ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದಸದಸ್ಯ ಎಸ್.ಕೆ.ವಂಟಗೋಡಿ ಜಿಲ್ಲಾ ಪ್ರವಾಸ
ಸಂಜೆವಾಣಿ ವಾರ್ತೆ
ಹೊಸಪೇಟೆ ವಿಜಯನಗರ ಜು2: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್.ಕೆ.ವಂಟಗೋಡಿ ಸೋಮವಾರ ವಿಜಯನಗರ ಜಿಲ್ಲೆಗೆ ಭೇಟಿ ನೀಡಿದರು.
ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಸಂಚರಿಸಿ ಕೂಡ್ಲಿಗಿ ಪಟ್ಟಣದಲ್ಲಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಭೇಟಿ ನೀಡಿ ಅಲ್ಲಿನ  ಕೊಠಡಿ ಸೌಕರ್ಯ, ಶುದ್ಧ ಕುಡಿಯುವ ನೀರು ಸೇರಿದಂತೆ ನಾನಾ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಆಹಾರ ಸಾಮಗ್ರಿ ದಾಸ್ತಾನು ಕೇಂದ್ರ ಮತ್ತು ಅಡುಗೆ ಕೋಣೆಗಳಿಗೆ ಸಹ ಭೇಟಿ ನೀಡಿ ಪರಿಶೀಲಿಸಿದರು. ಅಧ್ಯಯನಕ್ಕೆ ವಿದ್ಯಾರ್ಥಿಗಳಿಗೆ ಮಾಡಿರುವ ಪ್ರತ್ಯೇಕ ಕೋಣೆಗಳು ಮತ್ತು ಕಂಪ್ಯೂಟರ್ ಶಿಕ್ಷಣಕ್ಕೆ ಮಾಡಿರುವ ವ್ಯವಸ್ಥೆಯನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಸದಾಕಾಲ ವಿದ್ಯಾರ್ಥಿನಿಲಯಗಳಲ್ಲಿ ಇರಬೇಕು. ವಿದ್ಯಾರ್ಥಿಗಳಿಗೆ ಗುಣಮಟ್ಟದ ಊಟದ ವ್ಯವಸ್ಥೆ ಮಾಡಬೇಕು ಎಂದು ಅಧ್ಯಕ್ಷರು ಇದೆ ವೇಳೆ ವಸತಿ ನಿಲಯಗಳ ನಿಲಯ ಪಾಲಕರಿಗೆ ನಿರ್ದೇಶನ ನೀಡಿದರು.
ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಎಸ್.ವಿ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಮಚಂದ್ರಪ್ಪ ಕೆ.ಬಿ., ತಹಸೀಲ್ದಾರ ರೇಣುಕಾ ಎಂ.ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದು ಸದಸ್ಯರು ಕೋರಿದ ಮಾಹಿತಿಯನ್ನು ನೀಡಿದರು.