ಬೆಂಗಳೂರು: “ನಮ್ಮ ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ, ಅವರು ಯಾವುದೇ ಹಗರಣದಲ್ಲೂ ಭಾಗಿಯಾಗಿಲ್ಲ. ಅವರ ವಿರುದ್ಧ ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಯಾವುದೇ ತನಿಖೆ ನಡೆದರೂ ಅವರು ದೋಷಮುಕ್ತರಾಗುತ್ತಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಮಂಗಳವಾರ ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು.ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಬಿಜೆಪಿಯವರು ನನ್ನ ಮೇಲೆ ಹೇಗೆ ಷಡ್ಯಂತ್ರ ರೂಪಿಸಿ ಕೇಸ್ ದಾಖಲಿಸಿ, ಜೈಲಿಗೆ ಹಾಕಿದರೋ ಅದೇ ರೀತಿ ನಮ್ಮ ಮುಖ್ಯಮಂತ್ರಿಗಳ ವಿರುದ್ಧವೂ ಷಡ್ಯಂತ್ರ ರೂಪಿಸುತ್ತಿದ್ದಾರೆ.  ಭಗವಂತನ ಕೃಪೆಯಿಂದ ನಾನು ಜೈಲಿಗೆ ಹೋದ ಪ್ರಕರಣ ಕೂಡ ವಜಾಗೊಂಡಿದೆ” ಎಂದು ತಿಳಿಸಿದರು.“ಮುಖ್ಯಮಂತ್ರಿಗಳು ಯಾವುದೇ ತಪ್ಪು ಮಾಡಿಲ್ಲ.  ನಾವೆಲ್ಲರೂ ಮುಖ್ಯಮಂತ್ರಿಗಳ ಜತೆಗೆ ನಿಲ್ಲುತ್ತೇವೆ. ಹೋರಾಟ ಮುಂದುವರಿಸುತ್ತೇವೆ.  ಅವರು ಮಾಡಿರುವ ಕೆಲಸ, ರಾಜ್ಯದ ಜನರಿಗೆ ನೀಡಿರುವ ಯೋಜನೆಯನ್ನು ಬಿಜೆಪಿಯವರಿಂದ ಸಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರ ವಿರುದ್ಧ ಷಡ್ಯಂತ್ರ ರೂಪಿಸುತ್ತಿದ್ದಾರೆ. ನಮಗೆ ಈ ನೆಲದ ಕಾನೂನಿನ ಮೇಲೆ ಗೌರವವಿದೆ. ನ್ಯಾಯ ಸಿಗುತ್ತದೆ ಎಂಬ ನಂಬಿಕೆಯಿದೆ" ಎಂದು ತಿಳಿಸಿದರು.