ಮಂಗಳೂರು: ಉದ್ಯಮಿ ಪ್ರಕಾಶ್ ಶೆಟ್ಟಿ ಅವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಪ್ರಕಾಶಾಭಿನಂದನ ಕಾರ್ಯಕ್ರಮವನ್ನು ಸಿಎಂ ಬಿಎಸ್ ಯಡಿಯೂರಪ್ಪ ಅವರು ಉದ್ಘಾಟನೆ ಮಾಡಿದರು.ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಬಿಎಸ್‍ವೈ, ಉದ್ಯಮಿ ಪ್ರಕಾಶ್ ಶೆಟ್ಟಿ ಅವರ ಸಾಧನೆ ಎಲ್ಲರಿಗೂ ಪ್ರೇರಣೆಯಾಗಿದ್ದು, ತಮ್ಮನ್ನು ಬೆಳೆಸಿದ ಜನರಿಗೆ ಅವರು ನೆರವಾಗುತ್ತಿದ್ದಾರೆ. ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವ ನೀಡಿದ್ದಾರೆ. ರಾಜ್ಯ ಸರ್ಕಾರ ಅವರ ಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು, ಮತ್ತಷ್ಟು ಯಶಸ್ಸು ಸಿಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.ಬಳಿಕ ಮಾತನಾಡಿದ ನಟ ಯಶ್, ಉದ್ಯಮದಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸುವ ಕಾರ್ಯ ಬಹಳ ಅಪರೂಪ. ಉದ್ಯಮಿಗಳು ಹಣವನ್ನು ಹೂಡಿಕೆ ಮಾಡಿ ಜನರಿಗೆ ಉದ್ಯೋಗಗಳನ್ನು ನೀಡುತ್ತಾರೆ. ಅದೇ ರೀತಿ ನನಗೆ ಮಂಗಳೂರಿನ ಜನರ ಬಗ್ಗೆ ಹೆಮ್ಮೆ ಇದ್ದು. ವಿಶ್ವದ ಎಲ್ಲಾ ಪ್ರದೇಶಗಳಿಗೆ ಬಹುಬೇಗ ಹೊಂದಾಣಿಕೆಯಾಗುವ ಸಾಮರ್ಥ್ಯವನ್ನು ಮಂಗಳೂರಿಗರು ಹೊಂದಿದ್ದಾರೆ. ನಾನು ಎಲ್ಲೇ ಹೋದರು ಇಲ್ಲಿನವರು ನನಗೆ ಸಿಗುತ್ತಾರೆ. ಅದಕ್ಕೆ ನನಗೆ ಅಪಾರ ಗೌರವವಿದೆ. ಅಂತೆಯೇ ಉದ್ಯಮ ರಂಗದಲ್ಲಿ ಪ್ರಕಾಶ್ ಶೆಟ್ಟಿ ಅವರಿಗೆ ಮತ್ತಷ್ಟು ಯಶಸ್ಸು ಸಿಗಲಿ ಎಂದು ಆಶಿಸುತ್ತೇನೆ ಎಂದರು.ಮಂಗಳೂರಿನ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರದಲ್ಲಿ ಡಿಸಿಎಂ ಅಶ್ವಥ್ ನಾರಾಯಣ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಿ.ಟಿ ರವಿ, ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಕರಾವಳಿಯ ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಭಾಗಿಯಾಗಿದ್ದರು.ಇತ್ತ ಕನ್ನಡ ಸಿನಿರಂಗದ ಕ್ರೇಜಿಸ್ಟಾರ್ ರವಿಚಂದ್ರನ್, ನಟಿ ಹರಿಪ್ರಿಯಾ, ಕಾವ್ಯ ಶ್ರೀ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದರು. ಸಂಗೀತ ಕ್ಷೇತ್ರದ ದಿಗ್ಗಜರಾದ ಅರ್ಜುನ್ ಜನ್ಯ, ವಿಜಯ್ ಪ್ರಕಾಶ್ ಅವರು ನಡೆಸಿಕೊಡುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಮುಖ ಹೈಲೈಟ್ ಆಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 25 ಸಾವಿರ ಮಂದಿ ಉಪಸ್ಥಿತಿದ್ದರು.Sign in to your account
Username or Email Address


Password

 Remember Me


