ಶಿವಮೊಗ್ಗ: ಭವಿಷ್ಯದ ಕ್ರೀಡಾಪಟುಗಳನ್ನು ಸಜ್ಜುಗೊಳಿಸಲು ಕರ್ನಾಟಕ ರಾಜ್ಯಕ್ಕೆ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲ ಸೌಕರ್ಯಗಳನ್ನು ಒದಗಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಹೇಳಿದರು.ಸಹ್ಯಾದ್ರಿ ಕಾಲೇಜಿನಲ್ಲಿ ಸುಮಾರು 5 ಕೋಟಿ ರೂ. ವೆಚ್ಚದ ಒಳಾಂಗಣ ಕ್ರೀಡಾಂಗಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಕಿರಣ್ ರಿಜಿಜು, ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಉತ್ತಮ ವಾತಾವರಣವಿದೆ. ಕ್ರೀಡಾ ಚಟುವಟಿಕೆಗಳ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮುಂದಿಟ್ಟಿರುವ ಎಲ್ಲಾ ಬೇಡಿಕೆಗಳನ್ನು ಒಂದೊಂದಾಗಿ ಈಡೇರಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯನ್ನು ಕರ್ನಾಟಕದಲ್ಲಿ ಮಾತ್ರವಲ್ಲದೆ ದೇಶದಲ್ಲೇ ಉತ್ತಮ ಕ್ರೀಡಾ ಕೇಂದ್ರವಾಗಿ ರೂಪಿಸಲು ಎಲ್ಲಾ ನೆರವು ಒದಗಿಸಲಾಗುವುದು. ಮುಂದಿನ ಒಲಂಪಿಕ್ಸ್ ನಲ್ಲಿ ಕರ್ನಾಟಕದಿಂದ ಹೆಚ್ಚಿನ ಚಿನ್ನದ ಪದಕದ ನಿರೀಕ್ಷೆ ಹೊಂದಿರುವುದಾಗಿ ತಿಳಿಸಿದರು.ನಮ್ಮ ದೇಶದಲ್ಲಿ ವಿಶ್ವದಲ್ಲೇ ಅತಿ ಹೆಚ್ಚಿನ ಸಂಖ್ಯೆಯ ಯುವ ಜನಸಂಖ್ಯೆಯಿದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗಳನ್ನು ಮಾಡಲು ನಮಗೆ ಉತ್ತಮ ಅವಕಾಶಗಳಿವೆ. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಖೇಲೋ ಇಂಡಿಯಾ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಹೆಚ್ಚಿನ ನೆರವು ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಇದರ ಗರಿಷ್ಟ ಪ್ರಯೋಜನವನ್ನು ಯುವ ಜನಾಂಗ ಪಡೆದುಕೊಳ್ಳಬೇಕು ಎಂದರು.2028ರ ಒಲಿಂಪಿಕ್ಸ್ ನಲ್ಲಿ ಪದಕ ಪಟ್ಟಿಯಲ್ಲಿ ನಮ್ಮ ದೇಶ ಟಾಪ್ 10ರ ಒಳಗೆ ಇರುವುದು ನಮ್ಮ ಗುರಿ. ಮುಂದಿನ ವರ್ಷಗಳಲ್ಲಿ ಭಾರತದಲ್ಲಿ ಒಲಂಪಿಕ್ಸ್ ಆಯೋಜನೆ ಮಾಡುವ ಕುರಿತು ಈಗಾಗಲೇ ಸಿದ್ಧತೆಗಳನ್ನು ವಿವಿಧ ಹಂತಗಳಲ್ಲಿ ಪ್ರಾರಂಭಿಸಲಾಗಿದೆ. ದೇಶದ ಸುಮಾರು ಶೇ.70ರಷ್ಟು ಮಂದಿ ಯಾವುದೇ ರೀತಿಯ ದೈಹಿಕ ವ್ಯಾಯಾಮಗಳನ್ನು ನಡೆಸುತ್ತಿಲ್ಲ. ಆರೋಗ್ಯ ಪೂರ್ಣರಾಗಿದ್ದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ಹಿನ್ನೆಲೆಯಲ್ಲಿ ಫಿಟ್ ಇಂಡಿಯಾ ಯೋಜನೆ ಜಾರಿಗೊಳಿಸಲಾಗಿದೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಸಹ್ಯಾದ್ರಿ ಕಾಲೇಜಿಗೆ ಅಗತ್ಯವಾದ ಕ್ರೀಡಾ ಮೂಲಸೌಕರ್ಯಗಳನ್ನು ಒದಗಿಸಲು ಮುಂದಿನ ದಿನಗಳಲ್ಲಿ ಪ್ರಯತ್ನಿಸಲಾಗುವುದು ಎಂದು ನುಡಿದರು.ಯುವಜನ ಸೇವಾ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ, ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ, ಕುವೆಂಪು ವಿಶ್ವವಿದ್ಯಾಲಯ ಕುಲಪತಿ ವೀರಭದ್ರಪ್ಪ, ಹೆಚ್ಚುವರಿ ಅಪರ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.






 Advertisement 




Sign in to your account
Username or Email Address


Password

 Remember Me


