ತಾಳಗುಂದ ಶಾಸನಗಳು ಕನ್ನಡದ ಹಳೆಯ ಕಲ್ಲಿನ ಶಾಸನಗಳು. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ತಾಳಗುಂದ ಗ್ರಾಮದಲ್ಲಿವೆ. ಇಲ್ಲಿನ ಒಂದು ಶಾಸನವು ಈವರೆಗೆ ಸಿಕ್ಕಿರುವ ಕನ್ನಡದ ಅತಿಹಳೆಯ ಶಾಸನವೆಂದು ಅಧಿಕೃತವಾಗಿ ಪ್ರಕಟಿಸಲಾಗಿದೆ. ಅದುವರೆಗೂ ಹಲ್ಮಿಡಿ ಶಾಸನವು ಕನ್ನಡದ ಅತಿಹಳೆಯ ಶಾಸನವೆಂದು ಪರಿಗಣಿತವಾಗಿತ್ತು. ಆದರೆ ಅದಕ್ಕಿಂತಲೂ ಇದು ಹಳೆಯದೆಂದು ಭಾರತೀಯ ಪುರಾತತ್ವ ಇಲಾಖೆ ಪ್ರಕಟಿಸಿದೆ. ಈ ಮೂಲಕ ಕನ್ನಡ ಬರವಣಿಗೆಯ ಇತಿಹಾಸವು ಸುಮಾರು ಒಂದು ನೂರು ವರ್ಷಗಳಷ್ಟು ಹಿಂದೆ ಹೋದಂತಾಗಿದೆ. == ಶಾಸನದ ಇತಿಹಾಸ == ತಾಳಗುಂದದ ಪ್ರಣವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪುರಾತತ್ವ ಇಲಾಖೆಯಿಂದ ೨೦೧೩-೧೪ರಲ್ಲಿ ನಡೆಸಿದ ಉತ್ಖನನದ ವೇಳೆ ಈ ಶಾಸನ ಪತ್ತೆಯಾಗಿತ್ತು. ಇದರ ಅಧ್ಯಯನಕ್ಕೆ ಸಾಕಷ್ಟು ಸಮಯ ತೆಗೆದುಕೊಂಡ ಪುರಾತತ್ವ ಇಲಾಖೆ ಇದರ ಪ್ರಾಚೀನತೆಯ ಅಂಶಗಳನ್ನು ಬಹಿರಂಗಪಡಿಸಿತು. ಇದರಂತೆ, ಈ ಶಾಸನವೇ ಕನ್ನಡದ ಮೊದಲ ಶಾಸನವೆಂದು ಪರಿಗಣಿಸಲ್ಪಟ್ಟಿದೆ. ಈ ಶಾಸನ ರಚನೆಯಾದ ಅವಧಿ ಕ್ರಿ.ಶ. ೩೭೦-೪೫೦ ಇರಬಹುದೆಂದು ಅಧ್ಯಯನದಿಂದ ತಿಳಿದುಬಂದಿದೆ. ಈ ಶಾಸನ ಕದಂಬ ದೊರೆ ಶಾಂತಿವರ್ಮನ ಕಾಲಕ್ಕಿಂತಲೂ ಹಳೆಯದೆಂಬ ಅಂಶ ಬೆಳಕಿಗೆ ಬಂದಿದೆ. === ಇನಾಮು ಭೂಮಿ ವಿವರ === ವಜಿನಾಗ ಎಂಬ ಅಂಬಿಗನಿಗೆ ಕದಂಬ ದೊರೆಯು ಭೂಮಿಯನ್ನು ಇನಾಮು ನೀಡಿದ್ದ ಅಂಶವನ್ನು ಈ ಶಾಸನ ವಿವರಿಸುತ್ತದೆ. ಪ್ರಣವಲಿಂಗೇಶ್ವರ ದೇವಾಲಯದ ಉತ್ತರ ಭಾಗದಲ್ಲಿ ಇದು ಪತ್ತೆಯಾಗಿತ್ತು. ತುಂಡರಿಸಿರುವ ಏಳು ಸಾಲುಗಳಲ್ಲಿ ಕನ್ನಡ ಪದಗಳ ಬಳಕೆ ಮಾಡಿರುವುದರಿಂದ ಶಾಸನ ಶಾಸ್ತ್ರದ ಪ್ರಕಾರ ಇದನ್ನು ಕನ್ನಡ ಶಾಸನ ಎಂದು ಒಪ್ಪಿಕೊಳ್ಳಬೇಕಾಗುತ್ತದೆ ಎಂಬ ಅಂಶವನ್ನು ಪುರಾತತ್ವ ಇಲಾಖೆ ದೃಢಪಡಿಸಿದೆ. === ಕದಂಬ ಸಾಮ್ರಾಜ್ಯ === ಕ್ರಿ.ಶ. ೩೪೫ರಲ್ಲಿ ಮಯೂರವರ್ಮ ಕದಂಬ ಸಾಮ್ರಾಜ್ಯವನ್ನು ಸ್ಥಾಪಿಸಿದ್ದ. ಉತ್ತರ ಕನ್ನಡ ಜಿಲ್ಲೆಯ ಸಿರ್ಸಿ ಸಮೀಪದ ಬನವಾಸಿ ಕದಂಬರ ರಾಜಧಾನಿಯಾಗಿತ್ತು. ಮಯೂರವರ್ಮ ೩೬೫ರಲ್ಲಿ ಮೃತಪಟ್ಟ ನಂತರ ಕಂಗವರ್ಮ, ಭಗೀರಥ ವರ್ಮ, ರಘುಪತಿ ವರ್ಮ ಮುಂತಾದವರು ಕ್ರಿ.ಶ. ೩೬೫-೪೨೫ರವರೆಗೂ ಆಳ್ವಿಕೆ ನಡೆಸಿದ್ದರು. ಇದೇ ಅವಧಿಯಲ್ಲಿ ಶಾಸನ ಕೆತ್ತಿಸಲಾಗಿತ್ತು ಎಂಬುದು ಶಾಸನ ಶಾಸ್ತ್ರ ತಜ್ಞರ ಅನಿಸಿಕೆ. == ಪ್ರಾಚೀನತೆ ಬಗ್ಗೆ ಅನುಮಾನಗಳು == ಅತಿ ಹಳೆಯ ಶಾಸನವೆಂದು ಘೋಷಿತವಾಗಿರುವ ಶಾಸನದಲ್ಲಿ ಕೇವಲ ಎರಡೇ ಸಾಲುಗಳಿರುವುದರಿಂದ ಇದನ್ನು ಮರುಪರಿಶೀಲನೆಗೊಳಿಸಬೇಕೆಂಬ ಅಭಿಪ್ರಾಯಗಳೂ ಕೇಳಿಬಂದಿದೆ. == ಉಲ್ಲೇಖಗಳು == == ಹೊರಸಂಪರ್ಕ ಕೊಂಡಿಗಳು == , 2017-11-11 ವೇಬ್ಯಾಕ್ ಮೆಷಿನ್ ನಲ್ಲಿ.