ಮಂಗಳೂರು: ಓಖಿ ಚಂಡಮಾರುತದಿಂದ ಹಾನಿಗೀಡಾದ ಲಕ್ಷದ್ವೀಪದ ಪ್ರದೇಶಗಳಿಗೆ ಭೇಟಿ ನೀಡಲು ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಕರಾವಳಿಯ ಖಾದ್ಯಕ್ಕೆ ಮನಸೋತಿದ್ದಾರೆ.ಪ್ರಧಾನಿಯವರಿಗೆ ಬೆಳಗ್ಗಿನ ಉಪಹಾರಕ್ಕೆ ಓಷಿಯನ್ ಪರ್ಲ್ ಹೋಟೆಲ್ ನಿಂದ ತಿಂಡಿಯನ್ನು ಸಿದ್ಧತೆ ಮಾಡಲಾಗಿತ್ತು. ಹೀಗಾಗಿ ಪ್ರಧಾನಿಯವರು ನೀರುದೋಸೆ, ಕಡುಬು, ಅವಲಕ್ಕಿ ಮತ್ತು ಉಪ್ಪಿಟ್ಟನ್ನು ಸವಿದಿದ್ದಾರೆ. ತಾವು ತಿಂದ ತಿಂಡಿಯಲ್ಲಿ ಕಡುಬಿನ ರುಚಿಗೆ ಮೆಚ್ಚುಗೆಯನ್ನ ವ್ಯಕ್ತಪಡಿಸಿದ್ದು, ನಂತರ ಹೋಟೆಲ್‌ ಸಿಬ್ಬಂದಿ ಜೊತೆ ಫೋಟೋ ತೆಗಿಸಿಕೊಂಡಿದ್ದಾರೆ. ಕೊನೆಗೆ ತಮಗೆ ತಿಂಡಿ ಬಡಿಸಿದವರಿಗೆ ಪ್ರಶಂಸೆ ಕೂಡ ವ್ಯಕ್ತಪಡಿಸಿದ್ದಾರೆ.ಮೋದಿಯವರು ಸೋಮವಾರ ತಡಾರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಬಳಿಕ ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ತಂಗಿದ್ದು, ಉಪಹಾರ ಸೇವನೆ ಬಳಿಕ ಬೆಳಗ್ಗೆ 7.30 ಕ್ಕೆ ರಸ್ತೆ ಮಾರ್ಗದ ಮೂಲಕ ತೆರಳಿ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ, ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಲಕ್ಷದ್ವೀಪಕ್ಕೆ ತೆರಳಿದ್ದಾರೆ.ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರಯಾಣಿಕರನ್ನು ಕೆಲ ನಿಮಿಷಗಳ ಕಾಲ ತಡೆಹಿಡಿಯಲಾಗಿತ್ತು. ಮೋದಿಯವರ ಲಕ್ಷದ್ವೀಪ ಪ್ರವಾಸಕ್ಕೆ ಎರಡು ವಿಶೇಷ ವಿಮಾನಗಳನ್ನು ಸಿದ್ಧಪಡಿಸಲಾಗಿತ್ತು. ಈ ಪೈಕಿ ಒಂದು ವಿಮಾನದ ಮೂಲಕ ಮೋದಿ ಲಕ್ಷದ್ವೀಪಕ್ಕೆ ತೆರಳಿದ್ದಾರೆ. ಮೋದಿ ಲಕ್ಷದ್ವೀಪಕ್ಕೆ ಹಾರಿದ ಕೆಲವೇ ನಿಮಿಷಗಳಲ್ಲಿ ಮತ್ತೊಂದು ವಿಶೇಷ ವಿಮಾನ ಕೂಡ ಲಕ್ಷದ್ವೀಪಕ್ಕೆ ಪ್ರಯಾಣ ಬೆಳೆಸಿದೆ.ಇತ್ತೀಚೆಗೆ ಓಖಿ ಚಂಡಮಾರುತದಿಂದ ಹಾನಿಗೀಡಾದ ಲಕ್ಷದ್ವೀಪದ ಪ್ರದೇಶಗಳಿಗೆ ಮೋದಿ ಭೇಟಿ ನೀಡಿ ಪುನರ್ವಸತಿ ಕಾರ್ಯಗಳನ್ನು ವೀಕ್ಷಿಸಲಿದ್ದಾರೆ. Sign in to your account
Username or Email Address


Password

 Remember Me


