ಗಾಂಧೀವಾದಿ, ವಿಚಾರವಾದಿ ಡಾ. ಎಚ್. ನರಸಿಂಹಯ್ಯ (ಜೂನ್ ೬, ೧೯೨೦ - ಜನವರಿ ೩೧, ೨೦೦೫) ಅವರು ಬೆಂಗಳೂರಿನ ಹೆಸರಾಂತ ಭೌತಶಾಸ್ತ್ರಜ್ಞರೂ, ಶಿಕ್ಷಣತಜ್ಞರೂ ಆಗಿದ್ದರು. ಇವರು ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಮುಂದೆ ಅಮೇರಿಕ ದೇಶದಲ್ಲಿನ ಓಹಿಯೋ ವಿಶ್ವವಿದ್ಯಾಲಯದಲ್ಲಿ ಪರಮಾಣು ಭೌತಶಾಸ್ತ್ರದಲ್ಲಿ ಪಿಎಚ್.ಡಿ. ಪದವಿಯನ್ನು ಪಡೆದರು. ನ್ಯಾಷನಲ್ ಕಾಲೇಜು, ಬೆಂಗಳೂರಿನಲ್ಲಿ ಭೌತಶಾಸ್ತ್ರದ ಅಧ್ಯಾಪಕರಾಗಿ ಸೇರಿಕೊಂಡ ಇವರು, ತದನಂತರ ಕಾಲೇಜಿನ ಪ್ರಾಂಶುಪಾಲರಾದರು. ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳೂ ಆಗಿದ್ದರು. == ಜನನ, ಬಾಲ್ಯ == ಡಾ.ಎಚ್.ಎನ್ ಎಂದೇ ಜನಪ್ರಿಯರಾದ 'ಹೊಸೂರು, ನರಸಿಂಹಯ್ಯನವರು' ಜೂನ್ ೬, ೧೯೨೦ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ 'ಹೊಸೂರು' ಗ್ರಾಮದಲ್ಲಿ ಒಂದು ಬಡ ಹಿಂದುಳಿದ ಕುಟುಂಬದಲ್ಲಿ ಹುಟ್ಟಿದರು. ತಂದೆ 'ಹನುಮಂತಪ್ಪ', ತಾಯಿ 'ವೆಂಕಟಮ್ಮ', ತಂಗಿ 'ಗಂಗಮ್ಮ'. ಮನೆಯಲ್ಲಿ ಮಾತಾಡುವ ಭಾಷೆ ತೆಲುಗು. ಆದರೆ ಕನ್ನಡವೆಂದರೆ ಹೆಚ್ಚು ಪ್ರೀತಿ, ಹಾಗೂ ಪ್ರಾವೀಣ್ಯತೆ ಇತ್ತು. == ವಿದ್ಯಾಭ್ಯಾಸ == ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸವನ್ನು ಹೊಸೂರಿನಲ್ಲಿ ಮುಗಿಸಿ, ೧೯೩೫ರಲ್ಲಿ ಬೆಂಗಳೂರಿನ ನ್ಯಾಷನಲ್ ಹೈಸೂಲಿಗೆ ಸೇರಿದರು. ಭೌತಶಾಸ್ತ್ರದ ಬಿ.ಎಸ್ಸಿ. (ಹಾನರ್ಸ್) ಮತ್ತು ಎಂ.ಎಸ್ಸಿ., ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಓದಿದರು. ಎಲ್ಲಾ ಪರೀಕ್ಷೆಗಳಲ್ಲಿ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾದರು. == ಸ್ವಾತಂತ್ರ್ಯ ಹೋರಾಟ == ೧೯೪೨ ನೆಯ ಇಸವಿಯಲ್ಲಿ, ಸೆಂಟ್ರಲ್ ಕಾಲೇಜ್‌ನಲ್ಲಿ ಮೂರನೆಯ ಬಿ.