ಅರ್ಧಕ್ಕೆ ನಿಂತ ಮೇಲ್ಸೇತುವೆ ನಿರ್ಮಾಣ ಕಾಮಗಾರಿ
ವಾಡಿ,ಜು.1-ಇಲ್ಲಿನ ಬಲರಾಮ ಚೌಕ್ ಹತ್ತಿರ ನಿರ್ಮಿಸಲಾಗುತ್ತಿರುವ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದೆ.
ಕಲಬುರಗಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ-150 ರಲ್ಲಿ ನಿರ್ಮಿಸಲಾಗುತ್ತಿರುವ ಈ ಮೇಲ್ಸೇತುವೆ ನಿರ್ಮಾಣ ಕಾಮಗಾರಿಗೆ ಹಿಂದಿನ ಸಂಸದರಾದ, ಈಗಿನ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಿದ್ದರು. ಇನ್ನೇನು ಸೇತುವೆ ಕಾಮಗಾರಿ ಮುಗಿಯಲಿದೆ ಎನ್ನುವಷ್ಟರಲ್ಲಿಯೇ ಲೋಕಸಭೆ ಚುನಾವಣೆಗಳು ನಡೆದು ಖರ್ಗೆ ಅವರು ಸೋತು, ಡಾ.ಉಮೇಶ್ ಜಾಧವ್ ಅವರು ಸಂಸದರಾಗಿ ಆಯ್ಕೆಯಾದರು. ಜಾಧವ್ ಅವರ ಅವಧಿಯಲ್ಲಾದರೂ ಸೇತುವೆ ನಿರ್ಮಾಣ ಕಾಮಗಾರಿ ಮುಗಿಯಲಿದೆ ಎಂದು ಜನ ನಿರೀಕ್ಷಿಸಿದ್ದರು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಈಗ ಮತ್ತೆ ಲೋಕಸಭೆ ಚುನಾವಣೆಗಳು ನಡೆದು ಡಾ.ಉಮೇಶ್ ಜಾಧವ್ ಅವರು ಸೋತು ರಾಧಾಕೃಷ್ಣ ದೊಡ್ಡಮನಿ ಅವರ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈಗಲಾದರೂ ಅವರು ಸೇತುವೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಲು ಮುತುವರ್ಜಿ ವಹಿಸುವರೆ ಎಂಬುವುದನ್ನು ಕಾದು ನೋಡಬೇಕಾಗಿದೆ.