ಶಿವಮೊಗ್ಗ: ಜಿಲ್ಲೆಯಲ್ಲಿ ನಡೆಯುತ್ತಿರುವ ನಿರಂತರ ಜ್ಯೋತಿ ಯೋಜನೆಯ ವಿದ್ಯುತ್ ಕಾಮಗಾರಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ.ಈ ಯೋಜನೆಯಲ್ಲಿನ ಅವ್ಯವಹಾರ ವಿಚಾರವಾಗಿ ಆರೋಪ ಕೇಳಿ ಬಂದ ಹಿನ್ನೆಲೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವ ಕೆ. ಈಶ್ವರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಮತ್ತು ಮೆಸ್ಕಾಂ ಅಧಿಕಾರಿಗಳು ಸಭೆ ನಡೆಸಿದರು.ಸಭೆಯಲ್ಲಿ ಮಾತನಾಡಿದ ಅವರು, ಇದು 226 ಕೋಟಿ ವೆಚ್ಚದ ಯೋಜನೆಯಾಗಿದ್ದು, ಈಗಾಗಲೇ 148 ಕೋಟಿ ಹಣವನ್ನು ಗುತ್ತಿಗೆದಾರ ಪಡೆದಿದ್ದಾನೆ. ಇದರಲ್ಲಿಯೇ 60 ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು. ಅಲ್ಲದೆ ಕಾಮಗಾರಿಯ ಬಗ್ಗೆ ಹಿರಿಯ ಅಧಿಕಾರಿಗಳು ನಿಗಾ ವಹಿಸದೇ ಇರುವುದರಿಂದ ಈ ಅವ್ಯವಹಾರ ನಡೆದಿದೆ ಎಂದು ಅಧಿಕಾರಿಗಳ ವಿರುದ್ದ ಸಚಿವ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.ಅಧಿಕಾರಿಗಳು ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸದೇ ಬಿಲ್ ಮಾಡಿಕೊಟ್ಟಿದ್ದಾರೆ. ಇನ್ನು ಮುಂದಿನ ಬಿಲ್ ಮಾಡದೇ ತಡೆ ಹಿಡಿಯುವಂತೆ ಸಚಿವ ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಈಗ ಸಭೆ ನಡೆಸಿ ಎಚ್ಚರಿಕೆ ನೀಡಿದ್ದೇನೆ. ಮತ್ತೆ ಮುಂದಿನ ವಾರದಲ್ಲಿ ಮತ್ತೊಮ್ಮೆ ಸಭೆ ನಡೆಸುತ್ತೇನೆ. ಅಷ್ಟರೊಳಗೆ ಅಧಿಕಾರಿಗಳು ಸರಿಪಡಿಸಿಕೊಳ್ಳದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಸಚಿವ ಈಶ್ವರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.






 Advertisement 




Sign in to your account
Username or Email Address


Password

 Remember Me