ಎಸ್ಸಿ, ಆನರ್ಸ್ ತರಗತಿಯಲ್ಲಿ ಓದುತ್ತಿದ್ದಾಗ ಗಾಂಧೀಜಿಯವರು ಮೊದಲು ಮಾಡಿದ ಕ್ವಿಟ್ ಇಂಡಿಯಾ ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದಾಗ ವಿದ್ಯಾಭ್ಯಾಸಕ್ಕೆ ಎರಡು ವರ್ಷ ವಿದಾಯ ಹೇಳಿದರು. ಬೆಂಗಳೂರು, ಮೈಸೂರು ಮತ್ತು ಪುಣೆಯ ಯರವಾಡಾ ಜೈಲುವಾಸ. ೧೯೪೭ರಲ್ಲಿ ಸ್ವಾತಂತ್ರ್ಯ ಬಂದ ನಂತರ ಮೈಸೂರಿನಲ್ಲಿ ನಡೆದ ಮೈಸೂರು ಚಲೋ ಚಳವಳಿಯಲ್ಲಿಯೂ ಅವರು ತಮ್ಮ ಅಧ್ಯಾಪಕ ವೃತ್ತಿಗೆ ರಾಜೀನಾಮೆ ನೀಡಿ ಭಾಗವಹಿಸಿದರು. ತಮ್ಮ ಸಹೋದ್ಯೋಗಿ ಕೆ. ಶ್ರೀನಿವಾಸನ್, ಟಿ.ಆರ್. ಶ್ಯಾಮಣ್ಣ ಇವರ ಜೊತೆ ಭೂಗತ ಹೋರಾಟ ನಡೆಸಿ ಮೈಸೂರು ಸಂಸ್ಥಾನದಲ್ಲಿ ಜವಾಬ್ದಾರಿ ಸರ್ಕಾರ ಸ್ಥಾಪನೆಗೆ ಬೆಂಬಲ ನೀಡತೊಡಗಿದರು. "ಇಂಕ್ವಿಲಾಬ್" ಎಂಬ ಕೈಬರಹದ ಪತ್ರಿಕೆಯನ್ನು ಮಾಡಿ ಪೊಲೀಸರಿಗೆ ಸಿಗದಂತೆ ತಪ್ಪಿಸಿಕೊಳ್ಳುತ್ತಿದ್ದರು. "ಇಂಕ್ವಿಲಾಬ್" ಕೈಬರಹದ ಪತ್ರಿಕೆಯ ೩೩ ಸಂಚಿಕೆಗಳು ಹೊರಬಂದವು. == ವೃತ್ತಿಜೀವನ == ೧೯೪೬ನೇ ಇಸವಿಯಲ್ಲಿ ಬೆಂಗಳೂರು ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ, ಭೌತಶಾಸ್ತ್ರ ಆಧ್ಯಾಪಕರಾದರು. ಅಲ್ಲಿಯೇ ಪ್ರಾಧ್ಯಾಪಕರಾಗಿ, ನಂತರ ಹನ್ನೆರೆಡು ವರ್ಷಗಳು ಪ್ರಾಂಶುಪಾಲರಾಗಿದ್ದರು. ೧೯೭೨ ರಿಂದ ೧೯೭೭ರ ವರೆಗೆ ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದರು. ಆ ಕಾಲದಲ್ಲಿ ಅನೇಕ ಸುಧಾರಣೆಗಳನ್ನು ಮಾಡಿದರು. ಅನಂತರ ಎಚ್.