ಬೀದರ್: ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಚೆಕ್ ಡ್ಯಾಮ್ ಹಾಗೂ ಮೊರಂಬಿ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಸಮೀಪ ಗಿಡ ನೆಡಲು ಗುಣಿ ತೊಡುತ್ತಿದ್ದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಈಶ್ವರ್ ಖಂಡ್ರೆ ಅವರು ಕಾಮಗಾರಿಯನ್ನು ಪರಿಶೀಲಿಸಿದರು.ಶನಿವಾರ ಅಧಿಕಾರಿಗಳ ತಂಡದೊಂದಿಗೆ ಉಚ್ಛಾ ಗ್ರಾಮದ ಹೊರವಲಯದಲ್ಲಿ ನಡೆಯುತ್ತಿರುವ ಕಾಮಗಾರಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಲಾಕ್‍ಡೌನ್ ಮಾಡಿರುವುದರಿಂದ ಬಡ ಜನರು, ಕೂಲಿ ಕಾರ್ಮಿಕರು ಕೆಲಸ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕ್ಷೇತ್ರದ ಬಡಜನರಿಗೆ ಯಾವುದೇ ರೀತಿಯ ಸಮಸ್ಯೆ ಆಗಬಾರದು ಎನ್ನುವ ಉದ್ದೇಶದಿಂದ ಈಗಾಗಲೇ ವೈಯಕ್ತಿಕವಾಗಿ ಆಹಾರದ ಪೊಟ್ಟಣ, ತರಕಾರಿ ಕಿಟ್ ನೀಡುವ ಮೂಲಕ ನೆರವು ನೀಡಲಾಗಿದೆ ಎಂದರು.ಬಡವರು, ಕೂಲಿ ಕಾರ್ಮಿಕರು ಸಂಕಷ್ಟದಲ್ಲಿರುವ ಸಮಯದಲ್ಲಿ ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿರುವುದನ್ನು ಮನಗಂಡು ಎಲ್ಲ 40 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ನರೇಗಾದಡಿ ಪ್ರತಿ ಗ್ರಾಮ ಪಂಚಾಯಿತಿಯಿಂದ ಪ್ರತಿದಿನ ಕನಿಷ್ಟ 250 ಜನರಿಗೆ ಕೆಲಸ ನೀಡುವಂತೆ ಸೂಚನೆ ನೀಡಲಾಗಿದೆ. ಯಾರೂ ಆತಂಕ ಪಡಬೇಕಿಲ್ಲ. ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿದಿನ ಒಬ್ಬರಿಗೆ 275 ರೂ. ಯಂತೆ ಕನಿಷ್ಟ 25 ದಿನ ಕೆಲಸ ನೀಡುವಂತೆ ಸೂಚನೆ ನೀಡಲಾಗಿದೆ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು ವಹಿಸಿದ ಕೆಲಸವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದರು. ಈ ವೇಳೆ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ್, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ನಾಯಕರ್ ಇದ್ದರು.Sign in to your account
Username or Email Address


Password

 Remember Me


