ಉಡುಪಿ/ ಮಂಗಳೂರು: ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಗಾಳಿ ಮಳೆಯಾಗಿದೆ. ಮೊದಲ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ಮಣ್ಣಿನ ರಸ್ತೆಯಲ್ಲಿ ಸರ್ಕಾರಿ ಬಸ್ ಪಲ್ಟಿಯಾಗಿ ಮಹಿಳೆ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡು ಹತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ತಾಲೂಕುಗಳಲ್ಲಿ ಜಡಿ ಮಳೆ ಬಿದ್ದರೆ, ಮಂಗಳೂರು ನಗರದಲ್ಲಿ ತುಂತುರು ಮಳೆಯಾಗಿದೆ.ಉಡುಪಿಯಲ್ಲಿ ಒಂದು ಗಂಟೆಗೂ ಮಿಕ್ಕಿ ನಿರಂತರ ಮಳೆಯಾಗಿದೆ. ವರ್ಷದ ಮೊದಲ ಮಳೆಯಾದ ಕಾರಣ ನಗರದಲ್ಲಿ ವಾಹನ ಸಂಚಾರಕ್ಕೆ ಕೊಂಚ ಅಡ್ಡಿಯಾಗಿತ್ತು. ಜಿಲ್ಲೆಯ ಕಾರ್ಕಳ, ಹೆಬ್ರಿ, ಬ್ರಹ್ಮಾವರ ತಾಲೂಕಿನಲ್ಲಿ ಮಳೆ ಅಬ್ಬರದಿಂದ ಬಿದ್ದಿದೆ. ಗಾಳಿ ಮಳೆ ಜೊತೆ ಭಾರೀ ಗುಡುಗು ಇರುವುದರಿಂದ ಉಡುಪಿ ನಗರದಲ್ಲಿ ಪವರ್ ಕಟ್ ಮಾಡಲಾಗಿದೆ.ಎರಡು ದಿನಗಳ ಕಾಲ ಸಂಜೆ ವೇಳೆಗೆ ಮಳೆಯಾಗುವುದಾಗಿ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೀನುಗಾರರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ.Sign in to your account
Username or Email Address


Password

 Remember Me