ಎನ್. ಅವರು ನ್ಯಾಷನಲ್ ಎಜುಕೇಷನ್ ಸೊಸೈಟಿ ಆಫ್‌ ಕರ್ನಾಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು. ವಿದ್ಯಾರ್ಥಿ ದೆಸೆಯಲ್ಲಿ ಅವರು ವಿವಿಧ ಉಚಿತ ವಿದ್ಯಾರ್ಥಿನಿಲಯಗಳಲ್ಲಿದ್ದರು. ಅಧ್ಯಾಪಕರಾದ ಮೇಲೂ ೧೯೪೬ರಿಂದ ಕೊನೆವರೆಗೂ ಕಾಲೇಜಿನ ವಿದ್ಯಾರ್ಥಿ ನಿಲಯದಲ್ಲಿಯೇ ವಾಸವಾಗಿದ್ದರು. ಒಟ್ಟು ೫೭ ವರ್ಷಗಳ ಕಾಲ ವಿದ್ಯಾರ್ಥಿನಿಲಯದಲ್ಲಿಯೇ ನೆಲೆಸಲು ಅವರ ಸರಳ, ಆದರ್ಶಮಯ ಜೀವನವೇ ಕಾರಣವೆಂದು ಹೇಳಲಾಗುತ್ತದೆ. ಅಮೆರಿಕಾದ ಓಹಿಯೋ ರಾಜ್ಯ ವಿಶ್ವವಿದ್ಯಾಲಯದಲ್ಲಿ ( ) ಮೂರು ವರ್ಷ ಅಭ್ಯಾಸ ಮಾಡಿ ನ್ಯೂಕ್ಲಿಯಾರ್ ಫಿಸಿಕ್ಸ್‌ನಲ್ಲಿ ೧೯೬೦ರಲ್ಲಿ ಡಾಕ್ಟರೇಟ್ ಪದವಿ ಪಡೆದರು. ಅಲ್ಲಿಯ ಪರೀಕ್ಷೆಗಳಲ್ಲಿಯೂ ಉತ್ತಮ ಶ್ರೇಣಿ ಪಡೆದರು. ಏಳು ವರ್ಷಗಳ ನಂತರ ಅಮೇರಿಕಾದ ಸದರನ್ ಇಲ್ಲಿನಾಯ್ಸ್ ವಿಶ್ವವಿದ್ಯಾಲಯ ( ) ದಲ್ಲಿ ಒಂದು ವರ್ಷ ಕಾಲ ಸಂದರ್ಶಕ ಪ್ರಾಧ್ಯಾಪಕರಾಗಿದ್ದರು. ಇವರ ಇಡೀ ಜೀವನ ಶಿಕ್ಷಣಕ್ಕೆ ಮತ್ತು ನಾಲ್ಕು ನ್ಯಾಷನಲ್ ಕಾಲೇಜು, ಐದು ನ್ಯಾಷನಲ್ ಹೈಸ್ಕೂಲ್ ಮತ್ತು ಎರಡು ಪ್ರೈಮರಿ ಶಾಲೆಗಳನ್ನೊಳಗೊಂಡ ನ್ಯಾಷನಲ್ ಎಜುಕೇಷನ್ ಸೊಸೈಟಿಗೆ ಮೀಸಲಿಟ್ಟಿದ್ದರು. ಈ ಸಂಸ್ಥೆಗಳ ಪೈಕಿ ಆರೇಳು ಸಂಸ್ಥೆಗಳು, ಇವರ ಪ್ರಯತ್ನದ ಫಲವಾಗಿ ಗ್ರಾಮಾಂತರ ಪ್ರದೇಶಗಳಲ್ಲಿ ಸ್ಥಾಪಿಸಲ್ಪಟ್ಟಿವೆ. ಅಲ್ಲದೆ ಈ ಸಂಸ್ಥೆಗಳಿಗಾಗಿ ಲಕ್ಷಾಂತರ ರೂಪಾಯಿಗಳನ್ನು ಸಾರ್ವಜನಿಕರಿಂದ ಸಂಗ್ರಹ ಮಾಡಿದ್ದಾರೆ. ಈ ಸಂಸ್ಥೆಗಳ ಉನ್ನತಿಗಾಗಿ ಶ್ರಮಿಸಿದ್ದಾರೆ ಎನ್ನಲಾಗುತ್ತದೆ. == ವ್ಯಕ್ತಿತ್ವ == ಅಧ್ಯಾಪಕ, ಆಡಳಿತಗಾರ, ಸ್ನೇಹಮಯ ಮಾನವತಾವಾದಿ, ವಿಚಾರವಾದಿ ಹೆಚ್.ಎನ್. ಸರಳ ಜೀವನ ನಡೆಸುತ್ತಿದ್ದರು. ಅವರು ರಾಷ್ಟ್ರೀಯತಾವಾದಿಯಾಗಿದ್ದರು ಮತ್ತು ಖಾದಿ ಬಟ್ಟೆಯನ್ನೇ ಧರಿಸುತ್ತಿದ್ದರು. ಮೇಲ್ಮಟ್ಟದ ಹಾಸ್ಯ ಪ್ರಜ್ಞೆ ಅವರದು ಎಂದು ಹೆಚ್.