ಮೈಸೂರು: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂತಹ ಪರಿಸ್ಥಿತಿಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮಹಾ ಎಡವಟ್ಟು ಮಾಡಿಕೊಂಡಿದ್ದಾರೆ.ಮೈಸೂರು ತಾಲೂಕಿನ ಮೊಸಂಬಾಯನಹಳ್ಳಿಯ 65 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಸೋಂಕಿತ ವೃದ್ಧನ ಕುಟುಂಬಸ್ಥರನ್ನು ಒಂದೇ ಅಂಬುಲೆನ್ಸ್‌ನಲ್ಲಿ ಶನಿವಾರ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.ಯುವತಿ, ಬಾಲಕಿ ಹಾಗೂ ಹಿರಿಯರು ಸೇರಿದಂತೆ ಒಟ್ಟು 6 ಮಂದಿಯನ್ನು ಒಟ್ಟಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿ ಸಾಮಾಜಿಕ ಅಂತರದ ಬಗ್ಗೆ ತಲೆ ಕೆಡಿಸಿಕೊಳ್ಳದೆ ಹೀಗೆ ಎಡವಟ್ಟು ಮಾಡಿಕೊಂಡಿದ್ದಾರೆ. ಸಿಬ್ಬಂದಿಯ ಈ ನಡೆಗೆ ಭಾರೀ ಟೀಕೆ ವ್ಯಕ್ತವಾಗಿದೆ.ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಸಂಜೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಮೈಸೂರಿನಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 80 ಆಗಿತ್ತು. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ಮೈಸೂರು ಎರಡನೇ ಸ್ಥಾನದಲ್ಲಿದೆ.ಅಷ್ಟೇ ಅಲ್ಲದೆ ರಾಜ್ಯದಲ್ಲಿ ಶನಿವಾರ ಒಂದೇ ದಿನ 25 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 384ಕ್ಕೆ ಏರಿಕೆಯಾಗಿತ್ತು. ಗಮನಿಸಬೇಕಾದ ಅಂಶ ಅಂದ್ರೆ 25 ಮಂದಿಯಲ್ಲಿ 10 ಮಂದಿ, ಸೋಂಕಿತರ ಸೆಕೆಂಡರಿ ಕಾಂಟ್ಯಾಕ್ಟ್‌ನಲ್ಲಿದ್ದವರು. ತೀವ್ರ ಉಸಿರಾಟದ ಸೋಂಕಿನಿಂದ ಒಬ್ಬರಿಗೆ, ವಿಷಮ ಶೀತಜ್ವರದಿಂದ ಬಳಲುತ್ತಿರುವ ಒಬ್ಬರಿಗೆ ಸೋಂಕು ತಗುಲಿತ್ತು. ಬಾಗಲಕೋಟೆ, ನಂಜನಗೂಡಿನ ತಲಾ ಏಳು ಮಂದಿಗೆ, ಬೆಂಗಳೂರಿನ ಪಾದರಾಯನಪುರದಲ್ಲಿ ಮೂವರು, ವಿಜಯಪುರ, ಕಲಬುರಗಿಯಲ್ಲಿ ತಲಾ ಇಬ್ಬರಿಗೆ, ಹುಬ್ಬಳ್ಳಿ, ಮಂಡ್ಯ, ಗದಗದಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ.Sign in to your account
Username or Email Address


Password

 Remember Me


