ಬೆಂಗಳೂರು: ಈ ಬಾರಿ ಮುಂಗಾರು ಕೈ ಕೊಡುವ ಮುನ್ಸೂಚನೆ ದೊರೆತಿರುವ ಹಿನ್ನಲೆಯಲ್ಲಿ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.ಗೃಹ ಕಚೇರಿ ಕೃಷ್ಣದಲ್ಲಿ ಮಾತನಾಡಿದ ಅವರು, ಈ ಬಾರಿ ಮುಂಗಾರು ಕೈ ಕೊಡುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಮೋಡ ಬಿತ್ತನೆ ಮಾಡುವುದಕ್ಕೆ ನಿರ್ಧಾರ ಮಾಡಿದ್ದೇವೆ. ಈ ಬಾರಿ ಎರಡು ವರ್ಷದ ಅವಧಿಗೆ ಟೆಂಡರ್ ಕರೆಯಲು ತೀರ್ಮಾನ ಮಾಡಿದ್ದು, ಜೂನ್ ಕೊನೆ ವಾರದಲ್ಲಿ ಈ ಬಾರಿ ಮೋಡ ಬಿತ್ತನೆ ನಡೆಯಲಿದ್ದು, ಸುಮಾರು 88 ಕೋಟಿ ವೆಚ್ಚದಲ್ಲಿ ಮೋಡ ಬಿತ್ತನೆಗೆ ನಿರ್ಧಾರ ಮಾಡಿದ್ದೇವೆ. ಆದಷ್ಟು ಬೇಗ ಟೆಂಡರ್ ಪ್ರಕ್ರಿಯೆ ಪ್ರಾರಂಭ ಮಾಡುವುದಾಗಿ ತಿಳಿಸಿದರು.ರಾಜ್ಯಾದ್ಯಂತ ಮೋಡ ಬಿತ್ತನೆ ಮಾಡಲಿದ್ದು, ಹುಬ್ಬಳಿ ಮತ್ತು ಬೆಂಗಳೂರಿನಲ್ಲಿ ಎರಡು ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಎರಡು ವಿಮಾನದಲ್ಲಿ ಈ ಬಾರಿ ಮೋಡ ಬಿತ್ತನೆ ಮಾಡಲಾಗುತ್ತದೆ. ತಜ್ಞರ ಸಮಿತಿ ಕೂಡಾ ಮೋಡ ಬಿತ್ತನೆ ಅವಶ್ಯಕತೆ ಇದೆ ಎಂದು ತಿಳಿಸಿದೆ. ಹೀಗಾಗಿ ಮೋಡ ಬಿತ್ತನೆಗೆ ಸರ್ಕಾರ ನಿರ್ಧಾರ ಮಾಡಿದೆ ಎಂದು ಸ್ಪಷ್ಟಪಡಿಸಿದರು.ಇದೇ ವೇಳೆ ಬರ ಪರಿಹಾರ ಕ್ರಮವಾಗಿ ಕೈಗೊಂಡಿರುವ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದ ಸಚಿವರು, ಇಷ್ಟು ದಿನ ಚುನಾವಣಾ ನೀತಿ ಸಂಹಿತೆ ಜಾರಿದ್ದ ಪರಿಣಾಮ ಸಭೆಗೆ ಅನುಮತಿ ಇರಲಿಲ್ಲ. ಇಂದು ಆಯೋಗದಿಂದ ಅನುಮತಿ ಪಡೆದು ಸಭೆ ನಡೆಸುತ್ತಿದ್ದೆವೆ. ಈಗಾಗಲೇ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿದ್ದೇವೆ. ಎಲ್ಲಾ ತಾಲೂಕು, ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಗೆ ಹಣ ಸಂದಾಯ ಮಾಡಿದ್ದು, ಅಗತ್ಯ ಕಡೆಗಳಲ್ಲಿ ಟ್ಯಾಂಕರ್ ನಲ್ಲಿ ನೀರು ಕೊಡಿ ಎಂದು ಹೇಳಿದ್ದೇವೆ. ಈಗಾಗಲೇ ಬಾಡಿಗೆಗೆ ಬೋರ್ ವೇಲ್‍ಗಳ ನೀಡು ಪಡೆದು ಪೂರೈಕೆ ಮಾಡುತ್ತಿದ್ದೇವೆ. ಜಾನುವಾರುಗಳ ಮೇವಿನ ಬಗ್ಗೆ ಸೂಕ್ತ ಕ್ರಮಕ್ಕೂ ಸೂಚನೆ ನೀಡಿದ್ದೇವೆ ಎಂದರು.ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 200 ಕೋಟಿ ರೂ.ಗಳನ್ನು ಟಾಸ್ಕ್ ಫೋರ್ಸ್ ಗೆ ಬಿಡುಗಡೆ ಮಾಡಿದ್ದೇವೆ. ಹಣ ಖರ್ಚಾದರೆ ಎಷ್ಟು ಹಣ ಬೇಕಾದರೂ ಕೊಡಲು ಸರ್ಕಾರ ಸಿದ್ಧವಾಗಿದೆ. 24 ಗಂಟೆಯೊಳಗೆ ಸಮಸ್ಯೆ ಪರಿಹಾರಕ್ಕೆ ಸೂಚನೆ ನೀಡಿದ್ದೇವೆ. ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಇಲಾಖೆ ಸ್ಥಾಪಿಸಿರುವ ಸಹಾಯವಾಣಿಗೆ ಕರೆ ಮಾಡಬಹುದು ಎಂದರು.Sign in to your account
Username or Email Address


Password

 Remember Me


