ಬೆಂಗಳೂರು: ಹೈಕೋರ್ಟ್‌ (High Court) ತನಿಖೆ ಮಾತ್ರ ಅನುಮತಿ ನೀಡಿದೆ ಹೊರತು ಪ್ರಾಸಿಕ್ಯೂಷನ್‌ಗೆ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.ಹೈಕೋರ್ಟ್‌ ತೀರ್ಪಿನ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಎನ್‌ಎಸ್‌ ಸೆಕ್ಷನ್‌ 218, ಭ್ರಷ್ಟಾಚಾರ ತಡೆ ಕಾಯ್ದೆ (PC Act) ಸೆಕ್ಷನ್ 17 ಎ, 19 ರ ಅಡಿ ಪ್ರಾಸಿಕ್ಯೂಷನ್‌ಗೆ ದೂರುದಾರರು ಅನುಮತಿ ಕೇಳಿದ್ದರು. ಪಿಸಿ ಕಾಯ್ದೆಯ 19 ಅಡಿ ಕೇಳಿದ್ದ ಮನವಿಯನ್ನು ರಾಜ್ಯಪಾಲರೇ ತಿರಸ್ಕರಿಸಿದ್ದರು. ಈಗ ಕೋರ್ಟ್‌ ಬಿಎನ್‌ಎಸ್‌ ಸೆಕ್ಷನ್‌ 218ರ ಅಡಿ ನೀಡಿರುವ ಅನುಮತಿಯನ್ನು ತಿರಸ್ಕರಿಸಿದೆ. ನ್ಯಾಯಾಲಯ ಈಗ ಪಿಸಿ ಕಾಯ್ದೆಯ ಸೆಕ್ಷನ್‌ 17 ಎ ಮಾತ್ರ ಸೀಮಿತಗೊಳಿಸಿ ಆದೇಶ ಪ್ರಕಟಿಸಿದೆ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ಕುಟುಂಬದವರೇ ಫಲಾನುಭವಿ ಆಗಿರೋದ್ರಿಂದ ತನಿಖೆ ಅಗತ್ಯವಿದೆ: ಹೈಕೋರ್ಟ್‌ ಆದೇಶದಲ್ಲಿ ಏನಿದೆ?ಪಿಸಿ ಕಾಯ್ದೆಯ ಸೆಕ್ಷನ್‌ 17 ಎ ಅಡಿ ಸೀಮಿತಗೊಳಿಸಿ ಆದೇಶ ಪ್ರಕಟಿಸಿದ್ದರಿಂದ ತನಿಖೆ ಮಾತ್ರ ಅನುಮತಿ ಸಿಕ್ಕಿದೆ. ಇದು ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿ ಅಲ್ಲ. ಇದರ ಮೇಲೆ ಯಾವ ರೀತಿ ಹೋರಾಟ ನಡೆಸಬೇಕು ಎಂಬುದನ್ನು ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.ಹೈಕೋರ್ಟ್ ಆದೇಶ ತೃಪ್ತಿ ಎಂಬ ಪ್ರಶ್ನೆಗೆ ಉತ್ತರಿಸಿ, ಇದೊಂದು ಕಾನೂನಾತ್ಮಕ ಹೋರಾಟ. ಈ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ ಪ್ರತಿಕ್ರಿಯೆ ನೀಡುವುದಾಗಿ ಹೇಳಿದರು. ನನ್ನ ಪ್ರಕಾರ ನಾನು ತಪ್ಪು ಮಾಡಿಲ್ಲ. 17 ಎ ಅಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಬಿ ಎನ್.ಎಸ್.ಎಸ್ ಕಾಯ್ದೆಯಡಿ 218 ಆದೇಶ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದರು. ಇದನ್ನೂ ಓದಿ: MUDA Scam | ಸಿದ್ದರಾಮಯ್ಯಗೆ ಉರುಳಾದ 14 ಸೈಟ್‌ – ಏನಿದು ಹಗರಣ? ಬೆಳಕಿಗೆ ಬಂದಿದ್ದು ಹೇಗೆ?ಬಿಜೆಪಿಯವರು ಮುಖ್ಯಮಂತ್ರಿಗಳು ರಾಜಿನಾಮೆ ಕೊಡಲು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಅವರನ್ನು ನಾವು ಎದುರಿಸುತ್ತೇವೆ. ರಾಜಿನಾಮೆ ಏಕೆ ಕೊಡಬೇಕು ಎಂದು ಪ್ರಶ್ನಿಸಿದರು. ರಾಜಿನಾಮೆ ಕೇಳುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರಿಗೆ ಹೇಳಿಕೆಗೆ ಪ್ರತಿಕ್ರಿಯಿಸಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು ಅವರು ಜಾಮೀನಿನ ಮೇಲೆ ಇದ್ದಾರೆ. ಅವರು ರಾಜಿನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜಿನಾಮೆ ಕೊಡುವ ಬಗ್ಗೆ ಕುಮಾರಸ್ವಾಮಿಯವರನ್ನು ಕೇಳಿ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.