ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿರುವುದು ವರದಿಯಾಗಿದೆ.ಧರ್ಮ, ಭಾಷೆ, ಜಾತಿ, ಸೌಹಾರ್ದತೆ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ಗಾಂಧಿನಗರದ ಚುನಾವಣಾ ನೋಡಲ್ ಅಧಿಕಾರಿ ಅರ್ಜುನ್ ಆಯೂರ್ ಎಂಬುವರು ನೀಡಿದ ದೂರಿನನ್ವಯ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ಫಾರ್ ಕರ್ನಾಟಕ ಎಕ್ಸ್ ಖಾತೆ ಮೇಲೆ ಎಫ್‍ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರು ಆಗಿರುವ ಬಿ.ವೈ.ವಿಜಯೇಂದ್ರ ಹಾಗೂ ಬಿಜೆಪಿ ಪಕ್ಷದ ಎಕ್ಸ್ ಖಾತೆ ಉಸ್ತುವಾರಿ ವಹಿಸಿಕೊಂಡಿರುವವರು ಧರ್ಮ ಹಾಗೂ ಜಾತಿಗಳ ಜನರ ನಡುವೆ ದ್ವೇಷ ಬಿತ್ತುವ ರೀತಿಯಲ್ಲಿ ಹೇಳಿಕೆಗಳನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.   