ ಸಲ್ಲಿಸಿದರು.
ನೌಕರರಿಗೆ ಮಾಕರವಾದ ಎನ್.ಪಿ.ಎಸ್.ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಬೇಕು ಹಾಗೂ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬುದು ಇತರ ಎರಡು ಬೇಡಿಕೆಗಳ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಕೋರಿ ಮನವಿ ಸಲ್ಲಿಸಿದರು.
ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ರಾಜ್ಯ ಕಾರ್ಯಕಾರಣಿ ತೀರ್ಮಾನದಂತೆ ವಿಜಯನಗರ ಜಿಲ್ಲಾ ನೌಕರರು ಅನಿವಾರ್ಯವಾಗಿ ಬೇಡಿಕೆ ಈಡೇರುವವರೆಗೆ ಅನಿರ್ದಿಷ್ಟ ಅವಧಿಗೆ ಸರ್ಕಾರಿ ಕರ್ತವ್ಯಕ್ಕೆ ಗೈರು ಹಾಜರಾಗಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.
ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಮಲ್ಲಿಕಾರ್ಜುನ ಗೌಡ, ಕಾರ್ಯದರ್ಶಿ ಕಡ್ಲಿ ವೀರಭದ್ರೇಶ, ಗೌರವ ಅಧ್ಯಕ್ಷ ಎಚ್.ಜೀವಣ್ಣ, ರಾಜ್ಯ ಪರಿಷತ್ ಸದಸ್ಯ ಎಸ್.ಬಸವರಾಜ್, ಜಿಲ್ಲಾ ಖಜಾಂಜಿ ರಾಘವೇಂದ್ರ ಹೆಗ್ಡಿಯಾಳ್ ಇತರರು ಇದ್ದರು.
ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಗವಿಯಪ್ಪ, ಸರ್ಕಾರಿ ನೌಕರರ ಬೇಡಿಕೆಗಳು ನ್ಯಾಯಯುತವಾಗಿದ್ದು, ಬೇಡಿಕೆಗಳನ್ನು ಈಡೇರಿಸುವಂತೆ ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯರವರ ಗಮನಕ್ಕೆ ತರುತ್ತೇನೆಂದು ಭರವಸೆ ನೀಡಿದರು.
ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿ, ಸರ್ಕಾರಿ ನೌಕರರ ಬೇಡಿಕೆಗಳನ್ನು ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ತಿಳಿಸಿದರು.