ಎನ್. ಅವರ ನಿಕಟವರ್ತಿಗಳ ಅಭಿಪ್ರಾಯ. ವಿಜ್ಞಾನದಲ್ಲಿ, ವೈಜ್ಞಾನಿಕ ಮನೋಭಾವದಲ್ಲಿ ಅವರಿಗೆ ಅಚಲವಾದ ನಂಬಿಕೆ. ಮೂಢನಂಬಿಕೆ, ಮೌಢ್ಯದ ವಿರುದ್ಧ ಸತತ ಹೋರಾಟ. ಅವರು 1962ರಲ್ಲಿ ಬೆಂಗಳೂರು ವಿಜ್ಞಾನ ವೇದಿಕೆ ( ) ಎಂಬ ವಿಜ್ಞಾನ ವೇದಿಕೆಯನ್ನು ಸ್ಥಾಪಿಸಿ ಅದರ ಅಧ್ಯಕ್ಷರಾದರು. ಸಂಗೀತ, ನಾಟಕ, ನೃತ್ಯ ಮುಂತಾದ ಲಲಿತ ಕಲೆಗಳಿಗೆ ಮೊದಲಿನಿಂದಲೂ ಪ್ರೋತ್ಸಾಹ ನೀಡಿದ್ದರು. == ಸಾಯಿಬಾಬಾ ಅವರಿಗೆ ಸವಾಲು == ಶ್ರೀ ಸತ್ಯಬಾಬಾ ಅವರು ತಮ್ಮ ಪವಾಡಗಳಿಗೆ ಪ್ರಸಿದ್ಧರಾಗಿದ್ದರು. ಎಚ್.‌ ನರಸಿಂಹಯ್ಯನವರು ಬೆಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾಗಿದ್ದಾಗ 1976ರಲ್ಲಿ ‘ಪವಾಡ ಮತ್ತು ಪರೀಕ್ಷಿಸಿ ನೋಡಬಹುದಾದ ಮೂಢನಂಬಿಕೆಗಳ ತನಿಖಾ ಸಮಿತಿʼ ( ) ಯನ್ನು ನೇಮಿಸಿ ಅದಕ್ಕಾಗಿ 25,000 ರೂಪಾಯಿಗಳನ್ನು ಮಂಜೂರು ಮಾಡಿದರು. ಎಚ್.‌ ನರಸಿಂಹಯ್ಯನವರು ಅಧ್ಯಕ್ಷರಾಗಿದ್ದ ಸಮಿತಿಯಲ್ಲಿ ಪ್ರಖ್ಯಾತ ವಿಜ್ಞಾನಿಗಳು, ಸಮಾಜ ಸೇವಕರು, ಮನೋವೈದ್ಯರೂ ಸೇರಿದಂತೆ ಹನ್ನೊಂದು ಮಂದಿ ಸದಸ್ಯರಿದ್ದರು. ಸಮಿತಿಯ ಕಡೆಯಿಂದ ಸಾಯಿಬಾಬಾ ಅವರಿಗೆ ಶೂನ್ಯದಿಂದ ವಸ್ತುಗಳನ್ನು ಸೃಷ್ಟಿಸುವ ಸಾಮರ್ಥ್ಯವನ್ನು ವಿಜ್ಞಾನದ ವ್ಯವಸ್ಥಿತ ವಿಧಾನಗಳಿಂದ ಪರೀಕ್ಷೆ ನಡೆಸಲು ಅವಕಾಶ ನೀಡಬೇಕೆಂದು ಕೋರಿ ಮೂರು ಪತ್ರಗಳು ರವಾನೆಯಾದವು. ಆದರೆ ಸಾಯಿಬಾಬಾ ಅವರ ಕಡೆಯಿಂದ ಉತ್ತರ ಬರಲಿಲ್ಲ. ಸಾಯಿಬಾಬಾ ಅವರಿಂದ ಏನೂ ಪ್ರತಿಕ್ರಿಯೆ ಬರದ ಕಾರಣ ಪತ್ರಗಳನ್ನು ಪತ್ರಿಕೆಗಳ ಪ್ರಕಟಣೆಗಾಗಿ ಬಿಡುಗಡೆ ಮಾಡಲಾಯಿತು. ಪರಿಣಾಮವಾಗಿ ಈ ವಿಷಯ ರಾಷ್ಟ್ರಮಟ್ಟದಲ್ಲಿ ಚರ್ಚೆಗೊಳಗಾಯಿತು. == ಸಾಹಿತ್ಯ ಕೃತಿಗಳು == ತೆರೆದ ಮನ (1992) ಡಾ. ಎಚ್.