ಬೆಂಗಳೂರು: ನಾಯಕತ್ವ ಬದಲಾವಣೆ ಸೇರಿದಂತೆ ಯಾವುದೇ ವಿಚಾರದ ಕುರಿತು ನಾನು ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಪ್ರಹ್ಲಾದ್ ಜೋಶಿ ನಿರಾಕರಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ನಂತರ ಸಂಭಾವ್ಯ ಸಿಎಂ ಅಂತಲೇ ಪ್ರಹ್ಲಾದ್ ಜೋಶಿಯವರ ಹೆಸರು ಮುನ್ನೆಲೆಗೆ ಬಂದಿದ್ದು, ಸಾಕಷ್ಟು ಚರ್ಚೆ ಸಹ ನಡೆಯುತ್ತಿದೆ. ಆದರೆ ಜೋಶಿ ಮಾತ್ರ ಯಾವುದಕ್ಕೂ ಪ್ರತಿಕ್ರಿಯಿಸುವುದಿಲ್ಲ ಎಂದಿದ್ದಾರೆ.ಸಿಎಂ ಹೇಳಿದ್ದೇನು?:
ತಾವು ರಾಜೀನಾಮೆ ನೀಡುವ ಕುರಿತು ಪ್ರತಿಕ್ರಿಯಿಸಿದ ಸಿಎಂ, ಕೋವಿಡ್, ಪ್ರವಾಹ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಬೇಡ ಎಂಬ ರೀತಿಯಲ್ಲಿ ಪರೋಕ್ಷವಾಗಿ ಮುಖ್ಯಮಂತ್ರಿಗಳು ಕಾದು ನೋಡೋಣ ಅಂತಾ ಹೇಳಿದರು. ನಾಳೆ ಸಾಧ್ಯವಾದರೆ ಮಧ್ಯಾಹ್ನದ ಬಳಿಕ ಕಾರವಾರಕ್ಕೆ ಭೇಟಿ ನೀಡುವೆ. ಕೇಂದ್ರ ಸರ್ಕಾರ ಏನೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧನಿದ್ದೇನೆ. ಚುನಾವಣೆಗೆ ಒಂದು ಮುಕ್ಕಾಲು ವರ್ಷ ಇದೆ. ಹಾಗಾಗಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ. ನೂರು ಸಿದ್ದರಾಮಯ್ಯ ಬಂದ್ರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಬರಲಿದೆ ಎಂದು ಭವಿಷ್ಯ ನುಡಿದರು.ಇದೇ ವೇಳೆ ಮಾಜಿ ಸಚಿವ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್‍ವೈ, ನಮ್ಮ ರಾಜ್ಯದಲ್ಲಿ ಬೇರೆ ಯಾರಿಗೂ ಸಿಗದ ಸ್ಥಾನಮಾನ ನನಗೆ ಸಿಕ್ಕಿದೆ. ಅದಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ ಅವರಿಗೆ ವಂದನೆ ಸಲ್ಲಿಸುವೆ. ಪಕ್ಷದಲ್ಲಿ ನಾವೆಲ್ಲರೂ ಕಾರ್ಯಕರ್ತರಾಗಿದ್ದು, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದು ಹೇಳಿದರು. ಇನ್ನೂ ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ, ಕಾದು ನೋಡೋಣ ಎಂದು ಮೂರು ಬಾರಿ ಹೇಳಿ ಹೊರಟರು.Sign in to your account
Username or Email Address


Password

 Remember Me


