ಸತೀಶ್ ಜಾರಕಿಹೊಳಿಬೆಳಗಾವಿ : ʼಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗಿದ್ದು, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಕಾನೂನು ರೀತಿಯಲ್ಲಿ ಹೋರಾಟ ಮಾಡಲಿದ್ದೇವೆ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂಬ ಬಿಜೆಪಿ ಹೋರಾಟ ಅರ್ಥಹೀನ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.  ಮಂಗಳವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಹೈಕೋರ್ಟ್ ತನಿಖೆಗೆ ಆದೇಶ ನೀಡಿದೆ. ತನಿಖೆಯಾಗಿ ಅದರಲ್ಲಿ ಸಿದ್ದರಾಮಯ್ಯನವರು ತಪ್ಪು ಮಾಡಿದ್ದಾರೆಂದು ಕಂಡುಬಂದರೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ. ಆದರೆ, ತನಿಖೆಗೂ ಮೊದಲೇ ರಾಜೀನಾಮೆ ಪ್ರಶ್ನೆ ಉದ್ಭವಿಸುವುದಿಲ್ಲ ಎಂದರು.  ಮುಡಾ ನಿವೇಶನ ಹಂಚಿಕೆ ಪ್ರಕರಣ ತನಿಖೆಯಾಗಲಿ. ಅಲ್ಲಿಯವರೆಗೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಎಲ್ಲ ಶಾಸಕರದ್ದು, ಹೈಕಮಾಂಡ್‍ನದ್ದು ಇದೇ ಆಗ್ರಹ. ಹೀಗಾಗಿ, ಯಾರೂ ಇದೀಗ ಮುಖ್ಯಮಂತ್ರಿ ರೇಸ್‍ನಲ್ಲಿ ಇಲ್ಲ. ಹೈಕೋರ್ಟ್ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠ ಅಥವಾ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದರು.  