ಕಲಬುರಗಿ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಪೊಲೀಸ್‌ ಪೇದೆಯೊಬ್ಬ ಸರ್ಕಾರಿ ಆಸ್ಪತ್ರೆಯ ವೈದ್ಯರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಇಂದು ವೈದ್ಯರು ಪ್ರತಿಭಟನೆ ನಡೆಸಿದ್ದಾರೆ.ಆನಂದ್ ಹಲ್ಲೆ ನಡೆಸಿರುವ ಡಿಎಆರ್ ಪೊಲೀಸ್ ಪೇದೆ. ಡಾ. ಚಂದ್ರು ಹಲ್ಲೆಗೊಳಗಾದ ವೈದ್ಯ. ಆನಂದ್ ಅವರು ಚಿಂಚೋಳಿ ತಾಲೂಕಿನ ನೀಮಾಹೊಸಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ.ಆನಂದ್ ಅವರ ಸಂಬಂಧಿಕರೊಬ್ಬರಿಗೆ ಹುಷಾರಿಲ್ಲವೆಂದು ಚಿಂಚೋಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಸೋಮವಾರ ರಾತ್ರಿ ವೈದ್ಯರು ರೋಗಿಗೆ ಚಿಕಿತ್ಸೆ ನೀಡಲು ತಡವಾಗಿ ಬಂದರೆಂದು ಕೊಪಗೊಂಡ ಪೊಲೀಸ್ ಪೇದೆ, ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಅಷ್ಟೆ ಅಲ್ಲದೆ ಆಸ್ಪತ್ರೆ ಸಿಬ್ಬಂದಿ ರತ್ನಮ್ಮ, ಸತ್ಯಮ್ಮ ಎಂಬವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು.ವೈದ್ಯರ ಮೇಲೆ ಆಗಿರುವ ಹಲ್ಲೆಯನ್ನು ಖಂಡಿಸಿ ಇಂದು ಚಿಂಚೋಳಿ ಸರ್ಕಾರಿ ಆಸ್ಪತ್ರೆಯ ವೈದ್ಯರೆಲ್ಲ ಸೇರಿ ಪ್ರತಿಭಟನೆ ಮಾಡಿದ್ದಾರೆ. ಪ್ರತಿಭಟನೆ ಮೂಲಕ ಹಲ್ಲೆ ಮಾಡಿದ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ನಂತರ ಜಿಲ್ಲಾಧಿಕಾರಿಗಳು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಭದ್ರತೆಯನ್ನು ನೀಡುವ ಭರವಸೆ ಕೊಟ್ಟ ಬಳಿಕ ವೈದ್ಯರೆಲ್ಲ ಪ್ರತಿಭಟನೆ ಹಿಂಪಡೆದಿದ್ದಾರೆ.ಘಟನೆ ಕುರಿತು ಡಾ. ಚಂದ್ರು ಪೊಲೀಸ್ ಪೇದೆ ಆನಂದ್ ವಿರುದ್ಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictvSign in to your account
Username or Email Address


Password

 Remember Me


