ವಾಲ್ಮೀಕಿ ನಿಗಮದ ಹಗರಣ ಇದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವನ್ನು ಒಳಗೊಂಡ ಮಹತ್ವದ ಹಣಕಾಸು ವಂಚನೆ ಪ್ರಕರಣವಾಗಿದೆ. ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (52) ಅವರ ಆತ್ಮಹತ್ಯೆಯ ನಂತರ ಹಗರಣವು ಬೆಳಕಿಗೆ ಬಂದಿದೆ. ಚಂದ್ರಶೇಖರನ್ ರವರು ಭ್ರಷ್ಟಾಚಾರದ ವಿವರಗಳನ್ನು ಮತ್ತು ಹಲವಾರು ಅಧಿಕಾರಿಗಳನ್ನು ಒಳಗೊಂಡಿರುವ ಸೂಸೈಡ್ ನೋಟ್ ಅನ್ನು ಬಿಟ್ಟು ಹೋಗಿದ್ದಾರೆ. 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 88 ಕೋಟಿ ಹಣವನ್ನು ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಲಾಗಿದೆ. ಬ್ಯಾಂಕ್‌ನವರು ಫೆ 26 ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಲೆಕ್ಕಾಧಿಕಾರಿಗಳ ಸಹಿ ಪಡೆದು ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಹಂತ-ಹಂತವಾಗಿ 187.33 ಕೋಟಿ ರೂ. ವರ್ಗಾವಣೆ ಮಾಡಿದ್ದರು. ಮಾ.4ರಂದು 25 ಕೋಟಿ ರೂ., ಮಾ.6ರಂದು 25 ಕೋಟಿ ರೂ., ಮಾ.21ರಂದು 44 ಕೋಟಿ ರೂ., ಮಾ.22ರಂದು 43.33 ಕೋಟಿ ರೂ. ಹಾಗೂ ಮೇ 21ರಂದು 50 ಕೋಟಿ ರೂ. ವರ್ಗಾವಣೆಯಾಗಿದೆ. == ಹಗರಣದ ಸ್ವರೂಪ == ಈ ಹಗರಣವು ನಿಗಮದಿಂದ ಸರಿಸುಮಾರು ₹94 ಕೋಟಿ (ಸುಮಾರು $12 ಮಿಲಿಯನ್) ದುರುಪಯೋಗವನ್ನು ಒಳಗೊಂಡಿರುತ್ತದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯಲ್ಲಿನ ನಿಗಮದ ಖಾತೆಗಳಿಂದ ಹಣವನ್ನು ಅಕ್ರಮವಾಗಿ ಅನೇಕ ಖಾತೆಗಳಿಗೆ ವರ್ಗಾಯಿಸಲಾಯಿತು, ಅವುಗಳಲ್ಲಿ ಕೆಲವು ಕಾಲ್ಪನಿಕ ಘಟಕಗಳೊಂದಿಗೆ ಸಂಬಂಧ ಹೊಂದಿದ್ದವು. ಈ ಮೋಸದ ಚಟುವಟಿಕೆಯು ಕರ್ನಾಟಕದಲ್ಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಉದ್ದೇಶಿಸಲಾದ ಹಣವನ್ನು ವ್ಯವಸ್ಥಿತವಾಗಿ ದುರುಪಯೋಗಪಡಿಸಿಕೊಂಡಿದೆ. == ಚಂದ್ರಶೇಖರನ್ ರವರ ಮರಣ ಪತ್ರ == ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (52) ಶಿವಮೊಗ್ಗದ ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೋಂಡಿದ್ದಾರೆ. ಆತ್ಮಹತ್ಯೆಗೂ ಮೊದಲು ವಾಲ್ಮೀಕಿ ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ನಿಗಮದ ಅಧಿಕಾರಿಗಳ ವಿರುದ್ಧ 5 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ. ಈ ಅಕ್ರಮದಲ್ಲಿ ನಿಗಮದ ಎಂಡಿ ಜೆ.ಜಿ.ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣನವರ್, ಯೂನಿಯನ್ ಬ್ಯಾಂಕ್ನ ಮ್ಯಾನೇಜರ್ ಶುಚಿಸ್ಮಿತಾ ರವುಲ್ ಪಾತ್ರವಿದೆ ಎಂದು ಉಲ್ಲೇಖಿಸಿದ್ದಾರೆ. ನಿಗಮದ ಎಂಡಿ ಅವರು ಅನುದಾನವನ್ನು ಒತ್ತಾಯಪೂರ್ವಕವಾಗಿ ವರ್ಗಾಯಿಸಿದ್ದಾರೆ. ನಮಗೆ ಇದರ ಒಳಸಂಚು ಅರ್ಥವೇ ಆಗಲಿಲ್ಲ. ನಿಗಮಕ್ಕೆ ಇನ್ನೂ ಬ್ಯಾಂಕ್ ಪಾಸ್ಬುಕ್ ಹಾಗೂ ಚೆಕ್ ಬುಕ್ ನೀಡಿಲ್ಲ. ಈ ಕುರಿತು ಬ್ಯಾಂಕ್ ಮ್ಯಾನೇಜರ್ ಸರಿಯಾದ ಉತ್ತರ ನೀಡಿಲ್ಲ ಎಂದೂ ಉಲ್ಲೇಖಿಸಿದ್ದಾರೆ. ನಾನು ನಿಗಮಕ್ಕೆ ಮೋಸ ಮಾಡಿಲ್ಲ, ಅವ್ಯವಹಾರದಲ್ಲಿ ಭಾಗಿಯಾಗಿಲ್ಲ. ವಂಚನೆಯನ್ನೂ ಮಾಡಿಲ್ಲ. ಆದ್ರೆ, ನಿಗಮದ ಹಣವನ್ನು ನಿಯಮಬಾಹಿರವಾಗಿ ಹಣ ವರ್ಗಾವಣೆ ಆಗಿದೆ. ಇದರಲ್ಲಿ ನನ್ನ ಪಾತ್ರವಿಲ್ಲ. ಕೆಲಸದ ಒತ್ತಡದಲ್ಲಿ ನಾನು ಮಾಡಿರುವ ತಪ್ಪೇನೆಂದರೆ, ಖಾತೆಯ ಚೆಕ್ ಬುಕ್ ಮತ್ತು ಕ್ಯಾಶ್ ಪುಸ್ತಕ ಮುಕ್ತಾಯಗೊಳಿಸಿರುವುದು ಎಂದು ತಮ್ಮ ಡೆತ್‌ ನೋಟ್‌ನಲ್ಲಿ ಬರೆದಿದ್ದಾರೆ == ವಿಚಾರಣೆ ಮತ್ತು ಬಂಧನಗಳು == ನಿಗಮದ ವ್ಯವಸ್ಥಾಪಕ ನಿರ್ದೇಶಕರು ಮತ್ತು ಎಂಟು ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಹಲವು ಉನ್ನತ ಅಧಿಕಾರಿಗಳು ಪರಿಶೀಲನೆಗೆ ಒಳಗಾಗಿದ್ದಾರೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿಕೊಂಡಿದ್ದು, ಪ್ರಕರಣದ ಸಕ್ರಿಯ ತನಿಖೆ ನಡೆಸುತ್ತಿದೆ. ವಿಶೇಷ ತನಿಖಾ ತಂಡವು (ಎಸ್‌ಐಟಿ) ಅಮಾನತುಗೊಂಡಿರುವ ಎಂಡಿ ಮತ್ತು ಅಕೌಂಟ್ಸ್ ಅಧಿಕಾರಿಗಳು, ಹಾಗೆಯೇ ದುರುಪಯೋಗಪಡಿಸುವಲ್ಲಿ ಬಳಸಿದ ನಕಲಿ ಖಾತೆಗಳ ಸೃಷ್ಟಿಗೆ ಸಂಬಂಧಿಸಿದ ವ್ಯಕ್ತಿಗಳು ಸೇರಿದಂತೆ ಅನೇಕ ಬಂಧನಗಳನ್ನು ಮಾಡಿದೆ == ರಾಜಕೀಯ ಪರಿಣಾಮಗಳು == ಈ ಹಗರಣವು ಮಹತ್ವದ ರಾಜಕೀಯ ಪತನಕ್ಕೆ ಕಾರಣವಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಪ್ರತಿಪಕ್ಷ ಬಿಜೆಪಿ ಒತ್ತಾಯಿಸಿದೆ. ಸಚಿವ ಬಿ ನಾಗೇಂದ್ರ ರವರ ಹೆಸರು ಈ ಪ್ರಕರಣದಲ್ಲಿ ತಳುಕು ಹಾಕಿಕೋಂಡಿದ್ದು. ಸಚಿವರು ರಾಜೀನಾಮೆ ನೀಡಿದ್ದಾರೆ == ತನಿಖಾ ಕ್ರಮಗಳು == ಎಸ್‌ಐಟಿ ಹಲವಾರು ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಮತ್ತು ವಂಚಿಸಿದ ಹಣವನ್ನು ಹಿಂಪಡೆಯಲು ಹಣದ ಹರಿವನ್ನು ಟ್ರ್ಯಾಕ್ ಮಾಡುತ್ತಿದೆ. ಬುಡಕಟ್ಟು ಕಲ್ಯಾಣಕ್ಕಾಗಿ ಮೀಸಲಿಟ್ಟ ನಿಗಮದ ಬಜೆಟ್‌ನಿಂದ ವ್ಯವಸ್ಥಿತವಾಗಿ ಹಣವನ್ನು ಕಬಳಿಸಿ, ವಂಚನೆಯನ್ನು ಒಂದು ಅವಧಿಯಲ್ಲಿ ನಡೆಸಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.