ಹುಬ್ಬಳ್ಳಿ : ವಿಧಾನಪರಿಷತ್ ನ​ ಬಿಜೆಪಿ ಸದಸ್ಯ ಕೆಪಿ ನಂಜುಂಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣಾ ಹೊಸ್ತಿಲಿನಲ್ಲಿ ಬಿಜೆಪಿ ಮತ್ತೊಂದು ಆಘಾತ ಎದುರಾಗಿದೆ. ಅವರು ಇಂದು(ಎ.23) ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿಗೆ ಅವರ ಹುಬ್ಬಳ್ಳಿಯ ಮನೆಗೆ ತೆರಳಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.ರಾಜೀನಾಮೆ ನೀಡಿದ ನಂತರ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಿರ್ಲಕ್ಷ್ಯಕ್ಕೊಳಗಾದ‌ ಕಾಯಕ ಸಮಾಜದ ಏಳಿಗೆಗೆ ರಾಜಕೀಯಕ್ಕೆ ಬಂದೆ. ಕಾಯಕ ಸಮಾಜ ಉಳಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ ಬಿಜೆಪಿಗೆ ಬಂದೆ. ಆದರೆ, ಪಕ್ಷದ ಮುಖಂಡರು ಒಂದು ದಿನವೂ ಕಾಯಕ ಸಮಾಜದ ಬಗ್ಗೆ ಮಾತಾಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ನಮ್ಮ ಸಮುದಾಯಕ್ಕೆ ಯಾವುದೇ ರೀತಿ ಸ್ಪಂದಿಸಿಲ್ಲ. ನನ್ನನ್ನು ಎಂಎಲ್‌ಸಿ ಮಾಡಿ ಸುಮ್ಮನಾದರು, ಏನೂ ಜವಾಬ್ದಾರಿ ಕೊಡಲಿಲ್ಲ. ಆದ್ದರಿಂದ ನಾಳೆ ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ಪಕ್ಷಕ್ಕೆ​ ಸೇರುತ್ತಿದ್ದೇನೆ ಎಂದು ಸ್ಪಷ್ಟನೆ ನೀಡಿದರು.