ನ್ಯಾಯಾಲಯದ ತೀರ್ಪನ್ನು ನಾನು ಪೂರ್ತಿ ಓದಿಲ್ಲ. ಮಾಧ್ಯಮಗಳಲ್ಲಿ ಬಿತ್ತರಿಸಿರುವುದನ್ನು ಮಾತ್ರ ಓದಿದ್ದೇನೆ ಎಂದರು. ಓದಿದ ನಂತರ ಪುನಃ ಪ್ರತಿಕ್ರಿಯೆ ನೀಡುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸುತ್ತಾ ಬಂದಿದ್ದಾರೆ. ಶೂಭಾಗ್ಯ, ಪಶುಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆಗಳು ಹಾಗೂ ಈಗಿನ ಗ್ಯಾರಂಟಿ ಯೋಜನೆಗಳನ್ನು ಸಹ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಾಮಾಜಿಕ ನ್ಯಾಯ, ಬಡವರ ವಿರೋಧಿಗಳು. ಸರ್ಕಾರಕ್ಕೆ ಕಪ್ಪು ಮಸಿ ಬಳಿಯುವುದು ಅವರ ದುರಾಲೋಚನೆ. ಹೈಕೋರ್ಟ್ ಆದೇಶದ ಪ್ರತಿಯನ್ನು ಸಂಪೂರ್ಣ ಪರಿಶೀಲಿಸಿ , ಮುಂದಿನ ಪ್ರತಿಕ್ರಿಯೆಯನ್ನು ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಇಡೀ ದೇಶದಲ್ಲಿ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ ಎಂದರು.ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಎಂದೂ ಹೆದರುವುದಿಲ್ಲ. ಬಿಜೆಪಿ ಜೆಡಿಎಸ್ ಸಂಚು , ರಾಜಭವನ ದುರುಪಯೋಗ ಹಾಗೂ ದುರ್ಬಳಕೆಗೆ ನಾನು ಹೆದರುವುದಿಲ್ಲ. ರಾಜ್ಯದ ಜನ , ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ ,ಕೇವಲ ನನ್ನ ಮೇಲಷ್ಟೇ ಅಲ್ಲ, ಇಡೀ ದೇಶದ ವಿರೋಧಪಕ್ಷಗಳ ವಿರುದ್ಧ ಮೇಲೆ ಸೇಡಿನ ರಾಜಕೀಯ ಮಾಡುತ್ತಿದ್ದಾರೆ. ಮಾಡುತ್ತಿದ್ದಾರೆ ಎಂದರು.ಬಿಜೆಪಿ ಹಾಗೂ ಜೆಡಿಎಸ್ ನವರು ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಅವರು ಹಣಬಲದಿಂದ,ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಿಜೆಪಿ-ಜೆಡಿಎಸ್ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪಕ್ಷ ಬಂದಿದ್ದರಿಂದ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಡಿದರು. ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ,ಅವರ ಪ್ರಯತ್ನ ವಿಫಲವಾಯಿತು ಎಂದರು.Sign in to your account
Username or Email Address


Password

 Remember Me