ಎನ್. ಲೇಖನಗಳು‌ (1992) ಹೋರಾಟದ ಹಾದಿ (ಆತ್ಮಕಥನ) (1995) == ಪ್ರಶಸ್ತಿ-ಪುರಸ್ಕಾರ == ಎಚ್ಚೆನ್‌ ಅವರು ಜಯನಗರದ ನ್ಯಾಷನಲ್ ಕಾಲೇಜಿನಲ್ಲಿರುವ ಬೆಂಗಳೂರು ಲಲಿತಕಲಾ ಪರಿಷತ್ತಿನ ಸ್ಥಾಪಕ ಅಧ್ಯಕ್ಷರಾಗಿದ್ದರು. ಅವರ ವಿಶಿಷ್ಟ ಸೇವೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (1969) ಭಾರತ ಸರ್ಕಾರದ ಪದ್ಮಭೂಷಣ ಪ್ರಶಸ್ತಿ (1984) ಗುಲ್ಬರ್ಗಾ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪ್ರಶಸ್ತಿಗಳು ದೊರೆಕಿವೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗವಹಿಸಿದ್ದಕ್ಕಾಗಿ `ತಾಮ್ರಪತ್ರ`, ಕರ್ನಾಟಕ ರಾಜ್ಯ ನಾಟಕ ಅಕಾಡೆಮಿಯ ಫೆಲೋಷಿಪ್ (1990) ಅತೀಂದ್ರಿಯ ಘಟನೆಗಳನ್ನು ವೈಜ್ಞಾನಿಕವಾಗಿ ಪರೀಕ್ಷಿಸಲು ಅಮೆರಿಕಾದಲ್ಲಿ ಸ್ಥಾಪಿಸಲ್ಪಟ್ಟಿರುವ ಅಂತಾರಾಷ್ಟ್ರೀಯ ಖ್ಯಾತಿಯ ವಿಜ್ಞಾನಿಗಳು, ಸಮಾಜ ಮತ್ತು ಮನಃಶಾಸ್ತ್ರ ವಿಜ್ಞಾನಿಗಳು, ನೋಬೆಲ್ ಪಾರಿತೋಷಕ ವಿಜೇತರು `ಫೆಲೋ`ಗಳಾಗಿರುವ `ಕಮಿಟಿ ಫಾರ್ ದಿ ಸೈಂಟಿಪಿಕ್ ಇನ್ವೆಸ್ಟಿಗೇಷನ್ ಆಫ್ ದಿ ಕ್ಲೈಮ್ಸ್ ಆಫ್ ದಿ ಪ್ಯಾರಾನಾರ್ಮಲ್` ( ) ಸಂಸ್ಥೆಯ ಭಾರತದ ಏಕೈಕ `ಫೆಲೋ` ಎಂಬ ಗೌರವ ಪಡೆದಿದ್ದಾರೆ. ಕರ್ನಾಟಕ ರಾಜ್ಯ ವಿಧಾನ ಪರಿಷತ್‌ನಲ್ಲಿ ಶಿಕ್ಷಣ ಮತ್ತು ವಿಜ್ಞಾನವನ್ನು ಪ್ರತಿನಿಧಿಸುವ ನಾಮಕರಣ ಸದಸ್ಯರಾಗಿದ್ದರು. == ನಿಧನ == ಡಾ. ಹೆಚ್.ನರಸಿಂಹಯ್ಯನವರು ೨೦೦೫ ಜನವರಿ ೩೧ರಂದು ನಿಧನರಾದರು == ಉಲ್ಲೇಖಗಳು == == ಭಾಹ್ಯ ಕೊಂಡಿಗಳು == ವೈಚಾರಿಕ ಸಂತ' ಎಚ್.ನರಸಿಂಹಯ್ಯ ಮನೆ; ಈರಪ್ಪ ಹಳಕಟ್ಟಿ : 06 ಜೂನ್ 2020 2004-12-06 ವೇಬ್ಯಾಕ್ ಮೆಷಿನ್ ನಲ್ಲಿ. . ದಿ ಹಿಂದೂ 4 2004 . . & 27 2005 5 2005 ವೇಬ್ಯಾಕ್ ಮೆಷಿನ್ ನಲ್ಲಿ. ' 1976 2021-05-07 ವೇಬ್ಯಾಕ್ ಮೆಷಿನ್ ನಲ್ಲಿ. . . , . '