ಮೈಸೂರು: ಕಾರ್ಮಿಕರು ಪ್ರತಿಭಟನಾ ಮೆರವಣಿಗೆ ವೇಳೆ ರಾಜ್ಯದ ಕೆಲವೆಡೆ ಕಲ್ಲು ತೂರಾಟ ನಡೆಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.ಮೈಸೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಲು ಯಾರಿಗೂ ಅಧಿಕಾರವಿಲ್ಲ. ಈ ವಿಚಾರದಲ್ಲಿ ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಕ್ರಮ ಕೈಗೊಂಡಿರುವ ಮಾದರಿಯನ್ನು ರಾಜ್ಯದಲ್ಲೂ ಅನುಸರಿಸಬೇಕು ಎಂದರು.ರಾಜ್ಯದಲ್ಲಿ ಸಾರ್ವಜನಿಕ ಆಸ್ತಿಗೆ ನಷ್ಟವನ್ನುಂಟು ಮಾಡುವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು. ನಷ್ಟಕ್ಕೆ ಕಾರಣರಾಗುವವರಿಗೆ ನೋಟೀಸ್ ಕಳುಹಿಸುವ ಮೂಲಕ ಆಗಿರುವ ನಷ್ಟ ಭರಿಸಿಕೊಡಲು ಸಿಎಂ ಯಡಿಯೂರಪ್ಪ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಪ್ರಧಾನಿ ಮೋದಿ ಸರ್ಕಾರ 303 ಸ್ಥಾನ ಪಡೆದು ಮರುಸ್ಥಾಪನೆಯಾದ ನಂತರ ಹಲವು ಮಹತ್ವದ ಕಾಯ್ದೆಗಳನ್ನು ಜಾರಿಗೊಳಿಸಿದೆ. ಇತ್ತೀಚೆಗೆ ಅನ್ಯ ರಾಷ್ಟ್ರಗಳಲ್ಲಿ ದೌರ್ಜನ್ಯಕ್ಕೊಳಗಾಗಿರುವವರಿಗೆ ನ್ಯಾಯ ದೊರಕಿಸಿಕೊಡಲು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಿದ್ದಾರೆ. ಆದರೆ ಪ್ರತಿಪಕ್ಷಗಳು ಈ ಬಗ್ಗೆ ಅಪಪ್ರಚಾರ ಮಾಡುತ್ತಿವೆ. ಅಮಾಯಕ ಮುಸ್ಲಿಮರನ್ನು ದೇಶದಿಂದ ಓಡಿಸಲಾಗುತ್ತದೆ ಎಂದು ತಪ್ಪು ಸಂದೇಶ ರವಾನೆ ಮಾಡಲಾಗುತ್ತಿದೆ. ಮೋದಿ ಸರ್ಕಾರದ ಜನಪ್ರಿಯತೆಯನ್ನು ಸಹಿಸದವರು ಕುತಂತ್ರ ನಡೆಸುತ್ತಿದ್ದಾರೆ ಎಂದರು.ಮೋದಿಯವರ ಒಳ್ಳೆಯ ಕೆಲಸಕ್ಕೆ ಜನರು ಶ್ರೀರಕ್ಷೆಯಾಗಿದ್ದಾರೆ. ಪ್ರತಿಪಕ್ಷದವರ ಒಡೆದು ಆಳುವ ನೀತಿ, ಜಾತಿ ರಾಜಕಾರಣಕ್ಕೆ ಜಾಗವಿಲ್ಲ ಎಂಬ ಕಾರಣದಿಂದ ಪ್ರತಿಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ ಎಂದು ಹೇಳಿದರು.Sign in to your account
Username or Email Address


Password

 Remember Me


