ಜಿಲ್ಲಾಧಿಕಾರಿಗಳಿಂದ ನಗರದ ಬಾಲಮಂದಿರ ಹಾಗೂ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ, ಪರಿಶೀಲನೆ
ಸಂಜೆವಾಣಿ ವಾರ್ತೆ,
ವಿಜಯಪುರ, ಜು.1: ನಗರದ ಟಕ್ಕೆಯಲ್ಲಿರುವ ಕಿರಿಯರ ಬಾಲಕರ ಸರಕಾರಿ ಬಾಲ ಮಂದಿರಕ್ಕೆ ಭಾನುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ದಿಢೀರ ಭೇಟಿ ನೀಡಿ, ಬಾಲಮಂದಿರದ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು.
ಬಾಲ ಮಂದಿರದ ಅಡುಗೆ ಕೊಠಡಿ ವೀಕ್ಷಣೆ ನಡೆಸಿ, ಅಡುಗೆ ಕೊಠಡಿಯಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಉತ್ತಮ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಮಕ್ಕಳಿಗೆ ಪೂರೈಸಬೇಕು. ಬಾಲಮಂದಿರದ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು. ಮಕ್ಕಳಿಂದ ಕುಂದುಕೊರತೆ ಆಲಿಸಿದ ಅವರು, ಮಕ್ಕಳಿಗೆ ಆರೋಗ್ಯ ಸಮಸ್ಯೆಯಾಗದಂತೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಾಲಮಂದಿರದ ಆವರಣವನ್ನು ಸ್ವಚ್ಛವಾಗಿಡಬೇಕು. ಉತ್ತಮ ಗುಣಮಟ್ಟದ ಆಹಾರ ಹಾಗೂ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವುದನ್ನು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ:
ನಗರದ ಟಕ್ಕೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿನ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಕಟ್ಟಡ ಪರಿಶೀಲನೆ, ಆಹಾರ ಧಾನ್ಯಗಳ ಸಂಗ್ರಹ ಕೊಠಡಿ,ಒದಗಿಸುತ್ತಿರುವ ವೈದ್ಯಕೀಯ ಸೇವೆ ಮಾಹಿತಿ, ಅಡುಗೆ ಕೊಠಡಿ, ಆಹಾರದ ಗುಣಮಟ್ಟ ಹಾಗೂ ಕುಡಿಯುವ ನೀರು ಸೇರಿದಂತೆ ಕಲ್ಪಿಸಿರುವ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ನಿರಾಶ್ರಿತರಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ತರಬೇತಿ ಹಾಗೂ ಕಟ್ಟಡದ ಆವರಣದಲ್ಲಿ ವಿವಿಧ ಬಗೆಯ ಗಿಡಗಳನ್ನು ಬೆಳೆಸಿ, ಪರಿಸರ ಪ್ರಜ್ಞೆ ಮೂಡಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲಿನ ನಿರಾಶ್ರಿತರೊಂದಿಗೆ ಸಂವಾದ ನಡೆಸಿ, ಅವರ ಯೋಗಕ್ಷೇಮ ವಿಚಾರಿಸಿದರು.
ಸಮರ್ಪಕ ನೀರಿನ ವ್ಯವಸ್ಥೆ ಒದಗಿಸುವಂತೆ ಜಲಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 142 ಪುರುಷ ಹಾಗೂ 33 ಜನ ಮಹಿಳೆಯರೂ ಸೇರಿದಂತೆ 175 ನಿರಾಶ್ರಿತರಿದ್ದು, ಅವರ ಆರೋಗ್ಯದ ಹಿತ ದೃಷ್ಟಿಯಿಂದ ಈ ಕೇಂದ್ರದಲ್ಲಿ ಹೊರ ಗುತ್ತಿಗೆ ಆಧಾರದ ಇಬ್ಬರೂ ವೈದ್ಯರು ಹಾಗೂ ನಸಿರ್ಂಗ್ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ನಿರಾಶ್ರಿತರಿಗೆ ಪ್ರತಿನಿತ್ಯ ಬೆಳಿಗ್ಗೆ ಯೋಗಭ್ಯಾಸ ಮಾಡಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ ಮಾಹಿತಿ ನೀಡಿದರು.
ಪರೀಕ್ಷಾ ಕೇಂದ್ರಗಳಿಗೆ ಭೇಟಿ:
ಜೂನ್ 30 ರಂದು ಶಿಕ್ಷಕರ ಅರ್ಹತಾ (ಟಿಇಟಿ-2024) ಪರೀಕ್ಷೆಗಳು ನಗರದ 43 ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನಗರದ ಚೇತನಾ ಹಾಗೂ ಬಂಜಾರ ಕಾಲೇಜಿನಲ್ಲಿ ನಡೆದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರೀಕ್ಷಾ ವ್ಯವಸ್ಥೆ, ಆಸನದ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದ ಅವರು, ಪರೀಕ್ಷಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಆಗದಂತೆ ಸುಗಮ ಹಾಗೂ ಸುವ್ಯವಸ್ಥಿತ ಪರೀಕ್ಷೆ ನಡೆಸುವಂತೆ ಪರೀಕ್ಷಾಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಿರಾಶ್ರಿತರ ಪರಿಹಾರ ಕೇಂದ್ರದ ಅಧೀಕ್ಷಕ ಬಸವರಾಜ ನಾಟೀಕಾರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.